ದುಬೈನಿಂದ ಆಗಮಿಸಿದ ಪ್ರಯಾಣಿಕನಲ್ಲಿ ಕೊರೋನ ಲಕ್ಷಣ

By Kannadaprabha NewsFirst Published Mar 9, 2020, 7:36 AM IST
Highlights

ಮಂಗಳೂರಿಗೆ ದುಬೈ​ಯಿಂದ ಆಗ​ಮಿ​ಸಿದ ಪ್ರಯಾಣಿಕರೊಬ್ಬರಿಗೆ ಕೊರೋನ ಸೋಂಕು ತಗುಲಿದ ಶಂಕೆ ಹಿನ್ನೆಲೆಯಲ್ಲಿ ಆತನನ್ನು ನಗರದ ವೆನ್ಲಾಕ್‌ ಆಸ್ಪತ್ರೆಗೆ ಭಾನುವಾರ ದಾಖಲಿಸಲಾಗಿದೆ.

ಮಂಗಳೂರು(ಮಾ.09): ಮಂಗಳೂರಿಗೆ ದುಬೈ​ಯಿಂದ ಆಗ​ಮಿ​ಸಿದ ಪ್ರಯಾಣಿಕರೊಬ್ಬರಿಗೆ ಕೊರೋನ ಸೋಂಕು ತಗುಲಿದ ಶಂಕೆ ಹಿನ್ನೆಲೆಯಲ್ಲಿ ಆತನನ್ನು ನಗರದ ವೆನ್ಲಾಕ್‌ ಆಸ್ಪತ್ರೆಗೆ ಭಾನುವಾರ ದಾಖಲಿಸಲಾಗಿದೆ.

ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ಸಂದರ್ಭ ದುಬೈನಿಂದ ಆಗಮಿಸಿದ ಪ್ರಯಾಣಿಕನಲ್ಲಿ ಜ್ವರದ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಆತನನ್ನು ವೆನ್ಲಾಕ್‌ ಆಸ್ಪತ್ರೆಯ ವಿಶೇಷ ಘಟಕಕ್ಕೆ ದಾಖಲಿಸಲಾಗಿದೆ.

ಕೋಳಿಗೆ 60 ರಿಂದ 65 ರೂಪಾಯಿ ಇಳಿತ..!

ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಸಿಖಂದರ್‌ ಪಾಶಾ, ‘ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನಲ್ಲಿ ಜ್ವರದ ಲಕ್ಷಣ ಇರುವುದು ಪತ್ತೆಯಾಗಿದೆ. ದುಬೈ ವಿಮಾನ ನಿಲ್ದಾಣದಿಂದ ತೆರಳುತ್ತಿದ್ದ ಸಂದರ್ಭದಲ್ಲಿ ನಡೆದ ತಪಾಸಣೆ ವೇಳೆ ಆತನಲ್ಲಿ ಯಾವುದೇ ಜ್ವರ ಲಕ್ಷಣ ಕಂಡುಬಂದಿಲ್ಲ ಎಂಬ ಮಾಹಿತಿ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ವೆನ್ಲಾಕ್‌ ಆಸ್ಪತ್ರೆಯಲ್ಲಿ ವಿಶೇಷ ಪ್ರತ್ಯೇಕ ವಾರ್ಡ್‌ನಲ್ಲಿ ದಾಖಲಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಪ್ರಯಾಣಿಕನಿಂದ ಗಂಟಲಿನ ದ್ರವರೂಪದ ಮಾದರಿಯನ್ನು ಸಂಗ್ರಹಿಸಲಾಗಿದ್ದು, ಸ್ಯಾಂಪಲ… ಅನ್ನು ಬೆಂಗಳೂರು ವೈದ್ಯಕೀಯ ಆಸ್ಪತ್ರೆಗೆ (ಬಿಎಂಸಿ) ರವಾನಿಸಲಾಗಿದೆ. ಸೋಮವಾರದ ವೇಳೆಗೆ ವರದಿ ಲಭ್ಯವಾಗಲಿದೆ. ಒಂದು ವೇಳೆ ವರದಿಯಲ್ಲಿ ಸೋಂಕು ಇಲ್ಲವೆಂದು ದೃಢಪಟ್ಟಲ್ಲಿ ಸಂಪೂರ್ಣ ತಪಾಸಣೆ ನಂತರ ಪ್ರಯಾಣಿಕನನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು.

'ಕರ್ನಾಟಕದ ಭಾಗದ ಬಿಸಿಲಿನ ಝಳಕ್ಕೆ ಕರೋನಾ ಸತ್ತೇ ಹೋಗ್ತದೆ'

ಆ್ಯಂಬುಲೆನ್ಸ್‌ ಇರಲಿಲ್ಲ: ಸೋಂಕು ಶಂಕಿತ ಪ್ರಯಾಣಿಕನನ್ನು ವೆನ್ಲಾಕ್‌ ಆಸ್ಪತ್ರೆಗೆ ಕರೆತರಲು ಮಂಗಳೂರು ವಿಮಾನ ನಿಲ್ದಾಣದಲ್ಲಿ ಯಾವುದೇ ಆ್ಯಂಬುಲೆಸ್ಸ್‌ ಇರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಬಳಿಕ ಆಸ್ಪತ್ರೆಯ ಆ್ಯಂಬುಲೆನ್ಸ್‌ ಅನ್ನು ನಿಲ್ದಾಣಕ್ಕೆ ರವಾನಿಸಿ ಪ್ರಯಾಣಿಕನನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂಬ ಮಾಹಿತಿ ಲಭ್ಯವಾಗಿದೆ.

ತಪಾಸಣೆ ಕಡ್ಡಾಯ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರನ್ನೂ ನಾಗರಿಕ ವಿಮಾನಯಾನ ನಿರ್ದೇಶನಾಲಯದ ಪ್ರಕಾರ ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ಈ ತಪಾಸಣೆಯನ್ನು ಎಲ್ಲ ಪ್ರಯಾಣಿಕರಿಗೂ ಕಡ್ಡಾಯಗೊಳಿಸಲಾಗಿದೆ ಎಂದು ನಿಲ್ದಾಣದ ನಿರ್ದೇಶಕ ವಿ.ವಿ.ರಾವ್‌ ತಿಳಿಸಿದ್ದಾರೆ.

click me!