ಬೆಂಗಳೂರು: ಕೋಟ್ಯಂತರ ರು. ಹಗರಣದ ಆರೋಪ, ಬಿಬಿಎಂಪಿ ಕಚೇರಿಗಳ ಮೇಲೆ ಇ.ಡಿ ದಾಳಿ

Published : Jan 08, 2025, 07:17 AM IST
ಬೆಂಗಳೂರು: ಕೋಟ್ಯಂತರ ರು. ಹಗರಣದ ಆರೋಪ, ಬಿಬಿಎಂಪಿ ಕಚೇರಿಗಳ ಮೇಲೆ ಇ.ಡಿ ದಾಳಿ

ಸಾರಾಂಶ

ಬಿಬಿಎಂಪಿ ಕೇಂದ್ರ ಕಚೇರಿ ಸೇರಿದಂತೆ ನಾಲ್ಕು ವಲಯ ಕಚೇರಿಗಳಾದ ಮಹದೇವಪುರ, ಬೊಮ್ಮನಹಳ್ಳಿ, ಆರ್.ಆರ್.ನಗರ, ಕೆಂಗೇರಿ ಕಚೇರಿಗಳ ಮೇಲೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಬಿಬಿಎಂಪಿ ಪ್ರಧಾನ ಎಂಜಿನಿಯ‌ರ್ ಡಾ. ಬಿ.ಎಸ್. ಪ್ರಹ್ಲಾದ್ ಕಚೇರಿಯಲ್ಲಿ ಪ್ರಮುಖವಾಗಿ ಶೋಧ ಕಾರ್ಯ ನಡೆಸಲಾಗಿದೆ. ಈ ವೇಳೆ ಆಕ್ರಮ ಸಂಬಂಧ ದಾಖಲೆಗಳು ಪತ್ತೆಯಾಗಿದೆ. 

ಬೆಂಗಳೂರು(ಜ.08): ಕೊಳವೆ ಬಾವಿ ಕೊರೆಸುವ ಮತ್ತು ಶುದ್ದ ಕುಡಿಯುವ ನೀರಿನ ಘಟಕಗಳ ಸ್ಥಾಪಿಸುವ ಹೆಸರಲ್ಲಿ ಕೋಟ್ಯಂತರ ರು. ಲೂಟಿ ಹೊಡೆದಿರುವ ಆರೋಪದ ಮೇರೆಗೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಚೇರಿಗಳ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. 

ಮಂಗಳವಾರ ಬಿಬಿಎಂಪಿ ಕೇಂದ್ರ ಕಚೇರಿ ಸೇರಿದಂತೆ ನಾಲ್ಕು ವಲಯ ಕಚೇರಿಗಳಾದ ಮಹದೇವಪುರ, ಬೊಮ್ಮನಹಳ್ಳಿ, ಆರ್.ಆರ್.ನಗರ, ಕೆಂಗೇರಿ ಕಚೇರಿಗಳ ಮೇಲೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಬಿಬಿಎಂಪಿ ಪ್ರಧಾನ ಎಂಜಿನಿಯ‌ರ್ ಡಾ. ಬಿ.ಎಸ್. ಪ್ರಹ್ಲಾದ್ ಕಚೇರಿಯಲ್ಲಿ ಪ್ರಮುಖವಾಗಿ ಶೋಧ ಕಾರ್ಯ ನಡೆಸಲಾಗಿದೆ. ಈ ವೇಳೆ ಆಕ್ರಮ ಸಂಬಂಧ ದಾಖಲೆಗಳು ಪತ್ತೆಯಾಗಿದೆ ಎಂದು ಮೂಲಗಳು ಹೇಳಿವೆ. 

ಸ್ಪೆಷಲ್ 26 ಸಿನೆಮಾ ರೀತಿ ಕೃತ್ಯ: ಬೀಡಿ ಉದ್ಯಮಿಗೆ ನಕಲಿ ಇ.ಡಿ. ಶಾಕ್‌, 30 ಲಕ್ಷ ಲೂಟಿ!

ಬಿಬಿಎಂಪಿ ವ್ಯಾಪ್ತಿಯ 27 ವಿಭಾಗದ ಕಾರ್ಯ ಕಾರಿ ಎಂಜಿನಿಯರ್‌ಗಳು ಮತ್ತು 63 ಉಪವಿಭಾಗದ ಸಹಾಯಕ ಕಾರ್ಯನಿರ್ವಹಣಾಧಿಕಾರಿಗಳಿಗೆ ಪ್ರಹ್ಲಾದ್ ಮುಖ್ಯಸ್ಥರಾಗಿರುವುದರಿಂದ ಅವರ 'ಕಚೇರಿ ಮೇಲೆ ದಾಳಿ ನಡೆಸಿ ಶೋಧ ನಡೆಸಲಾಗಿದೆ. ಮಂಗಳವಾರ ಬೆಳಗ್ಗೆ ಶೋಧ ಕಾರ್ಯ ಆರಂಭಿಸಿರುವ ಇ.ಡಿ. ಅಧಿಕಾರಿಗಳು ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಿದ್ದು, ಬುಧವಾರ ಸಹ ದಾಖಲೆಗಳ ಪರಿಶೀಲನೆ ಕಾರ್ಯ ಮುಂದುವರಿಯಲಿದೆ ಎಂದು ತಿಳಿದು ಬಂದಿದೆ. 

ಬಿಬಿಎಂಪಿ ಕೇಂದ್ರ ಕಚೇರಿಗೆ 7 ಮಂದಿಯ ಇ.ಡಿ. ಅಧಿಕಾರಿಗಳ ತಂಡ ಪ್ರಹ್ಲಾದ್ ಕಚೇರಿಗೆ ತೆರಳಿ 2016-2019ರ ಅವಧಿಯಲ್ಲಿ ನಡೆದ ಕೊಳವೆಬಾವಿ ಕೊರೆಸಿರುವ ಸಂಬಂಧ ಅಗತ್ಯ ದಾಖಲೆಗಳನ್ನು ಒದಗಿಸುವಂತೆ ನಿರ್ದೇಶನ ನೀಡಿತು. ಬಿಬಿಎಂಪಿ ಮುಖ್ಯ ಲೆಕ್ಕಾಧಿಕಾರಿಗಳನ್ನು ಸಹ ಕರೆಸಿ ಅವರಿಂದಲೂ ಯೋಜನೆಗೆ ಸಂಬಂಧಿಸಿದ ದಾಖಲೆಗಳ ಮಾಹಿತಿಯನ್ನು ಕಲೆ ಹಾಕಲಾಗಿದೆ. 8 ವಲಯದ ಮುಖ್ಯ ಎಂಜಿನಿಯರ್‌ಗಳನ್ನು ಬಿಬಿಎಂಪಿ ಕೇಂದ್ರ ಕಚೇರಿಗೆ ಕರೆಸಿಕೊಂಡು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಲಾಗಿದೆ ಎಂದು ಹೇಳಲಾಗಿದೆ. 

ಕೇಂದ್ರ ಕಚೇರಿಯಲ್ಲಿ ಪರಿಶೀಲನೆ ನಡೆಸಿದ ವೇಳೆ ಲಭ್ಯವಾದ ಮಾಹಿತಿ ಮೇರೆಗೆ ಮಹಾದೇವಪುರ, ಬೊಮ್ಮನಹಳ್ಳಿ, ಆರ್.ಆರ್.ನಗರ, ಕೆಂಗೇರಿ ಕಚೇರಿಗಳಲ್ಲಿಯೂ ಶೋಧಕಾರ್ಯ ನಡೆಸಲಾಯಿತು. ಪರಿಶೀಲನೆ ವೇಳೆ ಅವ್ಯವಹಾರ ನಡೆಸಿರುವ ಬಗ್ಗೆ ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ದಾಖಲೆಗಳ ಶೋಧ ಕಾರ್ಯ ಮುಂದುವರಿಸಲಾಗಿದೆ ಎನ್ನಲಾಗಿದೆ.

ಹಗರಣದ ಬಗ್ಗೆ 273 ಪುಟಗಳ ದಾಖಲೆ ಬಿಡುಗಡೆ 

2016-19ರ ಅವಧಿಯಲ್ಲಿ ಬೊಮ್ಮನಹಳ್ಳಿ, ಆರ್.ಆರ್.ನಗರ, ಮಹದೇವಪುರ, ಯಲಹಂಕ ಸೇರಿದಂತೆ ಇತರೆ ವಿಧಾನಸಭಾ ಕ್ಷೇತ್ರದ 68 ವಾರ್ಡ್‌ ಗಳಲ್ಲಿ 9,558 ಬೋರ್‌ವೆಲ್ ಕೊರೆಸಲಾಗಿದ್ದು, ಇದರ ಜೊತೆಗೆ 976 ನೀರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ದಾಖಲೆ ಸೃಷ್ಟಿಸಿದ್ದರು. ಆದರೆ, ಒಂದು ಸಾವಿರಕ್ಕೂ ಕಡಿಮೆ ಬೋರ್‌ವೆಲ್ ಕೊರೆಸಿ ಬಿಬಿಎಂಪಿ ಅಧಿಕಾರಿ ಗಳು ತಪ್ಪು ಲೆಕ್ಕ ಕೊಟ್ಟು ಕೋಟ್ಯಂತರ ರು. ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ದೂರು ನೀಡಿದರು. 

Watch: ಮುಡಾ ಕೇಸಿನ ಕಂಪ್ಲೀಟ್ ಕಹಾನಿ ತೆರೆದಿಡಲಿದೆ ಇಡಿ; ಸಿದ್ದು ಸುತ್ತ- ಇ.ಡಿ ಹುತ್ತ

ಯೋಜನೆಯಲ್ಲಿ 400 ಕೋಟಿ ರು.ಗಿಂತ ಅಧಿಕ ವಹಿವಾಟು ನಡೆದಿರುವ ಹಿನ್ನೆಲೆಯಲ್ಲಿ ಅಕ್ರಮ ಹಣ ವರ್ಗಾವಣೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದರು. ಅಲ್ಲದೇ, ಹಗರಣದ ಬಗ್ಗೆ 273 ಪುಟಗಳ ದಾಖಲೆ ಬಿಡುಗಡೆ ಮಾಡಿದರು. ಎನ್.ಆರ್.ರಮೇಶ್ ದೂರಿನ ಮೇರೆಗೆ ಇ.ಡಿ. ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ.

ಬಿಜೆಪಿ ಮುಖಂಡನ ದೂರಿನ ಮೇರೆಗೆ ದಾಳಿ 

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊಳವೆಬಾವಿ ಕೊರೆಸುವ ಸಂಬಂಧ 2016 ರಿಂದ 2019ರ ಅವಧಿಯಲ್ಲಿ ನಡೆದಿರುವ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ. ಆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿತ ಇದು, ಈ ಅವಧಿಯಲ್ಲಿ ನಡೆದಿರುವ ಅಕ್ರಮ ಬಗ್ಗೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ತನಿಖೆ ನಡೆಸುವಂತೆ ಇ.ಡಿ.ಗೆ ದೂರು ನೀಡಿದರು. ಈ ದೂರಿನ ಮೇರೆಗೆ ಇ.ಡಿ. ಅಧಿಕಾರಿಗಳು ಇದೀಗ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

PREV
Read more Articles on
click me!

Recommended Stories

CM Siddaramaiahಗೆ ಈಶ್ವರಪ್ಪ ವಾರ್ನಿಂಗ್: ಭಗವದ್ಗೀತೆ ಓದಲಿ, ತಾಕತ್ತಿದ್ದರೆ ಕುರಾನ್ ಬಗ್ಗೆ ಮಾತನಾಲಿ
ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ