
ಕೊಪ್ಪಳ (ಏ.30): ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ತೀರ್ಪು ಹೊರಬಿದ್ದಿದೆ. ಪ್ರಕರಣದ ಪ್ರಮುಖ ಆರೋಪಿ ರವಿ ಸೇರಿದಂತೆ ಒಟ್ಟು ಆರು ಜನ ಹಂತಕರಿಗೆ ಗಲ್ಲು ಶಿಕ್ಷೆ (Death Penalty) ವಿಧಿಸಿ ಗಂಗಾವತಿಯ ನ್ಯಾಯಾಲಯ ಐತಿಹಾಸಿಕ ಆದೇಶ ನೀಡಿದೆ.
ಗಂಗಾವತಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಅವರು ಈ ಕಠಿಣ ಶಿಕ್ಷೆಯನ್ನು ಪ್ರಕಟಿಸಿದ್ದಾರೆ. ಹಂತಕರಾದ ರವಿ, ವಿಜಯ್ ಅಲಿಯಾಸ್ ಮೈಲಾರಿ, ಧನರಾಜ್, ಭೀಮ್ ಅಲಿಯಾಸ್ ಭರತ್, ಸಲೀಂ ಮತ್ತು ಗಂಗಾಧರ ಗೌಳಿ ಅವರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಗಲ್ಲು ಶಿಕ್ಷೆಯ ಜೊತೆಗೆ ಪ್ರತಿಯೊಬ್ಬ ಆರೋಪಿಗೂ ತಲಾ 3 ಲಕ್ಷ ರೂಪಾಯಿ ದಂಡವನ್ನು ವಿಧಿಸಲಾಗಿದ್ದು, ಈ ಹಣವನ್ನು ಸಂತ್ರಸ್ತ ಕುಟುಂಬಕ್ಕೆ ನೀಡುವಂತೆ ಆದೇಶಿಸಲಾಗಿದೆ.
ಕಳೆದ 2025ರ ಅಕ್ಟೋಬರ್ 7 ಮತ್ತು 8ರ ಮಧ್ಯರಾತ್ರಿ ಗಂಗಾವತಿಯಲ್ಲಿ ಹಳೆ ದ್ವೇಷದ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಕೊಲೆ ಪ್ರಕರಣವು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಹಂತಕರು ಸಂಚು ರೂಪಿಸಿ ಅತ್ಯಂತ ಕ್ರೂರವಾಗಿ ವೆಂಕಟೇಶ್ ಅವರನ್ನು ಹತ್ಯೆ ಮಾಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಗಂಗಾವತಿ ನಗರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿ ರವಿ ಸೇರಿ ಒಟ್ಟು 12 ಮಂದಿಯನ್ನು ಬಂಧಿಸಿದ್ದರು.
ಗಂಗಾವತಿ ನಗರ ಪೊಲೀಸರು ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದರು. ತನಿಖೆ ನಡೆಸಿದ ಅಧಿಕಾರಿಗಳು ಸುಮಾರು 927 ಪುಟಗಳ ಬೃಹತ್ ಚಾರ್ಜ್ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಸಾಕ್ಷ್ಯಾಧಾರಗಳು ಮತ್ತು ತಾಂತ್ರಿಕ ದಾಖಲೆಗಳನ್ನು ವ್ಯವಸ್ಥಿತವಾಗಿ ಸಂಗ್ರಹಿಸಿದ್ದರಿಂದ ಆರೋಪಿಗಳಿಗೆ ಗರಿಷ್ಠ ಶಿಕ್ಷೆಯಾಗಲು ಸಾಧ್ಯವಾಗಿದೆ.
ಈ ಕೊಲೆ ಪ್ರಕರಣದಲ್ಲಿ ಒಟ್ಟು 12 ಜನರ ಮೇಲೆ ಆರೋಪ ಹೊರಿಸಲಾಗಿತ್ತು. ಆದರೆ, ಏಪ್ರಿಲ್ 23 ರಂದು ನ್ಯಾಯಾಲಯವು ಸಾಕ್ಷ್ಯಾಧಾರಗಳ ಕೊರತೆಯಿಂದ ಕಾರ್ತಿಕ್, ದಾದಪೀರ್, ಮಹಮ್ಮದ್ ಅಲ್ತಾಪ್, ಮಲ್ಲಿಕಾರ್ಜುನ, ಹರ್ತೋಟಿ ಶರಣ ಮತ್ತು ಚೈತ್ರಾ ಎಂಬುವವರನ್ನು ನಿರ್ದೋಷಿಗಳೆಂದು ಘೋಷಿಸಿತ್ತು. ಉಳಿದ ಆರು ಮಂದಿ ದೋಷಿಗಳು ಎಂದು ತೀರ್ಪು ನೀಡಿ, ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.
ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಗಂಗಾವತಿ ನ್ಯಾಯಾಲಯದ ಆವರಣದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಶಿಕ್ಷೆಗೊಳಗಾದ ಆರು ಜನ ಆರೋಪಿಗಳನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ಎರಡು ಪ್ರತ್ಯೇಕ ವ್ಯಾನ್ಗಳಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಧೀಶರು ತೀರ್ಪು ಓದುತ್ತಿದ್ದಂತೆ ನ್ಯಾಯಾಲಯದ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವೆಂಕಟೇಶ್ ಕುರುಬರ ಕುಟುಂಬಕ್ಕೆ ಕೊನೆಗೂ ನ್ಯಾಯ ಸಿಕ್ಕಂತಾಗಿದ್ದು, ನ್ಯಾಯಾಲಯದ ಈ ಕಠಿಣ ತೀರ್ಪು ಸಮಾಜಕ್ಕೆ ದೊಡ್ಡ ಸಂದೇಶ ರವಾನಿಸಿದೆ.