Chikkamagaluru rains: ಮಲೆನಾಡು ಜಿಲ್ಲೆ ಚಿಕ್ಕಮಗಳೂರಿನಲ್ಲಿ ಮುಂದುವರೆದ ಮಳೆ

By Kannadaprabha NewsFirst Published Jul 6, 2023, 4:09 AM IST
Highlights

ಮಲೆನಾಡು ಜಿಲ್ಲೆ ಚಿಕ್ಕಮಗಳೂರಿನಲ್ಲಿ ಬುಧವಾರವೂ ಮುಂಗಾರು ಮಳೆ ಮುಂದುವರೆದಿದ್ದು, ಕೆಲವೆಡೆ ಗಾಳಿ ಬೀಸಿದ್ದರಿಂದ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿ ವಿದ್ಯುತ್‌ ಸಂಪರ್ಕದಲ್ಲಿ ವ್ಯತ್ಯಯವಾಗಿದೆ.

ಚಿಕ್ಕಮಗಳೂರು (ಜು.6) : ಮಲೆನಾಡು ಜಿಲ್ಲೆ ಚಿಕ್ಕಮಗಳೂರಿನಲ್ಲಿ ಬುಧವಾರವೂ ಮುಂಗಾರು ಮಳೆ ಮುಂದುವರೆದಿದ್ದು, ಕೆಲವೆಡೆ ಗಾಳಿ ಬೀಸಿದ್ದರಿಂದ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿ ವಿದ್ಯುತ್‌ ಸಂಪರ್ಕದಲ್ಲಿ ವ್ಯತ್ಯಯವಾಗಿದೆ.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ತರುವೆ, ಬಣಕಲ್‌, ಬಾಳೂರು, ದೇವರಮನೆ, ಗುತ್ತಿ, ಕುಂದೂರು, ಮತ್ತಿಕಟ್ಟೆ, ಜಾಣಿಗೆ ಸೇರಿದಂತೆ ಗಾಳಿಗೆ ಮರಗಳು ಸಹ ಬಿದ್ದಿವೆ.

Latest Videos

ಶೃಂಗೇರಿ, ಕೊಪ್ಪ ಹಾಗೂ ಮೂಡಿಗೆರೆ ತಾಲೂಕುಗಳಲ್ಲಿ ಬಿಡುವಿಲ್ಲದೆ ಮಳೆ ಸುರಿಯುತ್ತಿದೆ. ಎನ್‌.ಆರ್‌.ಪುರ, ಚಿಕ್ಕಮಗಳೂರಿನಲ್ಲಿ ತುಂತುರು ಮಳೆ ಇದ್ದು, ತರೀಕೆರೆ, ಅಜ್ಜಂಪುರ ಹಾಗೂ ಕಡೂರು ತಾಲೂಕಿನ ಕೆಲವೆಡೆ ಸಾಧಾರಣ ಮಳೆಯಾಗಿದೆ. ತುಂಗಾ, ಭದ್ರಾ ಹಾಗೂ ಹೇಮಾವತಿ ನದಿಗಳ ನೀರಿನ ಮಟ್ಟಏರಿಕೆಯಾಗಿದೆ.

 

ಚಿಕ್ಕಮಗಳೂರಲ್ಲಿ ವರುಣನ ಅಬ್ಬರಕ್ಕೆ ಧರೆಗುರುಳಿದ ಮರಗಳು: ಮುಂದಿನ 3 ದಿನ ಭಾರೀ ಮಳೆ..!

ಕಳೆದ 24 ಗಂಟೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಅಂದರೆ, ಜಿಲ್ಲೆಯ ಸರಾಸರಿ ವಾಡಿಕೆ ಮಳೆ 19.8 ಮಿ.ಮೀ., ಬುಧವಾರ 21.8 ಮಿ.ಮೀ. ಮಳೆ ಬಂದಿದೆ. ಚಿಕ್ಕಮಗಳೂರು ತಾಲೂಕಿನಲ್ಲಿ 16.5, ಕಡೂರು 3.5, ಕೊಪ್ಪ 48.7, ಮೂಡಿಗೆರೆ 48.8, ಎನ್‌.ಆರ್‌.ಪುರ 17.6, ಶೃಂಗೇರಿ 53.3, ತರೀಕೆರೆ 5.0, ಅಜ್ಜಂಪುರ ತಾಲೂಕಿನಲ್ಲಿ 2.6 ಮಿ.ಮೀ. ಮಳೆಯಾಗಿದೆ.

ಹವಾಮಾನ ಮುನ್ಸೂಚನೆ

ಭಾರತೀಯ ಹವಾಮಾನ ಇಲಾಖೆ(IMD Forecast)ಯ ಮುನ್ಸೂಚನೆಯಂತೆ ಮಲೆನಾಡು ಭಾಗದಲ್ಲಿ ಮುಂದಿನ 3 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

3 ದಿನ ಆರೆಂಜ್‌ ಅಲರ್ಚ್‌ ಇದ್ದು, ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಸಬೇಕಾಗಿರುವುದರಿಂದ ಸಾರ್ವಜನಿಕರಿಗೆ ಸೂಚನೆಗಳನ್ನು ನೀಡಲಾಗಿದೆ. ಸಾರ್ವಜನಿಕರು, ಪ್ರವಾಸಿಗರು ನದಿಗೆ ಅಥವಾ ತಗ್ಗು ಪ್ರದೇಶಗಳಿಗೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು. ಅಪಾಯಕಾರಿ ವಿದ್ಯುತ್‌ ಕಂಬ, ಕಟ್ಟಡ, ಮರಗಳ ಹತ್ತಿರ, ಕೆಳಗೆ ನಿಲ್ಲದೆ ಸುರಕ್ಷಿತ ಸ್ಥಳಗಳನ್ನು ತಲುಪುವುದು. ವಿದ್ಯಾರ್ಥಿಗಳ ಪೋಷಕರು, ಶಾಲಾ ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರಕ್ಕೆ ಹೋಗದಂತೆ ಜಾಗ್ರತೆ ವಹಿಸಬೇಕು.

ಮಳೆಗಾಗಿ ತಾಮ್ರದ ಬಿಂದಿಗೆ ಬಳಿ ಭವಿಷ್ಯ ಕೇಳಿದ ವಿಜಯಪುರ ಜನ! ಬಿಂದಿಗೆ ನುಡಿದ ಭವಿಷ್ಯ ನಿಜವಾಗುತ್ತಾ?

ಹಿರಿಯ ನಾಗರಿಕರು, ವಯಸ್ಕರು ಕೆರೆ, ನದಿ ತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು. ಹೊರಗೆ ತೆರಳುವುದು ಅನಿವಾರ್ಯವಿದ್ದಲ್ಲಿ ಕುಟುಂಬದ ಸದಸ್ಯರೊಂದಿಗೆ ತೆರಳತಕ್ಕದ್ದು. ಸಾರ್ವಜನಿಕರು ಯಾವುದೇ ಅಪಾಯಕಾರಿ ಘಟನೆಗಳಿಗೆ ಅವಕಾಶ ಕೊಡದೆ ಜಿಲ್ಲಾಡಳಿದೊಂದಿಗೆ ಸಹಕಾರ ನೀಡಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08262 238950 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

click me!