ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ! ಪೊಲೀಸ್ ಸಹಾಯವಾಣಿ 112ಕ್ಕೆ ಕರೆ ಬರ್ತಿದ್ದಂತೆ ಅಲರ್ಟ್

Published : Mar 04, 2026, 06:34 PM IST
Davanagere Deputy Commissioner residence bomb threat

ಸಾರಾಂಶ

ದಾವಣಗೆರೆ ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದು, ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ತಪಾಸಣೆ ನಡೆಸಿದಾಗ ಯಾವುದೇ ಸ್ಫೋಟಕ ಪತ್ತೆಯಾಗಲಿಲ್ಲ.  

ದಾವಣಗೆರೆ: ದಾವಣಗೆರೆ ಜಿಲ್ಲೆಯ ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸಕ್ಕೆ ಮಂಗಳವಾರ ಹುಸಿ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಪೊಲೀಸ್ ಸಹಾಯವಾಣಿ 112ಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ನಗರದ ರಿಂಗ್ ರೋಡ್‌ನಲ್ಲಿರುವ ಜಿಲ್ಲಾಧಿಕಾರಿಗಳ ಮನೆಗೆ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಹಾಕಿದ್ದಾನೆ.

ತಕ್ಷಣವೇ ಎಚ್ಚೆತ್ತ ಪೊಲೀಸರು ಸ್ಥಳಕ್ಕೆ ಧಾವಿಸಿ ಸಂಪೂರ್ಣ ಪ್ರದೇಶವನ್ನು ಭದ್ರತಾ ವಲಯಕ್ಕೆ ತೆಗೆದುಕೊಂಡರು. ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಯನ್ನು ಕರೆಸಿ ಮನೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸೂಕ್ಷ್ಮ ತಪಾಸಣೆ ನಡೆಸಲಾಯಿತು.

ಸಂಪೂರ್ಣ ತಲಾಶ್, ಏನೂ ಪತ್ತೆಯಾಗಿಲ್ಲ

ಪೊಲೀಸರು ಮನೆ ಒಳಭಾಗ, ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸಂಪೂರ್ಣವಾಗಿ ಪರಿಶೀಲಿಸಿದರೂ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಪರಿಶೀಲನೆಯ ಬಳಿಕ ಇದು ಹುಸಿ ಬಾಂಬ್ ಕರೆ ಎಂದು ದೃಢಪಟ್ಟಿದ್ದು, ಭದ್ರತಾ ಸಿಬ್ಬಂದಿ ವಾಪಸ್ ತೆರಳಿದರು.

ತಿಂಗಳ ಅಂತರದಲ್ಲಿ ಮೂರನೇ ಘಟನೆ

ಗಮನಾರ್ಹವೆಂದರೆ, ಕಳೆದ ಒಂದು ತಿಂಗಳ ಅವಧಿಯಲ್ಲಿ ದಾವಣಗೆರೆಯಲ್ಲಿ ಈ ರೀತಿಯ ಹುಸಿ ಬಾಂಬ್ ಬೆದರಿಕೆ ಘಟನೆಗಳು ಮೂರನೇ ಬಾರಿ ಸಂಭವಿಸುತ್ತಿವೆ. ಸುಮಾರು ಒಂದು ತಿಂಗಳ ಹಿಂದೆ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಅದಾದ ನಂತರ ಜಿಲ್ಲಾ ನ್ಯಾಯಾಲಯಕ್ಕೂ ಇದೇ ರೀತಿಯ ಕರೆ ಮೂಲಕ ಆತಂಕ ಸೃಷ್ಟಿಸಲಾಗಿತ್ತು. ಇದೀಗ ಜಿಲ್ಲಾಧಿಕಾರಿ ನಿವಾಸವನ್ನೇ ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಬೆದರಿಕೆ ಹಾಕಿರುವುದು ಭದ್ರತಾ ವ್ಯವಸ್ಥೆಗಳ ಬಗ್ಗೆ ಚಿಂತೆಗೆ ಕಾರಣವಾಗಿದೆ.

ಕಿಡಿಗೇಡಿಗಳ ಶೋಧಕ್ಕೆ ಕ್ರಮ

ಹುಸಿ ಕರೆ ಮಾಡಿದ ವ್ಯಕ್ತಿಯನ್ನು ಪತ್ತೆಹಚ್ಚಲು ಪೊಲೀಸರು ತಾಂತ್ರಿಕ ತಂಡದ ಸಹಾಯದಿಂದ ತನಿಖೆ ಆರಂಭಿಸಿದ್ದಾರೆ. 112 ಸಹಾಯವಾಣಿಗೆ ಬಂದ ಕರೆ ಯಾವ ಸ್ಥಳದಿಂದ ಮಾಡಲಾಗಿದೆ ಎಂಬುದರ ಕುರಿತು ಸೈಬರ್ ತಜ್ಞರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ನಿರಂತರವಾಗಿ ಸಾರ್ವಜನಿಕ ಕಚೇರಿಗಳು ಮತ್ತು ಪ್ರಮುಖ ಅಧಿಕಾರಿಗಳ ನಿವಾಸಗಳನ್ನು ಗುರಿಯಾಗಿಸಿಕೊಂಡು ಹುಸಿ ಬೆದರಿಕೆ ಕರೆಗಳು ಬರುತ್ತಿರುವ ಹಿನ್ನೆಲೆ, ಇಂತಹ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ವಲಯದಿಂದ ಆಗ್ರಹ ವ್ಯಕ್ತವಾಗುತ್ತಿದೆ.

PREV
Read more Articles on
click me!

Recommended Stories

ಕೋಮಲಾಪುರ ಸರ್ಕಾರಿ ಶಾಲೆಯಲ್ಲಿ ಕೋಲಾಹಲ ಎಬ್ಬಿಸಿದ ಹೆಡ್ ಮಾಸ್ಟರ್ 2ನೇ ಹೆಂಡ್ತಿ; ಮಕ್ಕಳಿಲ್ಲದ ರೂಮಿನಲ್ಲಿ ರಂಪಾಟ!
ಚಂದ್ರಗುತ್ತಿಯಲ್ಲಿ ಕ್ರಿ.ಶ. 1350ರ ಕಾಲಘಟ್ಟದ ವೀರಗಲ್ಲು ಪತ್ತೆ, ಯುದ್ಧ ಗೆದ್ದ ವಿಜಯನಗರ ಕಾಲದ ಯೋಧನ ಬಣ್ಣನೆ!