
ತುಮಕೂರು: ನೆರೆರಾಜ್ಯ ಆಂಧ್ರಪ್ರದೇಶದಲ್ಲಿ ಕೊರೋನಾ ಸೋಂಕಿಗೆ (ಕೋವಿಡ್-19) ಇಬ್ಬರು ಬಲಿಯಾಗಿರುವ ಬೆನ್ನಲ್ಲೇ, ಆಂಧ್ರಪ್ರದೇಶದೊಂದಿಗೆ ಸುದೀರ್ಘ ಗಡಿಯನ್ನು ಹಂಚಿಕೊಂಡಿರುವ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ತೀವ್ರ ಮುನ್ನೆಚ್ಚರಿಕೆ ವಹಿಸಲಾಗಿದೆ. ಗಡಿಭಾಗದಲ್ಲಿ ಕೋವಿಡ್ ಹರಡದಂತೆ ತಡೆಯಲು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಜಂಟಿಯಾಗಿ ಹೈ ಅಲರ್ಟ್ ಘೋಷಿಸಿದ್ದು, ಗಡಿ ದಾಟಿ ಬರುವವರ ಮೇಲೆ ತೀವ್ರ ನಿಗಾ ಇರಿಸಲಾಗಿದೆ.
ಆಂಧ್ರಪ್ರದೇಶದಿಂದ ಪಾವಗಡ ತಾಲೂಕಿಗೆ ಬರುವ ಸಾರ್ವಜನಿಕರು ಹಾಗೂ ವಾಹನಗಳ ತಪಾಸಣೆಗಾಗಿ ಗಡಿಭಾಗದ ಐದು ಆಯಕಟ್ಟಿನ ಸ್ಥಳಗಳಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಕೋವಿಡ್ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ರಾಜವಂತಿ, ನಾಗಲಮಡಿಕೆ, ಅರಸೀಕೆರೆ, ಮತ್ತು ಟಿ.ಎನ್. ಪೇಟೆ ಸೇರಿದಂತೆ ಒಟ್ಟು ಐದು ಸೂಕ್ಷ್ಮ ಪ್ರದೇಶಗಳಲ್ಲಿ ಚೆಕ್ಪೋಸ್ಟ್ ಕೇಂದ್ರಗಳನ್ನು ತೆರೆಯಲಾಗಿದೆ. ಈ ಎಲ್ಲಾ ಐದು ಕೇಂದ್ರಗಳಲ್ಲಿ ಅಗತ್ಯ ಆರೋಗ್ಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳನ್ನು ನಿಯೋಜಿಸಿ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕೃತ ಆದೇಶ ಹೊರಡಿಸಲಾಗಿದೆ.
ಗಡಿಭಾಗದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸಬಾರದು ಎಂದು ಪಾವಗಡ ತಹಶೀಲ್ದಾರ್ ಅವರು ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಆಂಧ್ರಪ್ರದೇಶದಿಂದ ಬರುವವರ ಮೇಲೆ ತೀವ್ರ ನಿಗಾ ಇಡಲು ಮತ್ತು ಗಡಿ ಗ್ರಾಮಗಳಲ್ಲಿ ಜನರಿಗೆ ಕೋವಿಡ್ ಮುನ್ನೆಚ್ಚರಿಕೆಗಳ ಬಗ್ಗೆ ಜಾಗೃತಿ ಮೂಡಿಸಲು ಪಿಡಿಒಗಳಿಗೆ ಆದೇಶ ಹೊರಡಿಸಲಾಗಿದೆ.
ನೆರೆರಾಜ್ಯ ಆಂಧ್ರದಲ್ಲಿ ಕೋವಿಡ್ ನಿಂದ ಸಾವು ವರದಿಯಾಗುತ್ತಿದ್ದಂತೆ ಎಚ್ಚೆತ್ತುಕೊಂಡ ತುಮಕೂರು ಜಿಲ್ಲಾಧಿಕಾರಿಗಳು ನಿನ್ನೆಯಷ್ಟೇ ಜಿಲ್ಲೆಯ ಎಲ್ಲಾ ತಹಶೀಲ್ದಾರ್ಗಳು ಮತ್ತು ಆರೋಗ್ಯ ಇಲಾಖೆಯ ಉನ್ನತಾಧಿಕಾರಿಗಳ ತುರ್ತು ಸಭೆ ನಡೆಸಿದ್ದರು. ಗಡಿಭಾಗದ ತಾಲೂಕುಗಳಲ್ಲಿ ತಕ್ಷಣವೇ ರಕ್ಷಣಾತ್ಮಕ ಮತ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ನೀಡಿದ್ದ ಕಟ್ಟುನಿಟ್ಟಿನ ಸೂಚನೆಯ ಬೆನ್ನಲ್ಲೇ, ಪಾವಗಡ ತಾಲೂಕು ಆಡಳಿತ ಸಕಲ ಸಿದ್ಧತೆಗಳೊಂದಿಗೆ ಕಣಕ್ಕಿಳಿದಿದೆ. ಸದ್ಯಕ್ಕೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲದಿದ್ದರೂ, ಗಡಿ ದಾಟುವಾಗ ತಪಾಸಣೆಗೆ ಸಹಕರಿಸಬೇಕು ಮತ್ತು ಅಗತ್ಯ ಮುನ್ನೆಚ್ಚರಿಕೆಗಳನ್ನು ಪಾಲಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.