ಭೀಮಾತೀರದ ಚಡಚಣದಲ್ಲಿ ಡಿಸಿ ನಡೆ ಹಳ್ಳಿ ಕಡೆ, ವಿವಿಧ ಕಚೇರಿಗಳಿಗೆ ದಾನಮ್ಮನವರ್ ಭೇಟಿ

By Suvarna NewsFirst Published Dec 27, 2022, 6:58 PM IST
Highlights

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಮಂಗಳವಾರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಚಡಚಣ ತಾಲೂಕಿನ ವಿವಿಧ ಕಚೇರಿಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ವಿಜಯಪುರ (ಡಿ.27): ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಮಂಗಳವಾರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಚಡಚಣ ತಾಲೂಕಿನ ವಿವಿಧ ಕಚೇರಿಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಚಡಚಣ ತಾಲೂಕಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕೋವಿಡ್ ನಿಯಂತ್ರಣಕ್ಕಾಗಿ ಸ್ಥಾಪಿಸಲಾದ ಆಕ್ಸಿಜನ್ ಘಟಕವನ್ನು ಪರಿಶೀಲಿಸಿದ ಅವರು, ಮುನ್ನೆಚ್ಚರಿಕೆ ಕ್ರಮವಾಗಿ ಆಕ್ಸಿಜನ್ ಕೊರತೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು. ರೋಗಿಗಳಿಗೆ ಒದಗಿಸುವ ಬೆಡ್‍ಗಳನ್ನು ಶುಚಿತ್ವವಾಗಿಟ್ಟುಕೊಳ್ಳಬೇಕು. ಆಸ್ಪತ್ರೆಗೆ ಬಂದ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಅವಶ್ಯಕ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕುಂದುಕೊರತೆಗಳ ಸಭೆ ನಡೆಸಿದ ಜಿಲ್ಲಾಧಿಕಾರಿಗಳು..!
ತಹಶೀಲ್ದಾರ ಕಚೇರಿಯಲ್ಲಿ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವಿಧ ಇಲಾಖೆಗಳ ಮಾಹಿತಿ ಪಡೆದುಕೊಂಡರು. ಕುಂದು-ಕೊರತೆ ಸಭೆಯಲ್ಲಿ ಜಾತಿ ಪ್ರಮಾಣ ಪತ್ರ ನೀಡಲು ವಂಶವೃಕ್ಷ-ಕೋರ್ಟ್ ಅಫೀಡವಿಟ್ ಕಡಿತಗೊಳಿಸಲು, ಕೆರೆ ಒತ್ತುವರಿ ತೆರವುಗೊಳಿಸುವುದು, ರೈತರ ಸಾಲ ಮನ್ನಾ, ಸರಕಾರಿ ನೌಕರರ ಸಂಘಕ್ಕೆ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ನಿವೇಶನ ಒದಗಿಸುವುದು ಸೇರಿದಂತೆ ಒಟ್ಟು 8 ಅರ್ಜಿಗಳು ಸ್ವೀಕೃತಗೊಂಡಿದ್ದು,  ಅರ್ಜಿಗಳ ವಿಲೇವಾರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. 

ಈ ಸಂದರ್ಭದಲ್ಲಿ ತಹಶೀಲ್ದಾರ ಹಣಮಂತ ಶಿರಹಟ್ಟಿ,  ಚಡಚಣ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಂಜಯ ಕಡಗೇಕರ, ಡಾ.ಜಾನಕಟೋಟೆ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಮಾರಯ್ಯ, ಸಿಡಿಪಿಓ ಅನೀಲಕುಮಾರ ಹಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

click me!