ಕೊರೋನಾ: ಈದ್‌-ಮಿಲಾದ್‌ ಆಚ​ರ​ಣೆಗೆ ಮಾರ್ಗಸೂಚಿ ಪಾಲನೆ ಕಡ್ಡಾಯ

By Kannadaprabha NewsFirst Published Oct 29, 2020, 3:18 PM IST
Highlights

ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ (ಜುಲೂಸ್‌), ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದು ಕಡ್ಡಾಯವಾಗಿ ನಿಷೇಧ| ಖಬರಸ್ತಾನ್‌ ಒಳಗೊಂಡಂತೆ ಯಾವುದೇ ರೀತಿಯ ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮುಂತಾದವುಗಳನ್ನು ಆಯೋಜಿಸುವಂತಿಲ್ಲ|

ಕೊಪ್ಪಳ(ಅ.29): ಕೋವಿಡ್‌ ಹಿನ್ನೆಲೆಯಲ್ಲಿ ಅ. 30ರಂದು ಆಚರಿಸಲಾಗುವ ಈದ್‌-ಮಿಲಾದ್‌ ಹಬ್ಬದ ಸಮಯದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಫ್ ಇಲಾಖೆ ನೀಡಿರುವ ಮಾರ್ಗಸೂಚಿಗಳನ್ನು ಜಿಲ್ಲೆಯ ಎಲ್ಲಾ ಮಸೀದಿ ಹಾಗೂ ದರ್ಗಾಗಳು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಸೂಚಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಹಬ್ಬದ ಪ್ರಯುಕ್ತ ನೆರವೇರಿಸಲಿರುವ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ (ಜುಲೂಸ್‌), ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ, ಸಭೆ ಸಮಾರಂಭಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೊಪ್ಪಳ: ನಕಲಿ ಬಂಗಾರ ಕೊಟ್ಟು 15 ಲಕ್ಷ ವಂಚ​ನೆ, ಕಂಗಾಲಾದ ವ್ಯಕ್ತಿ

ಮಸೀದಿಗಳಲ್ಲಿ ದರ್ಗಾಗಳಲ್ಲಿ ಸಾಮಾಜಿಕ ಅಂತರ ಹಾಗೂ ಕೋವಿಡ್‌-19ರ ಶಿಷ್ಟಾಚಾರದೊಂದಿಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳ ಜೊತೆಗೆ ದೈಹಿಕ ಅಂತರ ಕಾಪಾಡಿಕೊಳ್ಳಬೇಕು. ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕಗಳ, ಡಿಜಿಟಲ್‌ ಸೌಂಡ್‌ ಸಿಸ್ಟಮ್‌ (ಡಿ.ಜೆ) ಬಳಕೆಯನ್ನು ನಿಷೇಧಿಸಲಾಗಿದೆ. ಮುಖಗವಸುಗಳನ್ನು (ಮಾಸ್ಕ್‌) ಕಡ್ಡಾಯವಾಗಿ ಎಲ್ಲರೂ ಉಪಯೋಗಿಸಬೇಕು ಎಂದು ಹೇಳಿದ್ದಾರೆ. 

60 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಹಬ್ಬದ ಆಚರಣೆ ಮಾಡಬೇಕು. ಸ್ಯಾನಿಟೈಸರ್‌ ಹಾಗೂ ಸೋಪಿನೊಂದಿಗೆ ಕೈ ತೊಳೆಯಲು ಪ್ರವೇಶ ದ್ವಾರದಲ್ಲಿ ಸೂಕ್ತ ವ್ಯವಸ್ಥೆ ಮಾಡಬೇಕು. ಕಡ್ಡಾಯವಾಗಿ ಎಲ್ಲರೂ 6 ಅಡಿ ದೈಹಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಖಬರಸ್ತಾನ್‌ ಒಳಗೊಂಡಂತೆ ಯಾವುದೇ ರೀತಿಯ ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮುಂತಾದವುಗಳನ್ನು ಆಯೋಜಿಸುವಂತಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

click me!