ಹುಟ್ಟೂರಿನ ಕ್ಷೇತ್ರದಲ್ಲೇ ಸ್ಪರ್ಧಿಸಿ ನಿವೃತ್ತಿಯಾಗುವ ಬಯಕೆ

Published : Mar 30, 2023, 08:46 AM IST
 ಹುಟ್ಟೂರಿನ ಕ್ಷೇತ್ರದಲ್ಲೇ ಸ್ಪರ್ಧಿಸಿ ನಿವೃತ್ತಿಯಾಗುವ  ಬಯಕೆ

ಸಾರಾಂಶ

ಇದೇ ನನ್ನ ಕೊನೆ ಚುನಾವಣೆ, ಇದೇ ಕೊನೆ ಚುನಾವಣೆ ಎಂದು ಎರಡೆರಡು ಬಾರಿ ಪುನರುಚ್ಚರಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂತರ ರಾಜಕೀಯ ನಿವೃತ್ತಿ ಹೊಂದುವುದಾಗಿ ಹೇಳಿದರು.

ಮೈಸೂರು : ಇದೇ ನನ್ನ ಕೊನೆ ಚುನಾವಣೆ, ಇದೇ ಕೊನೆ ಚುನಾವಣೆ ಎಂದು ಎರಡೆರಡು ಬಾರಿ ಪುನರುಚ್ಚರಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂತರ ರಾಜಕೀಯ ನಿವೃತ್ತಿ ಹೊಂದುವುದಾಗಿ ಹೇಳಿದರು.

ರಾಮಕೃಷ್ಣನಗರದ ರಮಾಗೋವಿಂದ ರಂಗಮಂದಿರದಲ್ಲಿ ಬುಧವಾರ ಬೆಳಗ್ಗೆ ನಡೆದ ಪ. ಮಲ್ಲೇಶ್‌ ಸ್ಮರಣಾರ್ಥ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಹುಟ್ಟೂರಿನ ಕ್ಷೇತ್ರದಿಂದಲೇ ಸ್ಪರ್ಧಿಸಿ ನಿವೃತ್ತಿ ಆಗಬೇಕು ಎಂಬುದು ನನ್ನ ಬಯಕೆ. ಹೀಗಾಗಿ ನಾನು ವರುಣ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದೇನೆ. ಕಳೆದ ಬಾರಿ ಚಾಮುಂಡೇಶ್ವರಿ ಕ್ಷೇತ್ರದ ಬಗ್ಗೆ ನನಗೆ ಸ್ವಲ್ಪ ಅನುಮಾನ ಇತ್ತು. ಹೀಗಾಗಿ ಬಾದಾಮಿ ಕ್ಷೇತ್ರದಲ್ಲೂ ಸ್ಪರ್ಧಿಸಿದ್ದೆ. ಈ ಬಾರಿ ನನಗೆ ಯಾವ ಅನುಮಾನಗಳೂ ಇಲ್ಲ. ಆದರೆ ಕೋಲಾರದ ಜನ ಒತ್ತಾಯದಿಂದ ಕರೆಯುತ್ತಿರುವ ಕಾರಣ ಅಲ್ಲೂ ನಿಲಲ್ಲು ಟಿಕೆಟ್‌ ಕೊಡಿ ಎಂದು ಕೇಳಿದ್ದೇನೆ. ಅಂತಿಮ ತೀರ್ಮಾನ ಹೈ ಕಮಾಂಡ್‌ಗೆ ಬಿಟ್ಟದ್ದು. ನನಗೆ ಕ್ಷೇತ್ರ ಇಲ್ಲ ಎನ್ನುವುದೆಲ್ಲಾ ಅರ್ಥ ಇಲ್ಲದ ಮಾತು. ನನಗೆ 25 ಕ್ಷೇತ್ರದಲ್ಲೂ ಗೆಲ್ಲುವ ಅವಕಾಶ ಇರುವ ಕಾರಣ ನನ್ನನ್ನು ಆಹ್ವಾನಿಸುತ್ತಿದ್ದಾರೆ ಎಂದರು.

ಬಳ್ಳಾರಿಯಿಂದ ಸ್ಪರ್ಧಿಸುವಂತೆ ದಿವಾಕರ ಬಾಬು ಆಹ್ವಾನ: ಚುನಾವಣೆಗೆ ಇನ್ನೂ ಸಮಯವಿದೆ ನೋಡೋಣ ಎಂದ ಸಿದ್ದರಾಮಯ್ಯ!

ಯಾರೇ ಸ್ಪರ್ಧಿಸಿದರೂ ಹೆದರುವುದಿಲ್ಲ

ವರುಣ ಕ್ಷೇತ್ರದಲ್ಲಿ ನನ್ನ ವಿರುದ್ಧ ಯಾರೇ ಸ್ಪರ್ಧಿಸಿದರೂ ಹೆದರುವುದಿಲ್ಲ. ಜೆಡಿಎಸ್‌ ಬಿಜೆಪಿ ಕಳೆದ ಬಾರಿಯಂತೆ ಈ ಬಾರಿಯೂ ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಳ್ಳುವ ಸೂಚನೆ ಇದೆ. ಹಳೇ ಮೈಸೂರು ಹೊಸ ಮೈಸೂರು ಎಂದೇನಿಲ್ಲ. ಅವರು ಎಲ್ಲ ಕಡೆಯೂ ಫಿಕ್ಸಿಂಗ್‌ ಮಾಡಿಕೊಳ್ಳಬಹುದು. ನನ್ನ ವಿರುದ್ಧ ಯಾರೇ ಸ್ಪರ್ಧೆ ಮಾಡಿದರು ನಾನು ಅದಕ್ಕೆ ಹೆದರುವುದಿಲ್ಲ ಎಂದರು.

ಯಾರೇ ನಿಂತರೂ ನಾನು ಗೆದ್ದೇ ಗೆಲ್ಲುತ್ತೇನೆ. ಕಳೆದ ಚುನಾವಣೆಯಲ್ಲಿ ಸೋತ ಮೇಲೆ ನಾನು ರಾಹು ಕೇತುಗಳು ಒಂದಾದವು ಎಂದು ಹೇಳಿದ್ದೆ. ಈಗ ನಾನು ಆ ಪದ ಬಳಸುವುದಿಲ್ಲ. ಬಳಸಿದರೆ ಅವರು ಈಗ ಸಿಟ್ಟಾಗುತ್ತಾರೆ. ನಾನು ಈ ಬಾರಿ ಗೆಲ್ಲುತ್ತೇನೆ. ಈಗ ಅದನ್ನು ಉಲ್ಲೇಖಿಸುವ ಅಗತ್ಯ ಇಲ್ಲ. ಜನ ನನ್ನ ಪರವಾಗಿ ಇದ್ದಾರೆ ಎಂದು ಹೇಳಿದರು.

ಆಯೋಗ ನಿಗಾ ವಹಿಸಬೇಕು:

ರಾಜ್ಯದಲ್ಲಿ ಆಡಳಿತ ಪಕ್ಷ ಭಾರಿ ಚುನಾವಣಾ ಅಕ್ರಮದಲ್ಲಿ ತೊಡಗುವ ಸಾಧ್ಯತೆ ಇದೆ. ಚುನಾವಣಾ ಆಯೋಗ ನಿಕ್ಷಪಕ್ಷಪಾತ ಚುನಾವಣೆ ನಡೆಸಲು ಮುಂದಾಗಬೇಕು. ಆಡಳಿತ ಪಕ್ಷ ಇರಲಿ ಯಾವುದೇ ಪಕ್ಷ ಇರಲಿ ಅಕ್ರಮ ಮಾಡಿದರೆ ಕ್ರಮ ಕೈಗೊಳ್ಳಬೇಕು. ಆಡಳಿತ ಪಕ್ಷಕ್ಕೊಂದು ವಿರೋಧ ಪಕ್ಷಗಳಿಗೊಂದು ನ್ಯಾಯ ಮಾಡಬಾರದು ಎಂದರು.

Breaking ವರುಣಾ ಕ್ಷೇತ್ರದಿಂದಲೇ ಸಿದ್ದರಾಮಯ್ಯ ಸ್ಪರ್ಧೆ, ಎರಡು ಕಡೆ ನಿಲ್ಲುವ ಇಂಗಿತ!

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುವ ಗಾಳಿ ಬೀಸುತ್ತಿದೆ. ಆದ್ದರಿಂದ ಟಿಕೆಟ್‌ಗೆ ಪೈಪೋಟಿ ಹೆಚ್ಚಾಗಿದೆ. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ದೊಡ್ಡಮಟ್ಟದಲ್ಲಿದೆ. ಒಂದೆರಡು ದಿನದಲ್ಲಿ ಕಾಂಗ್ರೆಸ್‌ನ 2ನೇ ಪಟ್ಟಿಬಿಡುಗಡೆ ಆಗಲಿದೆ. ಇವತ್ತು ಸ್ಕ್ರೀನಿಂಗ್‌ ಕಮಿಟಿ ಸಭೆ ಇದೆ. ಸಭೆ ಮುಗಿಸಿ ಅದನ್ನು ಹೈ ಕಮಾಂಡ್‌ ಗೆ ಕಳುಹಿಸುತ್ತೇವೆ. ಆ ನಂತರ ಪಟ್ಟಿಬಿಡುಗಡೆಯಾಗುತ್ತದೆ ಎಂದು ಅವರು ಹೇಳಿದರು.

ಕಾಂಗ್ರೆಸ್‌ ಚುನಾವಣೆಗೆ ಸಿದ್ಧ:

ಒಂದೇ ಹಂತದಲ್ಲಿ ಚುನಾವಣೆ ಘೋಷಿಸಿರುವುದು ಸ್ವಾಗತಾರ್ಹ. ನಾವು ಚುನಾವಣೆಗೆ ಸಿದ್ಧವಾಗಿದ್ದೇವೆ. ನಿಷ್ಪಕ್ಷಪಾತ, ಸ್ವತಂತ್ರ ಚುನಾವಣೆ ಮಾಡುವುದು ಆಯೋಗ ಜವಾಬ್ದಾರಿ. ಇಡೀ ಚುನಾವಣೆ ವ್ಯವಸ್ಥೆ ಭ್ರಷ್ಟಗೊಳಿಸಿದ್ದು ಬಿಜೆಪಿ. ದೇಶದಲ್ಲಿ ಆಪರೇಷನ್‌ ಕಮಲ ಮಾಡಿದ್ದು ಬಿಜೆಪಿ. ಪೊಲೀಸರು, ನಿಯೋಜನೆಗೊಂಡ ಅಧಿಕಾರಿಗಳನ್ನೇ ಬಳಸಿಕೊಂಡು ಅಕ್ರಮ ನಡೆಸುವ ಸಾಧ್ಯತೆ ಇದೆ. 300ಕ್ಕೂ ಹೆಚ್ಚು ಐಟಿ ಅಧಿಕಾರಿಗಳನ್ನು ನೇಮಿಸಿಕೊಂಡಿರುವುದು ಕಾಂಗ್ರೆಸನ್ನು ಕಟ್ಟಿಹಾಕಲು ಮಾಡಿಕೊಂಡಿರುವ ಯೋಜನೆ ಅದು ಎಂದರು.

ಏ. 9 ರಂದು ಮೈಸೂರಿನಲ್ಲಿ ಪ್ರಧಾನಿ ನರೇಂದ್ರಮೋದಿ ಅವರು ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲು ಆಗಮಿಸಬಹುದೇ ಹೊರತು ಸರ್ಕಾರಿ ಕಾರ್ಯಕ್ರಮಕ್ಕೆ ಬರಲು ಆಗುವುದಿಲ್ಲ. ಈಗ ನೀತಿ ಸಂಹಿತೆ ಜಾರಿಯಲ್ಲಿದೆ. ಈಗ ಸರ್ಕಾರಿ ಕಾರ್ಯಕ್ರಮ ಹೇಗೆ ನಡೆಸುತ್ತಾರೆ? ಎಂದು ಅವರು ಪ್ರಶ್ನಿಸಿದರು.

PREV
Read more Articles on
click me!

Recommended Stories

'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC
ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು