ಕಾಂಗ್ರೆಸ್‌ ಗೆಲುವಿಗೆ ಪ್ರತಿಯೊಬ್ಬರೂ ಸಹಕರಿಸಿ: ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ

Published : Apr 03, 2023, 06:17 AM IST
 ಕಾಂಗ್ರೆಸ್‌ ಗೆಲುವಿಗೆ ಪ್ರತಿಯೊಬ್ಬರೂ ಸಹಕರಿಸಿ: ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ

ಸಾರಾಂಶ

ಜಿಲ್ಲೆಯಲ್ಲಿ ಚುನಾವಣೆ ಪ್ರಕ್ರಿಯೆ ಚುರುಕಾಗಿದ್ದು, ಮುಂಚೂಣಿ ಘಟಕಗಳ ಮುಖಂಡರು, ಯುವ ಕಾಂಗ್ರೆಸ್‌, ಎನ್‌ಎಸ್‌ಯುಐ ಅವರು ಸಕ್ರಿಯರಾಗಿ ಚುನಾವಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಪಕ್ಷದ ಗೆಲುವಿಗೆ ಸಹಕಾರಿಯಾಗುವಂತೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಚಂದ್ರಶೇಖರಗೌಡ ಮನವಿ ಮಾಡಿದ್ದಾರೆ.

 ತುಮಕೂರು :  ಜಿಲ್ಲೆಯಲ್ಲಿ ಚುನಾವಣೆ ಪ್ರಕ್ರಿಯೆ ಚುರುಕಾಗಿದ್ದು, ಮುಂಚೂಣಿ ಘಟಕಗಳ ಮುಖಂಡರು, ಯುವ ಕಾಂಗ್ರೆಸ್‌, ಎನ್‌ಎಸ್‌ಯುಐ ಅವರು ಸಕ್ರಿಯರಾಗಿ ಚುನಾವಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಪಕ್ಷದ ಗೆಲುವಿಗೆ ಸಹಕಾರಿಯಾಗುವಂತೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಚಂದ್ರಶೇಖರಗೌಡ ಮನವಿ ಮಾಡಿದ್ದಾರೆ.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಕಾಂಗ್ರೆಸ್‌ನ ಎಸ್ಸಿ, ಎಸ್ಟಿ, ಓಬಿಸಿ, ಅಲ್ಪಸಂಖ್ಯಾತ, ರೈತ ಘಟಕ, ಕಾರ್ಮಿಕ ಘಟಕ, ಯುವ ಕಾಂಗ್ರೆಸ್‌, ಎನ್‌ಎಸ್‌ಯುಐನ ಪದಾಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಈಗಾಗಲೇ ಜಿಲ್ಲೆಯ ಎಂಟು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕೆಪಿಸಿಸಿ ಘೋಷಣೆ ಮಾಡಿದೆ. ಗುಬ್ಬಿಯಲ್ಲಿಯೂ ಅಂತಿಮ ಹಂತದಲ್ಲಿದೆ. ತುಮಕೂರು ಗ್ರಾಮಾಂತರ ಮತ್ತು ತುಮಕೂರು ನಗರ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಶೀಘ್ರವೇ ಬಿಡುಗಡೆಯಾಗಲಿದೆ. ಕಾರ್ಯಕರ್ತರು ಅಭ್ಯರ್ಥಿ ಘೋಷಣೆಯಾಗಿಲ್ಲ ಎಂಬ ಕಾರಣಕ್ಕೆ ಕೈ ಕಟ್ಟಿಕೂರಬಾರದು. ಪಕ್ಷದ ಚಿಹ್ನೆಯನ್ನೇ ಮುಂದಿಟ್ಟುಕೊಂಡು, ಪ್ರತಿ ಮನೆ ಮನೆಗೆ ತೆರಳಿ, ಕಾಂಗ್ರೆಸ್‌ ಪಕ್ಷದ ಸಾಧನೆಗಳು, ದೇಶದ ಸ್ವಾತಂತ್ರಕ್ಕಾಗಿ ಕಾಂಗ್ರೆಸ್‌ ನಡೆಸಿದ ಹೋರಾಟ, ಆನಂತರದಲ್ಲಿ ದೇಶ ಕಟ್ಟಲು ಹಾಕಿಕೊಂಡ ಯೋಜನೆಗಳ ಕುರಿತು ಮತದಾರರಿಗೆ ತಿಳಿಸಿ, ಕಾಂಗ್ರೆಸ್‌ಗೆ ಮತ ನೀಡುವಂತೆ ಮನವೊಲಿಸಬೇಕೆಂದರು.

  ಕಾಂಗ್ರೆಸ್‌ನ ಶ್ರೀನಿವಾಸ್‌ಗೆ ಜೆಡಿಎಸ್‌ ಸದಸ್ಯರ ಬೆಂಬಲ

ಚುನಾವಣೆ ಎಂಬುದು ರಾಜಕೀಯ ಜೀವನದ ಪ್ರಮುಖ ಘಟ್ಟ. ಈಗ ಹೆಚ್ಚು ಚುರುಕಾಗಿ ಕೆಲಸ ಮಾಡಬೇಕಾಗುತ್ತದೆ. ಐದು ವರ್ಷದ ನಮ್ಮ ಕೆಲಸಗಳಿಗೆ ಫಲ ಸಿಗಬೇಕಾದರೆ ಮುಂದಿನ ಒಂದು ತಿಂಗಳ ಕಾಲ ನಮ್ಮೆಲ್ಲಾ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಪಕ್ಷದ ಪರವಾಗಿ ಕೆಲಸ ಮಾಡಬೇಕಾಗಿದೆ. ಪಕ್ಷ ಅಧಿಕಾರಕ್ಕೆ ಬಂದರೆ ನಿಜಕ್ಕೂ ನಮಗೆ ಅಧಿಕಾರ ಸಿಗಲಿದೆ. ನಿಮಗೆ ಎಲ್ಲಾ ಕೆಲಸಗಳಿಗೆ ಜಿಲ್ಲಾ ಕಾಂಗ್ರೆಸ್‌ ಬೆಂಬಲವಾಗಿ ನಿಲ್ಲಲ್ಲಿದೆ. ಅಲ್ಲದೆ ಪಕ್ಷ ಅಧಿಕಾರಕ್ಕೆ ಬಂದರೆ ನಿಗಮ ಮಂಡಳಿಗಳಲ್ಲಿ ಸದಸ್ಯರು, ಸ್ಥಳೀಯ ಸಮಿತಿಗಳ ಸದಸ್ಯ ಸ್ಥಾನವನ್ನು ಪಕ್ಷಕ್ಕಾಗಿ ಹಗಲಿರುಳು ದುಡಿದವರನ್ನು ಗುರುತಿಸಿ ನೀಡಲಾಗುವುದು. ಹಾಗಾಗಿ ಎಲ್ಲರೂ ಸಕ್ರಿಯರಾಗಿ ಪಾಲ್ಗೊಂಡು ಈ ಬಾರಿ ಕಾಂಗ್ರೆಸ್‌ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಪ್ರಯತ್ನಿಸಬೇಕಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಚಂದ್ರಶೇಖರಗೌಡ ತಿಳಿಸಿದರು.

ವೇದಿಕೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಶಶಿಹುಲಿಕುಂಟೆ ಮಠ್‌, ರೈತ ಘಟಕದ ಜಿ.ಆರ್‌.ಗೌಡ, ಓ.ಬಿ.ಸಿ.ಘಟಕದ ಜಿಲ್ಲಾಧ್ಯಕ್ಷ ಪುಟ್ಟರಾಜು, ಪರಿಶಿಷ್ಟಜಾತಿ ಘಟಕದ ಲಿಂಗರಾಜು ಸೇರಿದಂತೆ ಜಿಲ್ಲೆಯ ಎಲ್ಲಾ ಮಂಚೂಣಿ ಘಟಕಗಳ ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.

ಕಾಂಗ್ರೆಸ್‌ನಿಂದ ಮಾತ್ರ ರಾಜ್ಯದ ಅಭಿವೃದ್ಧಿ

 ಕೊರಟಗೆರೆ :  ಬಡವರ ಕಷ್ಟತಿಳಿದಿರುವ ಕಾಂಗ್ರೆಸ್‌ ಆಡಳಿತದಲ್ಲಿ ಮಾತ್ರ ರಾಜ್ಯ ಅಭಿವೃದ್ಧಿಯಾಗಲು ಸಾಧ್ಯವಾಗಿದ್ದು, ದಿನ ನಿತ್ಯ ವಸ್ತುಗಳ ಬೆಲೆ ಹೆಚ್ಚಿಸುತ್ತಿರುವ ಬಿಜೆಪಿ ಪಕ್ಷಕ್ಕೆ ಮತ ನೀಡದೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವಂತೆ ಶಾಸಕ ಡಾ.ಜಿ.ಪರಮೇಶ್ವರ್‌ ತಿಳಿಸಿದರು.

ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಪರಿಶಿಷ್ಠ ಪಂಗಡ ಸಮುದಾಯ ಮುಖಂಡರ ಚಿಂತನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮೇ ತಿಂಗಳಲ್ಲಿ ನಡೆಯುವ ಚುನಾವಣೆಯಲ್ಲಿ ತಮ್ಮ ಬೆಂಬಲದಿಂದ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದು ಶೇ.100ರಷ್ಟುಖಚಿತವಾಗಿದ್ದು ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣ ಜನತೆಗೆ ಅನುಕೂಲವಾಗುವ ಯೋಜನೆಗಳಾದ ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 2 ಸಾವಿರ ರು.ಗಳಂತೆ ಪ್ರತಿ ತಿಂಗಳು ಅವರ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗುವುದು. ಅದರೊಂದಿಗೆ ಪ್ರತಿ ಮನೆಗೆ 200 ಯೂನಿಟ್‌ ವಿದ್ಯುತ್‌ ಉಚಿತ, ಕುಟುಂಬದ ಸದಸ್ಯರಿಗೆ ತಲಾ 10 ಕೆ.ಜಿ ಅಕ್ಕಿ ಹಾಗೂ ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ, ಡಿಪ್ಲೊಮೋ, ಪದವಿ ನಿರುದ್ಯೋಗಿ ಯುವಕ ಯುವತಿಯರಿಗೆ 1500 ರು. ನಿರುದ್ಯೋಗಿ ಭತ್ಯ ನೀಡಲಾಗುವುದು. ಚುನಾವಣೆಯಲ್ಲಿ ಬಡವರ ಅಭಿವೃದ್ಧಿಯ ಪಕ್ಷವಾದ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷವನ್ನು ಮನೆಗೆ ಕಳುಹಿಸಿ ಎಂದು ಮನವಿ ಮಾಡಿದರು.

PREV
Read more Articles on
click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಗೆಳೆಯರ ಜೊತೆ ಟ್ರಿಪ್ ಹೋಗಿದ್ದ ಬೆಂಗಳೂರು ನಿವಾಸಿ ಗೋವಾ ನೈಟ್ ಕ್ಲಬ್ ದುರಂತದಲ್ಲಿ ಮೃತ