
ಚಿಕ್ಕಮಗಳೂರು (ಮಾ.18): ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ದೊಡ್ಡ ಸಂಚಲನವೊಂದು ಸೃಷ್ಟಿಯಾಗಿದೆ. ಜಿಲ್ಲೆಯ ಪ್ರಭಾವಿ ಹಿಂದೂ ಮುಖಂಡರು ಮತ್ತು ಬಿಜೆಪಿ ಪದಾಧಿಕಾರಿಗಳ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಗಡಿಪಾರಿನ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಹಾಗೂ ಭಜರಂಗದಳದ ಪ್ರಮುಖ ಮುಖಂಡ ಸೇರಿದಂತೆ ಒಟ್ಟು ಆರು ಜನರನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಪೊಲೀಸ್ ಇಲಾಖೆ ಉಪ ವಿಭಾಗಾಧಿಕಾರಿಗಳಿಗೆ (AC) ಶಿಫಾರಸ್ಸು ಪತ್ರ ರವಾನಿಸಿದೆ.
ಪೊಲೀಸ್ ಇಲಾಖೆ ನೀಡಿರುವ ಪಟ್ಟಿಯಲ್ಲಿ ಪ್ರಮುಖವಾಗಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಹಾಗೂ ಭಜರಂಗದಳದ ಹಾಸನ ವಿಭಾಗದ ಸಂಯೋಜಕ ಶ್ಯಾಮ್ ವಿ ಗೌಡ ಅವರ ಹೆಸರುಗಳಿವೆ. ಇವರೊಂದಿಗೆ ವಿವಿಧ ಕೋಮು ಸಂಘರ್ಷ ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ನಾಲ್ವರು ಮುಸ್ಲಿಂ ಮುಖಂಡರ ಹೆಸರನ್ನೂ ಶಿಫಾರಸ್ಸು ಮಾಡಲಾಗಿದೆ. ಜೋಹರ್, ಚಾಂದ್, ಇಬ್ರಾಹಿಂ ಹಾಗೂ ಇಮ್ರಾನ್ ಎಂಬುವವರಿಗೂ ಗಡಿಪಾರು ಭೀತಿ ಎದುರಾಗಿದೆ.
ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಅವರ ಮೇಲೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 14 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಇಲಾಖೆ ತನ್ನ ಶಿಫಾರಸ್ಸು ಪತ್ರದಲ್ಲಿ ಉಲ್ಲೇಖಿಸಿದೆ. ಈ ಪ್ರಕರಣಗಳನ್ನು ಆಧಾರವಾಗಿಟ್ಟುಕೊಂಡು ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಇವರನ್ನು ಜಿಲ್ಲೆಯಿಂದ ಹೊರಹಾಕುವಂತೆ (Externment) ಚಿಕ್ಕಮಗಳೂರು ಉಪ ವಿಭಾಗಾಧಿಕಾರಿಗಳಿಗೆ ಮನವಿ ಮಾಡಲಾಗಿದೆ.
ವಿಶೇಷವೆಂದರೆ, ಯುಗಾದಿ ಹಬ್ಬದ ಸಂಭ್ರಮದ ಹೊತ್ತಲ್ಲೇ ಈ ಗಡಿಪಾರು ಶಿಫಾರಸ್ಸಿನ ನೋಟಿಸ್ ಜಾರಿಯಾಗಿರುವುದು ಹಿಂದೂ ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಉದ್ದೇಶಪೂರ್ವಕವಾಗಿ ಹಬ್ಬದ ಸಮಯದಲ್ಲಿ ನಮ್ಮ ಮುಖಂಡರನ್ನು ಗುರಿಯಾಗಿಸಲಾಗುತ್ತಿದೆ ಎಂದು ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರು ಕಿಡಿಕಾರಿದ್ದಾರೆ. ಸರ್ಕಾರದ ಒತ್ತಡಕ್ಕೆ ಮಣಿದು ಪೊಲೀಸ್ ಇಲಾಖೆ ಇಂತಹ ಕ್ರಮಕ್ಕೆ ಮುಂದಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.
ಮುಂದಿನ ಪ್ರಕ್ರಿಯೆ ಏನು?
ಪೊಲೀಸ್ ಇಲಾಖೆಯ ಶಿಫಾರಸ್ಸನ್ನು ಸ್ವೀಕರಿಸಿರುವ ಚಿಕ್ಕಮಗಳೂರು ಉಪ ವಿಭಾಗಾಧಿಕಾರಿಗಳು (AC), ಈಗ ಈ ಆರು ಜನರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲಿದ್ದಾರೆ. ಈ ವಿಚಾರಣೆಯ ವೇಳೆ ಆರೋಪಿಗಳು ಅಥವಾ ಅವರ ಪರ ವಕೀಲರು ತಮ್ಮ ವಾದ ಮಂಡಿಸಲು ಅವಕಾಶವಿರುತ್ತದೆ. ವಿಚಾರಣೆಯ ನಂತರ, ಜಿಲ್ಲೆಯಲ್ಲಿ ಇವರಿಂದ ಶಾಂತಿಗೆ ಭಂಗ ಉಂಟಾಗುತ್ತದೆಯೇ ಎಂಬುದನ್ನು ಪರಿಶೀಲಿಸಿ, ಎಸಿ ಅವರು ಗಡಿಪಾರು ಮಾಡುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.