
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದ ಮಹತ್ವದ ಸಭೆ ಇಂದು ನಡೆಯಬೇಕಾಗಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೈರು ಹಾಜರಾತಿಯಿಂದ ಸಭೆಯಲ್ಲಿ ಮಹತ್ವದ ಬದಲಾವಣೆಗಳು ನಡೆದಿವೆ. ಜೂನ್ನಲ್ಲಿ ನಡೆಸಬೇಕೆಂದು ಆಯೋಗ ಪಟ್ಟು ಹಿಡಿದಿದೆ. ರಾಜ್ಯ ಸರ್ಕಾರ ಮಾತ್ರ ಸೆಪ್ಟೆಂಬರ್ ತನಕ ಕಾಲಾವಕಾಶ ಕೇಳಿದೆ. ರಾಜ್ಯ ಚುನಾವಣಾ ಆಯೋಗ ಕರೆದಿದ್ದ ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಬೇಕಾಗಿತ್ತು. ಆದರೆ, ಇಬ್ಬರು ನಾಯಕರು ಪೂರ್ವನಿಗದಿತ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರಿಂದ ಸಭೆಗೆ ಗೈರಾಗಿದ್ದಾರೆ. ರಾಜ್ಯ ಚುನಾವಣಾ ಆಯುಕ್ತ ಜಿ.ಎ ಸಂಗ್ರೇಶಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಕೂಡ ಅಭೆಯಲ್ಲಿ ಭಾಗವಹಿಸಿದ್ದಾರೆ.
ಮೊದಲು ವಿಧಾನಸೌಧದಲ್ಲಿ ನಡೆಯಬೇಕಿದ್ದ ಈ ಸಭೆಯನ್ನು ನಂತರ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಸ್ಥಳಾಂತರಿಸಲಾಗಿದೆ. ಸಿಎಂ ಮತ್ತು ಡಿಸಿಎಂ ಗೈರಾಗಿದ್ದರೂ, ಅಧಿಕಾರಿಗಳು ಸಭೆಯನ್ನು ಮುಂದುವರಿಸಲು ನಿರ್ಧರಿಸಿದ್ದಾರೆ. ಸಭೆಯಲ್ಲಿ ರಾಜ್ಯ ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಕೂಡ ಭಾಗವಹಿಸುತ್ತಿದ್ದಾರೆ. ಜಿಬಿಎ ಚುನಾವಣೆ ಕುರಿತ ಸಿದ್ಧತೆಗಳು, ವೇಳಾಪಟ್ಟಿ ಹಾಗೂ ಆಡಳಿತಾತ್ಮಕ ವಿಚಾರಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.
ಸಭೆಗೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಹಾಜರಾಗದ ಹಿನ್ನೆಲೆಯಲ್ಲಿ, ಅವರ ಪರವಾಗಿ ಜಿಬಿಎ ಮುಖ್ಯ ಆಯುಕ್ತರು ಭಾಗವಹಿಸಿದ್ದಾರೆ. ಸಭೆಗೆ ಹಾಜರಾಗುವಂತೆ ಆಯೋಗದಿಂದ ಸಿಎಂ, ಡಿಸಿಎಂ ಸೇರಿದಂತೆ ಜಿಬಿಎ ಸದಸ್ಯರಿಗೆ ಆಹ್ವಾನ ನೀಡಲಾಗಿತ್ತು. ಆದರೂ ಪ್ರಮುಖ ರಾಜಕೀಯ ನಾಯಕರ ಗೈರು ಗಮನಾರ್ಹವಾಗಿದೆ.
ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ಕುರಿತಾಗಿ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಚುನಾವಣಾ ದಿನಾಂಕ ನಿಗದಿ ವಿಚಾರ ಮಹತ್ವ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ನಡೆದಿರುವ ಸಭೆ ರಾಜಕೀಯವಾಗಿ ಕೂಡ ಪ್ರಾಮುಖ್ಯತೆ ಪಡೆದುಕೊಂಡಿದೆ.
ಒಟ್ಟಿನಲ್ಲಿ, ಸಿಎಂ ಮತ್ತು ಡಿಸಿಎಂ ಗೈರಾಗಿದ್ದರೂ ಅಧಿಕಾರಿಗಳು ಸಭೆಯನ್ನು ಮುಂದುವರಿಸಿರುವುದು ಚುನಾವಣಾ ಪ್ರಕ್ರಿಯೆಗೆ ವೇಗ ನೀಡುವ ಪ್ರಯತ್ನವೆಂದು ವಿಶ್ಲೇಷಿಸಲಾಗುತ್ತಿದೆ.