
ಗದಗ/ಲಕ್ಷ್ಮೇಶ್ವರ (ಫೆ.21): ರಾಜ್ಯ ರಾಜಕಾರಣದಲ್ಲಿ ಭ್ರಷ್ಟಾಚಾರದ ವಿರುದ್ಧದ ಸಮರ ತೀವ್ರಗೊಂಡಿದ್ದು, ಇಂದು ಗದಗ ಜಿಲ್ಲೆಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಗುತ್ತಿಗೆದಾರರೊಬ್ಬರಿಂದ 5 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಾಸಕರನ್ನು ಕೆಂಪು ಹಸ್ತದಿಂದ (Red-handed) ಹಿಡಿಯಲಾಗಿದ್ದು, ಈ ಬೆಳವಣಿಗೆ ಜಿಲ್ಲೆಯಾದ್ಯಂತ ಭಾರಿ ಸಂಚಲನ ಮೂಡಿಸಿದೆ.
ರಸ್ತೆ ಕಾಮಗಾರಿವೊಂದಕ್ಕೆ ಸಂಬಂಧಿಸಿದಂತೆ ಬಿಲ್ ಮಂಜೂರು ಮಾಡಲು ಶಾಸಕ ಚಂದ್ರು ಲಮಾಣಿ ಅವರು ಗುತ್ತಿಗೆದಾರ ವಿಜಯ ಪೂಜಾರ ಎಂಬುವವರಿಂದ ಒಟ್ಟು 11 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ 'ಡೀಲ್' ಕುರಿತಂತೆ ಗುತ್ತಿಗೆದಾರರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಮುಂಗಡವಾಗಿ 5 ಲಕ್ಷ ರೂಪಾಯಿ ಹಣವನ್ನು ಸ್ವೀಕರಿಸುವ ಸಂದರ್ಭದಲ್ಲಿ ಧಾರವಾಡ ಲೋಕಾಯುಕ್ತ ಪೊಲೀಸರು ಮಿಂಚಿನ ದಾಳಿ ನಡೆಸಿ ಶಾಸಕರನ್ನು ವಶಕ್ಕೆ ಪಡೆದಿದ್ದಾರೆ.
ಲಕ್ಷ್ಮೇಶ್ವರ ಪಟ್ಟಣದ ಪಂಪ್ ಸರ್ಕಲ್ ಬಳಿ ಇರುವ ಶಾಸಕರ ನಿವಾಸ ಹಾಗೂ ಅವರಿಗೆ ಸೇರಿದ 'ಬಾಲಾಜಿ ಆಸ್ಪತ್ರೆ'ಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಅವರ ನೇತೃತ್ವದ ತಂಡ ಕಳೆದ ಒಂದು ಗಂಟೆಯಿಂದ ಸತತ ಶೋಧ ಕಾರ್ಯ ನಡೆಸುತ್ತಿದೆ. ಆಸ್ಪತ್ರೆ ಮತ್ತು ಮನೆಯಲ್ಲಿರುವ ಪ್ರಮುಖ ದಾಖಲೆಗಳು ಹಾಗೂ ಅಕ್ರಮ ಆಸ್ತಿಪಾಸ್ತಿಗೆ ಸಂಬಂಧಿಸಿದ ಕಡತಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಶಾಸಕರ ಜೊತೆಗೆ ಅವರ ಆಪ್ತ ಸಹಾಯಕರಾದ ಸರ್ಕಾರಿ ಪಿಎ ಮಂಜುನಾಥ ವಾಲ್ಮೀಕಿ ಹಾಗೂ ಖಾಸಗಿ ಪಿಎ ಗುರು ಲಾವಣಿ ಅವರನ್ನೂ ಲೋಕಾಯುಕ್ತ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಲಂಚದ ಹಣ ವರ್ಗಾವಣೆಯಲ್ಲಿ ಇವರ ಪಾತ್ರದ ಬಗ್ಗೆಯೂ ಸಂಶಯವಿದ್ದು, ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.
ಶಿರಹಟ್ಟಿ ಕ್ಷೇತ್ರದ ಶಾಸಕರ ಮೇಲೆ ಈ ರೀತಿ ಲೋಕಾಯುಕ್ತ ದಾಳಿ ನಡೆದಿರುವುದು ಬಿಜೆಪಿ ಪಾಳಯಕ್ಕೆ ದೊಡ್ಡ ಮುಜುಗರ ತಂದೊಡ್ಡಿದೆ. ಲಕ್ಷ್ಮೇಶ್ವರ ಪಟ್ಟಣದಲ್ಲಿ ಶಾಸಕರ ಬೆಂಬಲಿಗರು ಜಮಾಯಿಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಧಾರವಾಡ ಮತ್ತು ಗದಗ ಲೋಕಾಯುಕ್ತ ಪೊಲೀಸರ ಜಂಟಿ ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಗುತ್ತಿಗೆದಾರರಿಂದ ಹಣ ವಸೂಲಿ ಮಾಡುತ್ತಿರುವ ಆರೋಪದ ಮೇಲೆ ಶಾಸಕರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸಿದ್ಧತೆ ನಡೆದಿದೆ.