ಪಕ್ಷ ಅಧಿಕಾರಕ್ಕೆ ತರಲು ಒಗ್ಗಟ್ಟಿನ ಶ್ರಮ ಅಗತ್ಯ : ಕೆಪಿಸಿಸಿ ಮುಖಂಡ

By Kannadaprabha NewsFirst Published Sep 19, 2021, 1:43 PM IST
Highlights
  • ಮುಂದಿನ ದಿನಗಳಲ್ಲಿ ಪಕ್ಷವನ್ನು ಸಂಘಟನೆ ಮಾಡಿ, ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು 
  • ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್‌. ಧ್ರುವನಾರಾಯಣ್‌ ಕರೆ 

 ಮೈಸೂರು (ಸೆ.19) :  ಮುಂದಿನ ದಿನಗಳಲ್ಲಿ ಪಕ್ಷವನ್ನು ಸಂಘಟನೆ ಮಾಡಿ, ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್‌. ಧ್ರುವನಾರಾಯಣ್‌ ಕರೆ ನೀಡಿದರು.

ಮೈಸೂರಿನ ಕಾಂಗ್ರೆಸ್‌ ಭವನದಲ್ಲಿ ಶನಿವಾರ ನಡೆದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಚಾಮುಂಡೇಶ್ವರಿ ಮತ್ತು ಇಲವಾಲ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಷ ಸಂಘಟನೆಗೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರುಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಡಾ. ಯತಿಂದ್ರ ಸಿದ್ದರಾಮಯ್ಯ ಮಾತನಾಡಿ, ಪಕ್ಷ ಸಂಘಟನೆ ಗ್ರಾಮ ಪಂಚಾಯತಿ ಮಟ್ಟದಿಂದಲು ನಡೆಯಬೇಕು. ಅದಕ್ಕೆ ಬೇಕಾದ ಅಗತ್ಯ ತಯಾರಿಗಳನ್ನು ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ನಾವೆಲ್ಲರೂ ಕೈ ಜೋಡಿಸೋಣ. ಹಳೆ ಮೈಸೂರು ಭಾಗದಲ್ಲಿ ಪಕ್ಷ ಬಲವರ್ಧನೆ ಮಾಡಲು ಎಲ್ಲಾ ಕಾರ್ಯಕರ್ತರು ಶ್ರಮ ವಹಿಸಬೇಕು ಎಂದು ಅವರು ಕರೆ ನೀಡಿದರು.

ರಾಜ್ಯ ರಾಜಕೀಯದಲ್ಲಿ ಸ್ಫೋಟಕ ಮಾಹಿತಿ : 16 ಬಿಜೆಪಿ, ಜೆಡಿಎಸ್ ಶಾಸಕರು ಕಾಂಗ್ರೆಸ್‌ಗೆ

ಒಳ ಸಂಚಿನಿಂದ ಸೋಲು:  ಮಾಜಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಮಾತನಾಡಿ, ಸಿದ್ದರಾಮಯ್ಯ ಅವರ ಅಧಿಕಾರದಲ್ಲಿ ತಂದಂತಹ ಕಾರ್ಯಕ್ರಮ ಎಂದಿಗೂ ಜನಮಾನಸದಲ್ಲಿ ಇರುವಂತಹದ್ದು. ಅವರು ಕೊಟ್ಟಬಡವರ ಪರವಾದ ಯೋಜನೆಗಳು ಎಂದಿಗೂ ಶಾಶ್ವತವಾಗಿ ಉಳಿಯುತ್ತವೆ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಒಳ ಸಂಚುಗಳು ಹೆಚ್ಚಿನ ರೀತಿಯಲ್ಲಿ ಕೆಲಸ ಮಾಡಿದ ಪರಿಣಾಮ ಕಾಂಗ್ರೆಸ್‌ ಸೋಲು ಕಂಡಿತು ಎಂದು ಹೇಳಿದರು.

ಧರ್ಮ ಹಾಗೂ ಭಾವನಾತ್ಮಕ ವಿಚಾರಗಳನ್ನಿಟ್ಟು, ಸಂವಿಧಾನದ ಮೂಲಕ ಆಶಯಕ್ಕೆ ಧಕ್ಕೆ ತಂದು ರಾಜಕೀಯ ಮಾಡುತ್ತಿರುವವರನ್ನು ಅಧಿಕಾರದಿಂದ ದೂರ ಇಡಬೇಕಾಗಿದೆ. ಇವರಿಂದ ಸಂವಿಧಾನ ಮತ್ತು ಪ್ರಜಾಪ್ರಭತ್ವಕ್ಕೆ ಅಪಾಯವಿದೆ. ನೂತನ ಶಿಕ್ಷಣ ನೀತಿಯಲ್ಲಿರುವ ಅಂಶಗಳನ್ನು ತಿಳಿಸುವಂತೆ ಹೋರಾಟ ಮಾಡಿದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾಜ್‌ರ್‍ ಮಾಡಿಸಲಾಗಿದೆ. ವಿದ್ಯಾರ್ಥಿಗಳ ಮನವಿಯನ್ನು ಕೇಳುವ ಕನಿಷ್ಠ ಸೌಜನ್ಯವೂ ಈ ಸರ್ಕಾರಕ್ಕಿಲ್ಲ. ಪ್ರಧಾನಿ ಮೋದಿ ಅವರ ಜನ್ಮ ದಿನಕ್ಕೆ ಶುಭ ಕೋರಿದವರಿಗಿಂತ, ಉದ್ಯೋಗ ಕೊಡಿ ಎಂದವರೇ ಹೆಚ್ಚು. ಯುವ ಸಮೂಹದ ಮನಸ್ಥಿತಿ ಬದಲಾಗುತ್ತಿದೆ. ಇವೆಲ್ಲವನ್ನು ಜನರಿಗೆ ಮನವರಿಕೆ ಮಾಡಬೇಕು ಎಂದು ಅವರು ತಿಳಿಸಿದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ್‌ಕುಮಾರ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲರೂ ಒಂದಾಗಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ತರಲೇಬೇಕು. ಇತ್ತೀಚಿನ ದಿನಗಳಲ್ಲಿ ಮತದಾದರು ಕಾಂಗ್ರೆಸ್‌ನತ್ತ ಒಲವು ತೋರುತ್ತಿದ್ದಾರೆ. ಪಕ್ಷ ಬಲವರ್ಧನೆಗೆ ಹೆಚ್ಚಿನ ಆದ್ಯತೆ ನೀಡಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ತಿಳಿಸಿದರು.

ಚಾಮುಂಡೇಶ್ವರಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾಗಿ ಜೆ. ಸತೀಶ್‌ಕುಮಾರ್‌, ಇಲವಾಲ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾಗಿ ಬಿ. ಗುರುಸ್ವಾಮಿ ಅಧಿಕಾರ ಸ್ವೀಕರಿಸಿದರು. ಜಿಪಂ ಮಾಜಿ ಅಧ್ಯಕ್ಷ ಕೆ. ಮರೀಗೌಡ, ಕಾಂಗ್ರೆಸ್‌ ನಗರಾಧ್ಯಕ್ಷ ಆರ್‌. ಮೂರ್ತಿ, ಮುಖಂಡರಾದ ನರಸೇಗೌಡ, ಗುರುಪಾದಸ್ವಾಮಿ, ಜೇಸುದಾಸ್‌, ಎಂ. ಶಿವಣ್ಣ, ಪುಷ್ಪಲತಾ ಚಿಕ್ಕಣ್ಣ, ಟಿ.ಬಿ. ಚಿಕ್ಕಣ್ಣ, ಮಂಜುಳಾ ಮಾನಸ, ಎಚ್‌.ಎ. ವೆಂಕಟೇಶ್‌ ಮೊದಲಾದವರು ಇದ್ದರು.

ಬಿಜೆಪಿ ಅಪಪ್ರಚಾರ, ಬಿಜೆಪಿ ಮತ್ತು ಜೆಡಿಎಸ್‌ ಒಳ ಒಪ್ಪಂದ ಮತ್ತು ಕಾಂಗ್ರೆಸ್‌ ಪಕ್ಷ ಸರಿಯಾಗಿ ಸಾಮಾಜಿಕ ಜಾಲತಾಣ ಬಳಸಿಕೊಳ್ಳಲು ಸಾಧ್ಯವಾಗದೇ ಇರುವುದು, ಜನರಿಗೆ ಕಾಂಗ್ರೆಸ್‌ ಪಕ್ಷದ ಸಾಧನೆಯನ್ನು ಮನವರಿಕೆ ಮಾಡಿಕೊಡದೇ ಇರುವುದರಿಂದ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲನ್ನು ಅನುಭವಿಸುವಂತಾಯಿತು. ಜಿಲ್ಲೆಯಲ್ಲಿ 11 ವಿಧಾನಸಭಾ ಕ್ಷೇತ್ರಗಳನ್ನು ಕಾಂಗ್ರೆಸ್‌ ಗೆಲುವು ಸಾಧಿಸಲು ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಅವರ ಪ್ರತಿಷ್ಟೆಯನ್ನು ಜಿಲ್ಲೆಯ ಕಾರ್ಯಕರ್ತರು ಉಳಿಸಬೇಕಿದೆ.

- ಡಾ. ಯತೀಂದ್ರ ಸಿದ್ದರಾಮಯ್ಯ, ಶಾಸಕರು

click me!