Political News: 'ಘಜ್ನಿ ಮತ್ತು ಮೋದಿ-ಅಮಿತ್ ಶಾ ನಡುವೆ ಏನು ವ್ಯತ್ಯಾಸ? ಬಿ.ಕೆ.ಹರಿಪ್ರಸಾದ್ ಪ್ರಶ್ನೆ

Published : Jun 24, 2026, 06:39 PM IST
BK Hariprasad

ಸಾರಾಂಶ

Karnataka Politics: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಬಿಜೆಪಿ, ಆರ್‌ಎಸ್‌ಎಸ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿ (ಜೂ.24): ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನಾಯಕರು ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧವೂ ಕಿಡಿಕಾರಿದರು.

ಘಜ್ನಿ ಮಹಮ್ಮದ್ ದೇಶವನ್ನು 17 ಬಾರಿ ಲೂಟಿ ಮಾಡಿದ್ದ. ಆದರೆ ರಾಮಮಂದಿರ ನಿರ್ಮಾಣದ ಹೆಸರಿನಲ್ಲಿ ಬಿಜೆಪಿ ಜನರ ಭಾವನೆಗಳನ್ನು ದುರುಪಯೋಗ ಮಾಡಿಕೊಂಡು ಲೂಟಿ ನಡೆಸಿದೆ ಎಂದು ಹರಿಪ್ರಸಾದ್ ಟೀಕಿಸಿದರು. 'ಘಜ್ನಿ ಮತ್ತು ಮೋದಿ-ಅಮಿತ್ ಶಾ ನಡುವೆ ಏನು ವ್ಯತ್ಯಾಸ?' ಎಂದು ಪ್ರಶ್ನಿಸಿದ ಅವರು, ದೇಶದಲ್ಲಿ ಯಾವುದೇ ಅಧಿಕೃತ ಧರ್ಮ ಇಲ್ಲ. ಸರ್ಕಾರ ಸಂವಿಧಾನದ ಚೌಕಟ್ಟಿನಲ್ಲಿಯೇ ನಡೆಯಬೇಕು ಎಂದು ಹೇಳಿದರು.

ಆರ್‌ಎಸ್‌ಎಸ್ ಸಂವಿಧಾನ ಮತ್ತು ಜಾತ್ಯಾತೀತ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದ ಹರಿಪ್ರಸಾದ್, ಸಂಘಟನೆ ಕೂಡ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು. 'ಪಾದಚಾರಿ ಮಾರ್ಗದಲ್ಲಿ ಅಂಗಡಿ ಇಟ್ಟವರನ್ನೇ ಪೊಲೀಸರು ನೋಂದಣಿ ಇಲ್ಲವೆಂದು ಹಿಡಿದುಕೊಂಡು ಹೋಗುತ್ತಾರೆ. ಹಾಗಿದ್ದರೆ ಆರ್‌ಎಸ್‌ಎಸ್‌ಗೆ ನೋಂದಣಿ ಮಾಡಿಸಿಕೊಳ್ಳಲು ಏನು ಕಷ್ಟ?' ಎಂದು ಪ್ರಶ್ನಿಸಿದರು.

ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಕುರಿತು ಮಾತನಾಡಿದ ಅವರು, ಮೂರು ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಇದರಿಂದ ಅನೇಕ ವಿದ್ಯಾರ್ಥಿಗಳ ಬದುಕು ಹಾಳಾಗಿದ್ದು, ಕೆಲವರು ಆತ್ಮ*ಹ*ತ್ಯೆಯನ್ನೂ ಮಾಡಿಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ದೇಶದ ಶಿಕ್ಷಣ ವ್ಯವಸ್ಥೆ ಇಂತಹ ದುಸ್ಥಿತಿಗೆ ತಲುಪಬಾರದಿತ್ತು ಎಂದರು. ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದ ಹರಿಪ್ರಸಾದ್, ಬಿಜೆಪಿ ಅಧಿಕಾರಕ್ಕೆ ಬಂದಾಗ ‘ಅಚ್ಚೇ ದಿನ್’ ತರುತ್ತೇವೆ ಎಂದಿದ್ದರು. ಆದರೆ ಈಗ ದೇಶದಲ್ಲಿ ‘ರಾಹುಕಾಲ’ ಆರಂಭವಾಗಿದೆ ಎಂದು ವ್ಯಂಗ್ಯವಾಡಿದರು.

ರಾಜ್ಯದ 19 ಬಿಜೆಪಿ ಲೋಕಸಭಾ ಸದಸ್ಯರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ ಅವರು, ರಾಜ್ಯದ ಸಮಸ್ಯೆಗಳ ಬಗ್ಗೆ ಒಬ್ಬರೂ ಧ್ವನಿ ಎತ್ತುತ್ತಿಲ್ಲ ಎಂದು ಆರೋಪಿಸಿದರು. ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಒಪ್ಪಿಗೆ ನೀಡಿದೆ ಎಂದು ಹೇಳಲಾಗಿತ್ತು. ಆದರೆ ಅದು ಎಲ್ಲಿದೆ ಎಂದು ಇನ್ನೂ ಹುಡುಕುತ್ತಿದ್ದೇವೆ ಎಂದು ಟೀಕಿಸಿದರು. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ನೀಡುವುದಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದರು. ಆದರೆ ಆ ಭರವಸೆಯ ಬಗ್ಗೆ ಈಗ ಯಾರೂ ಮಾತನಾಡುತ್ತಿಲ್ಲ ಎಂದು ಹರಿಪ್ರಸಾದ್ ಪ್ರಶ್ನಿಸಿದರು.

ಬಿಜೆಪಿ ರಾಜಕೀಯ ಮಾಡುತ್ತಿದೆ

ಇದೇ ವೇಳೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ, ಚುನಾವಣೆ ಸಂದರ್ಭಗಳಲ್ಲಿ ಪಾಕಿಸ್ತಾನ, ಹಲಾಲ್, ಚಿಕನ್ ಮೊದಲಾದ ವಿಷಯಗಳನ್ನು ಮುಂದಿಟ್ಟುಕೊಂಡು ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಬಿಡದಿ ಟೌನ್‌ಶಿಪ್ ವಿಚಾರದಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಹೇಳಿದ ಅವರು, ಜೆಡಿಎಸ್ ಸರ್ಕಾರದ ಅವಧಿಯಲ್ಲೇ ಆ ಯೋಜನೆಗೆ ಹಸಿರು ನಿಶಾನೆ ತೋರಿಸಲಾಗಿತ್ತು ಎಂದು ಸ್ಪಷ್ಟಪಡಿಸಿದರು. ಒಟ್ಟಾರೆ, ಹುಬ್ಬಳ್ಳಿಯಲ್ಲಿ ಮಾತನಾಡಿದ ಬಿ.ಕೆ. ಹರಿಪ್ರಸಾದ್, ಕೇಂದ್ರ ಸರ್ಕಾರ, ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಹಲವು ರಾಜಕೀಯ ಪ್ರಶ್ನೆಗಳನ್ನು ಎತ್ತಿದ್ದಾರೆ.

PREV
Read more Articles on
click me!

Recommended Stories

ಫುಟ್‌ಪಾತ್ ಜನರ ಆಸ್ತಿ, ಆದ್ರೆ ಒತ್ತುವರಿ ಸಹಿಸಲ್ಲ: ಜುಲೈ 1ರ ಗಡುವು ನೀಡಿ ಸಚಿವ ಕೃಷ್ಣಭೈರೇಗೌಡ ಖಡಕ್ ಎಚ್ಚರಿಕೆ!
Indiranagar Flyover: ಬೆಂಗಳೂರಿನ ₹1,300 ಕೋಟಿ ಇಂದಿರಾನಗರ ಫ್ಲೈಓವರ್ ಯೋಜನೆ; ಆಸ್ತಿ ಮಾಲೀಕರಿಗೆ ತೆರಿಗೆ ಬರೆ?