ಯಲಚೇನಹಳ್ಳಿ ಡೋಮಿನೋಸ್ ಪಿಜ್ಜಾ ಕಟ್ಟಡದ ನೆಲಮಹಡಿಯಲ್ಲಿ ಅಗ್ನಿ ದುರಂತ: 19 ಇವಿ ಬೈಕ್‌ಗಳು ಸುಟ್ಟು ಕರಕಲು!

Published : Oct 02, 2025, 10:08 AM IST
Yelachenahalli

ಸಾರಾಂಶ

ಬೆಂಗಳೂರಿನ ಕನಕಪುರ ರಸ್ತೆಯ ಯಲಚೇನಹಳ್ಳಿಯಲ್ಲಿರುವ ಡೋಮಿನೋಸ್ ಪಿಜ್ಜಾ ಕಟ್ಟಡದ ನೆಲಮಹಡಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್‌ನಿಂದಾಗಿ 19 ಬೈಕ್‌ಗಳು ಸುಟ್ಟು ಕರಕಲಾಗಿದ್ದು, ಒಂದು ಸಿಲಿಂಡರ್ ಸ್ಫೋಟಗೊಂಡಿದೆ.

ಬೆಂಗಳೂರು: ನಗರದ ಕನಕಪುರ ರಸ್ತೆಯ ಯಲಚೇನಹಳ್ಳಿ ಪ್ರದೇಶದಲ್ಲಿ ಇಂದು ಬೆಳಗ್ಗೆ ದೊಡ್ಡ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ. ಕನಕಪುರ ರಸ್ತೆ ಮೆಟ್ರೋ ನಿಲ್ದಾಣದ ಸಮೀಪದಲ್ಲಿರುವ ಡೋಮಿನೋಸ್ ಪಿಜ್ಜಾ ಕಟ್ಟಡದ ನೆಲಮಹಡಿಯಲ್ಲಿ ಈ ದುರ್ಘಟನೆ ನಡೆದಿದೆ. ನೆಲಮಹಡಿಯಲ್ಲಿ ಸ್ಥಾಪಿಸಲಾಗಿದ್ದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಚಾರ್ಜಿಂಗ್ ವೇಳೆ ಓವರ್‌ಹೀಟ್‌ನಿಂದಾಗಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡಿದ್ದು, ನಂತರ ಪಾರ್ಕಿಂಗ್ ಪ್ರದೇಶದಲ್ಲಿದ್ದ ಗ್ಯಾಸ್ ಲೈನ್‌ಗೂ ಬೆಂಕಿ ವ್ಯಾಪಿಸಿದೆ. ಈ ವೇಳೆ ಒಂದು ಸಿಲಿಂಡರ್ ಸ್ಫೋಟಗೊಂಡಿದ್ದು, ಅದರ ತೀವ್ರತೆಗೆ ಭಾರೀ ಅವಘಡ ಸಂಭವಿಸಿದೆ.

19 ಎಲೆಕ್ಟ್ರಿಕ್ ಬೈಕ್‌ಗಳು ಸಂಪೂರ್ಣ ಭಸ್ಮ!

ಅವಘಡದಲ್ಲಿ ಪಾರ್ಕಿಂಗ್‌ನಲ್ಲಿ ನಿಲ್ಲಿಸಲಾಗಿದ್ದ 19 ಎಲೆಕ್ಟ್ರಿಕ್ ಬೈಕ್‌ಗಳು ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿವೆ. ಅಲ್ಲದೆ ಇನ್ನೂ ಆರು ಸಿಲಿಂಡರ್‌ಗಳಲ್ಲಿ ಗ್ಯಾಸು ಲೀಕೆಜ್ ಉಂಟಾಗಿರುವುದರಿಂದ ಪರಿಸ್ಥಿತಿ ತೀವ್ರವಾಗಿತ್ತು. ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ, ಎರಡು ಅಗ್ನಿಶಾಮಕ ವಾಹನಗಳು ತುರ್ತಾಗಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡವು.

ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

ಕೆ.ಎಸ್. ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗ್ಗೆ ಸುಮಾರು 7 ಗಂಟೆಯ ಸುಮಾರಿಗೆ ಸಂಭವಿಸಿದ ಈ ಅಗ್ನಿ ಅವಘಡದಿಂದ ಕಟ್ಟಡದ ನೆಲಮಹಡಿ ಸಂಪೂರ್ಣ ಹೊತ್ತಿ ಉರಿದರೂ, ಹೆಚ್ಚಿನ ಅನಾಹುತ ತಪ್ಪಿರುವುದು ಸಮಾಧಾನದ ವಿಷಯ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

PREV
Read more Articles on
click me!

Recommended Stories

ನಾದಬ್ರಹ್ಮ ಇಡ್ಲಿ ಸೆಂಟರ್‌ ಮಾಲೀಕ, 28 ವರ್ಷದ ಸಂದೇಶ್‌ ಹೃದಯಾಘಾತದಿಂದ ಸಾವು
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ