ಸಮುದ್ರ ಪ್ರದೇಶದಲ್ಲಿ ಸಾವಿನ ಪ್ರಮಾಣ ಶೂನ್ಯಕ್ಕೆ ತರಲು ಸಂಘಟಿತ ಪ್ರಯತ್ನ ಅಗತ್ಯ: ಜಿಲ್ಲಾಧಿಕಾರಿ ಕೂರ್ಮಾರಾವ್

By Gowthami KFirst Published Feb 14, 2023, 12:44 PM IST
Highlights

ಉಡುಪಿ ಜಿಲ್ಲೆಯ ಕರಾವಳಿ ಪ್ರದೇಶದಲ್ಲಿ ಗರಿಷ್ಠ ಭದ್ರತೆ ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ಸಮುದ್ರದಲ್ಲಿ ಸಂಭವಿಸುವ ಸಾವುಗಳನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ, ಕರಾವಳಿ ಕಾವಲು ಪೊಲೀಸ್, ಮೀನುಗಾರಿಕಾ ಇಲಾಖೆ, ಮೀನುಗಾರರು ಮತ್ತು ಎಲ್ಲಾ ಸ್ಥಳೀಯ ಸಂಸ್ಥೆಗಳು ಸಂಘಟಿತವಾಗಿ ಪ್ರಯತ್ನಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದ್ದಾರೆ.

ಉಡುಪಿ (ಫೆ.14): ಜಿಲ್ಲೆಯ ಕರಾವಳಿ ಪ್ರದೇಶದಲ್ಲಿ ಗರಿಷ್ಠ ಭದ್ರತೆ ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ಸಮುದ್ರದಲ್ಲಿ ಸಂಭವಿಸುವ ಸಾವುಗಳನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ, ಕರಾವಳಿ ಕಾವಲು ಪೊಲೀಸ್, ಮೀನುಗಾರಿಕಾ ಇಲಾಖೆ, ಮೀನುಗಾರರು ಮತ್ತು ಎಲ್ಲಾ ಸ್ಥಳೀಯ ಸಂಸ್ಥೆಗಳು ಸಂಘಟಿತವಾಗಿ ಪ್ರಯತ್ನಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಇಂದು ಮಲ್ಪೆಯ ಕರಾವಳಿ ಕಾವಲು ಪೊಲೀಸ್ ಕಚೇರಿಯಲ್ಲಿ ನಡೆದ, ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಬೀಚ್‌ಗಳಲ್ಲಿ ಮತ್ತು ಸಮುದ್ರದಲ್ಲಿ  ಪ್ರವಾಸಿಗರು ಮತ್ತು ಮೀನುಗಾರಿಕೆಗೆ ತೆರಳುವ ಮೀನುಗಾರರಿಗೆ ಯಾವುದೇ ಅಪಾಯವಾದಲ್ಲಿ ತಕ್ಷಣವೇ ಅವರನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ವಿಧದ ತರಬೇತಿಯನ್ನು ಕರಾವಳಿ ಕಾವಲು ಪೊಲೀಸ್ ಸಿಬ್ಬಂದಿಗೆ ನೀಡುವ ಅಗತ್ಯವಿದೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಎಲ್ಲಾ ಬೀಚ್‌ಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ, ತುರ್ತು ಸಂದರ್ಭಗಳಲ್ಲಿ ಅಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ದಾಖಲೀಕರಣ ಮಾಡುವ ಮಾದರಿ ಕಾರ್ಯವಾಗಬೇಕು ಎಂದರು.  

ಕರಾವಳಿ ಕಾವಲು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬದಲಾದ ಸನ್ನಿವೇಶಗಳಿಗೆ ತಕ್ಕಂತೆ ಅಗತ್ಯ ತಾಂತ್ರಿಕ ತರಬೇತಿಯನ್ನು ನಿರಂತರವಾಗಿ ಪಡೆಯುವ ಮೂಲಕ ಸಮುದ್ರದ ಮೂಲಕ  ಎದುರಾಗುವ ಯಾವುದೇ ರೀತಿಯ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧವಾಗಿರಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ, ಕರಾವಳಿ ಕಾವಲು ಪೊಲೀಸ್‌ನ ಎಸ್ಪಿ ಹಾಗೂ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಅಬ್ದುಲ್ ಅಹದ್, ರಾಜ್ಯದಲ್ಲಿ ಈಗಾಗಲೇ ಭೂಮಿ, ವಾಯು ಪ್ರದೇಶದ ರಕ್ಷಣೆಗೆ ಪೊಲೀಸ್ ಸಿಬ್ಬಂದಿಗೆ ತರಬೇತಿ ನೀಡುತ್ತಿದ್ದು, ಕರಾವಳಿ ಭದ್ರತಾ ತರಬೇತಿ ಮೂಲಕ ಮೂರು ವಿಭಾಗದಲ್ಲಿ ರಾಜ್ಯದ ರಕ್ಷಣೆ ಸಾಧ್ಯವಾಗಲಿದೆ. ಈ ತರಬೇತಿ ಕೇಂದ್ರದಲ್ಲಿ ಕರಾವಳಿ ಕಾವಲು ಪೊಲೀಸ್ ವಿಭಾಗದ ಆಯ್ದ ಸಿಬ್ಬಂದಿಗಳಿಗೆ 2 ವಾರಗಳ ತರಬೇತಿ ನೀಡುತ್ತಿದ್ದು, ನೌಕಾಪಡೆ, ಕೋಸ್ಟ್ ಗಾರ್ಡ್ ಹಾಗೂ ಬಿ.ಎಸ್.ಎಫ್ ನ ನೌಕಾ ಸಿಬ್ಬಂದಿ ವತಿಯಿಂದ ತರಬೇತಿ ನೀಡಲಿದ್ದು, ಈ ತರಬೇತಿಯು ಕರಾವಳಿ ಕಾವಲು ಪೊಲೀಸ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಆಗಲಿದೆ ಎಂದರು.

 

Udupi: ನಿವೃತ್ತಿ ವೇತನದ ಪೂರ್ಣ ಪಾವತಿಗೆ ಪರದಾಡುತ್ತಿರುವ 80 ವರ್ಷದ ಹಿರಿಯ ನಾಗರಿಕ

ಮಂಗಳೂರಿನ ಆಂತರಿಕ ಭದ್ರತಾ ವಿಭಾಗದ ಎಸ್ಪಿ ಡಾ.ಎ.ಎನ್.ಪ್ರಕಾಶ್ ಗೌಡ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ರಾಜ್ಯದ ಆಂತರಿಕಾ ಭದ್ರತಾ ವಿಭಾಗ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

 

ಸ್ವಚ್ಛತೆಗೆ ಮಾದರಿಯಾದ ಉಡುಪಿ ಜಿಲ್ಲಾಧಿಕಾರಿ ವಸತಿಗೃಹ, ವಿನೂತನ ಕಾಂಪೋಸ್ಟ್ ಬೆಡ್ ನಿರ್ಮಾಣ

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ ಹಾಕೆ ಮಚ್ಚೀಂದ್ರ ಮಾತನಾಡಿ, ಇತ್ತೀಚೆಗೆ ಸಮುದ್ರದ ಮೂಲಕ ಹೆಚ್ಚಿನ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿದ್ದು, ಇವುಗಳನ್ನು ನಿಯಂತ್ರಿಸಲು ಪೊಲೀಸ್ ಸಿಬ್ಬಂದಿಗೆ ನಿರಂತರವಾಗಿ ನೂತನ ಮತ್ತು ತಾಂತ್ರಿಕ ತರಬೇತಿಯ ಅಗತ್ಯವಿದೆ ಎಂದರು. 

click me!