ಬೆಳಗಾವಿಯಲ್ಲಿ ನೆರೆ ಸಂತ್ರಸ್ತರ ಅಹವಾಲು ಆಲಿಸಿದ ಸಿಎಂ

By Web DeskFirst Published Oct 5, 2019, 12:01 PM IST
Highlights

ಪ್ರವಾಹ ಪೀಡಿತ ಉತ್ತರ ಕರ್ನಾಟಕ ಜಿಲ್ಲೆಗಳ ಪ್ರವಾಸದಲ್ಲಿರುವ ಸಿಎಂ ಬಿ.ಎಸ್‌.ಯಡಿಯೂರಪ್ಪ ಬೆಳಗಾವಿ ಮತ್ತು ಬಾಗಲಕೋಟೆಯಲ್ಲಿ ಶುಕ್ರವಾರ ಇಡೀ ದಿನ ನೆರೆ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನೆ, ಸಂತ್ರಸ್ತರ ಸಮಸ್ಯೆ ಆಲಿಸಿದ್ದಾರೆ| ಅಥಣಿ ತಾಲೂಕಿನ ಪ್ರವಾಹ ಪೀಡಿತ ಪ್ರದೇಶ ಹಾಗೂ ಬೆಳೆ ಹಾನಿ ವೀಕ್ಷಣೆ ಮಾಡಿ, ದರೂರು ಗ್ರಾಮಕ್ಕೆ ಭೇಟಿ ಕೊಟ್ಟರು| ಅಲ್ಲೂ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪ್ರವಾಹದಿಂದ ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿದರು|

ಬೆಳಗಾವಿ(ಅ.5): ಪ್ರವಾಹ ಪೀಡಿತ ಉತ್ತರ ಕರ್ನಾಟಕ ಜಿಲ್ಲೆಗಳ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬೆಳಗಾವಿ ಮತ್ತು ಬಾಗಲಕೋಟೆಯಲ್ಲಿ ಶುಕ್ರವಾರ ಇಡೀ ದಿನ ನೆರೆ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನೆ, ಸಂತ್ರಸ್ತರ ಸಮಸ್ಯೆ ಆಲಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಅವರು 10.30ಕ್ಕೆ ಚಿಕ್ಕೋಡಿಗೆ ಪ್ರಯಾಣ ಬೆಳೆಸಿದರು. ಮಧ್ಯಾಹ್ನ 12ಕ್ಕೆ ಅಥಣಿ ತಾಲೂಕಿನ ಪ್ರವಾಹ ಪೀಡಿತ ಪ್ರದೇಶ ಹಾಗೂ ಬೆಳೆ ಹಾನಿ ವೀಕ್ಷಣೆ ಮಾಡಿ, ದರೂರು ಗ್ರಾಮಕ್ಕೆ ಭೇಟಿ ಕೊಟ್ಟರು. ಅಲ್ಲೂ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪ್ರವಾಹದಿಂದ ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ನಂತರ ಅಲ್ಲಿಂದ ರಸ್ತೆ ಮಾರ್ಗವಾಗಿ ಮುಗಳಖೋಡ ಮಠಕ್ಕೆ ಭೇಟಿ ನೀಡಿ, ಮಧ್ಯಾಹ್ನ 3.30ಕ್ಕೆ ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರಕ್ಕೆ ತೆರಳಿದರು. ಮಾರ್ಗ ಮಧ್ಯೆ ಅಲ್ಲಲ್ಲಿ ಬೆಳೆ ಹಾನಿ ವೀಕ್ಷಿಸಿದರು. ಅದಾದ ಬಳಿಕ ಬಾಗಲಕೋಟೆಯ ಅಂಬೇಡ್ಕರ್‌ ಭವನದಲ್ಲಿ ಆಯೋಜಿಸಿದ್ದ ಸರ್ಕಾರದ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಮಳೆಯಿಂದ ಭಾಷಣ ಮೊಟಕು: 

ದಿಢೀರ್‌ ಸುರಿದ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದರೂರ ಗ್ರಾಮದಲ್ಲಿ ನೆರೆ ಸಂತ್ರಸ್ತರಿಗೆ ಪರಿಹಾರಧನ ಚೆಕ್‌ ವಿತರಣೆಗೆ ಆಗಮಿಸಿದ್ದ ಯಡಿಯೂರಪ್ಪ ಅವರು ಮಳೆಯಿಂದಾಗಿ ತಮ್ಮ ಭಾಷಣ ಮೊಟಕುಗೊಳಿಸಬೇಕಾಯಿತು. ಯಡಿಯೂರಪ್ಪ ಅವರ ಆಗಮನದ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಬಿಸಿಲಿನಲ್ಲಿ ಗ್ರಾಮಸ್ಥರು ಕಾಯ್ದು ಕಾಯ್ದು ಸುಸ್ತಾಗಿದ್ದರು. ಸಿಎಂ ಆಗಮಿಸಿ ಭಾಷಣ ಆರಂಭಿಸುತ್ತಿದ್ದಂತೆ ಜಿಟಿ ಜಿಟಿ ಮಳೆ ಸುರಿಯತೊಡಗಿತು. ಇದರಿಂದಾಗಿ ಯಡಿಯೂರಪ್ಪ ತಮ್ಮ ಭಾಷಣವನ್ನು ಅರ್ಧಕ್ಕೆ ಮೊಟಕುಗೊಳಿಸಬೇಕಾಯಿತು.
 

click me!