
ಹೊಸಕೋಟೆ (ಅ.16): ಸರ್ಕಾರಿ ಕಾರ್ಯಕ್ರಮಗಳನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ‘ಜಿಲ್ಲಾಧಿಕಾರಿಗಳ ನಡೆ, ಹಳ್ಳಿ ಕಡೆಗೆ’ ಕಾರ್ಯಕ್ರಮ ನಿರೀಕ್ಷೆಗೂ ಮೀರಿ ರಾಜ್ಯದಲ್ಲಿ ಯಶಸ್ವಿಯಾಗಿದೆ. ಸರ್ಕಾರಿ ಸೌಲಭ್ಯಗಳನ್ನು ವ್ಯವಸ್ಥಿತವಾಗಿ, ಕ್ರಮಬದ್ಧವಾಗಿ ಒದಗಿಸಲು ಅಧಿಕಾರಿಗಳು ಪರಿಶ್ರಮದಿಂದ ಕಾರ್ಯ ನಿರ್ವಹಿಸಬೇಕು ಎಂದು ಪೌರಾಡಳಿತ ಸಚಿವ ಎನ್.ನಾಗರಾಜು (ಎಂಟಿಬಿ) ಹೇಳಿದರು.
ತಾಲೂಕಿನ ನಂದಗುಡಿ ಗ್ರಾಮದಲ್ಲಿ ನಡೆದ ಜಿಲ್ಲಾಕಾರಿಗಳ ನಡೆ, ಹಳ್ಳಿಗಳ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಕಚೇರಿಗಳಿಗೆ ರೈತರು, ಬಡವರು, ಸಾರ್ವಜನಿಕರ ಅಲೆದಾಟ ತಪ್ಪಿಸಲು ಈ ಕಾರ್ಯಕ್ರಮ ಜಾರಿಗೊಳಿಸಿದೆ. ಅಧಿಕಾರಿಗಳೇ ಮನೆ ಬಾಗಿಲಿಗೆ ಬರುವುದರಿಂದ ಕಂದಾಯ ಸೇರಿದಂತೆ ವಿವಿಧ ಇಲಾಖೆ ಸೌಲಭ್ಯಗಳನ್ನು ಒಂದೇ ಸೂರಿನಡಿ ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಮೂಲಕ ಪ್ರಸ್ತುತ ಸರ್ಕಾರ ಜನರ ಸವಾಂರ್ಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದರು.
ಹೊಸೂರಿನಲ್ಲಿ ಉಸಿರಾಟದ ತೊಂದರೆಯಾಗಿ ಸರ್ಕಾರಿ ಶಾಲೆಯ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಹೊಸಕೋಟೆ ತಾಲೂಕು ವ್ಯಾಪ್ತಿಯಲ್ಲಿ 28 ಗ್ರಾಮ ಪಂಚಾಯಿತಿಗಳಿವೆ. ಇದುವರೆಗೆ 9 ಗ್ರಾಪಂಗಳಲ್ಲಿ ‘ಜಿಲ್ಲಾಧಿಕಾರಿಗಳ ನಡೆ, ಹಳ್ಳಿ ಕಡೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸರ್ಕಾರಿ ನಿವೇಶನ, ಮನೆ ಹಕ್ಕುಪತ್ರ ಸೌಲಭ್ಯಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಗ್ರಾಪಂ ಮಟ್ಟದಲ್ಲಿ ನಿಸ್ಪಕ್ಷಪಾತವಾಗಿ ಫಲಾನುಭವಿಗಳನ್ನು ಆಯ್ಕೆ ಮಾಡುವ ಮೂಲಕ ಬಡವರಿಗೆ, ನಿರ್ಗತಿಕರಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ ಒಟ್ಟಾರೆ ಅರ್ಹರಿಗೆ ಸರ್ಕಾರಿ ಸವಲತ್ತುಗಳನ್ನು ತಲುಪಿಸಬೇಕು ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿ,‘ಜಿಲ್ಲಾಕಾರಿಗಳ ನಡೆ, ಹಳ್ಳಿ ಕಡೆ’ ಕಾರ್ಯಕ್ರಮ ಜನರ ಅನುಕೂಲಕ್ಕಾಗಿ ಸರ್ಕಾರ ಜಾರಿಗೊಳಿಸಿದೆ. ಸಾರ್ವಜನಿಕರು ಮುಕ್ತವಾಗಿ ತಮ್ಮ ಅಹವಾಲು ಸಲ್ಲಿಸಿ ಸಮಸ್ಯೆಬಗೆಹರಿಸಲು ಸದುಪಯೋಗಿಸಿಕೊಳ್ಳಬಹುದು. ಸರ್ಕಾರ ಗ್ರಾಮವೊಂದನ್ನು ಆಯ್ಕೆ ಮಾಡಿ ಕಾರ್ಯಕ್ರಮ ರೂಪಿಸಿಲು ಆದೇಶಿಸಿತ್ತು. ಆದರೆ ಸ್ವಲ್ಪ ಬದಲಾವಣೆ ಮಾಡಿ ಗ್ರಾಮ ಪಂಚಾಯಿತಿವಾರು ಕಾರ್ಯಕ್ರಮ ನಡೆಸಲಾಗುತ್ತಿದೆ. ಇದರಿಂದ ಗ್ರಾಪಂ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ, ಕಡಿಮೆ ಅವಧಿಯಲ್ಲಿ ಹೆಚ್ಚು ಜನರಿಗೆ ಸವಲತ್ತು ತಲುಪಿಸಲು ಸಾಧ್ಯವಾಗಿದೆ ಎಂದರು.
ಸಿದ್ದರಾಮಯ್ಯ ನನಗೆ ಫೋನ್ ಮಾಡ್ತಾರೆ : ಎಂಟಿಬಿ ನಾಗರಾಜ್
ಕಾರ್ಯಕ್ರಮದಲ್ಲಿ ನಂದಗುಡಿ ಗ್ರಾಪಂ ಅಧ್ಯಕ್ಷೆ ಗಾಯತ್ರಿನಾಗೇಶ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಜಿಪಂ ಸಿಇಒ ರೇವಣ್ಣಪ್ಪ, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ತೇಜಸ್ಕುಮಾರ್, ತಹಶೀಲ್ದಾರ್ ಮಹೇಶ್ಕುಮಾರ್, ತಾಪಂ ಇಒ ಚಂದ್ರಶೇಖರ್, ಡಿವೈಎಸ್ಪಿ ಉಮಾಶಂಕರ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಸುತ್ತಮುತ್ತಲಿನ ಗ್ರಾಮಸ್ಥರು, ಜಿಲ್ಲಾ, ತಾಲೂಕು ಹಾಗೂ ಸ್ಥಳೀಯ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.