ಕೆ.ಜಿ.ಹಳ್ಳಿ ಕೇಸ್‌ ಸಿಬಿಐ ತನಿಖೆಗೆ ಕೋರಿದ್ದ ಉದ್ಯಮಿಗೆ ಲಕ್ಷ ದಂಡ

By Kannadaprabha NewsFirst Published Mar 4, 2021, 7:09 AM IST
Highlights

ಅರ್ಜಿದಾರರಿಗೂ ಪ್ರಕರಣಕ್ಕೂ ಯಾವುದೇ ಸಂಬಂಧವೂ ಇಲ್ಲ| ತನಿಖೆ ಸಮರ್ಪಕವಾಗಿ ನಡೆದಿಲ್ಲ ಎಂದು ತಿಳಿಸಿ ಸುಖಾಸುಮ್ಮನೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಅರ್ಜಿದಾರ| ಕೋರ್ಟ್‌ನ ಅಮೂಲ್ಯ ಸಮಯ ವ್ಯರ್ಥವಾಗಿದ್ದು, ಅರ್ಜಿ ವಜಾಗೊಳಿಸಬೇಕು ಎಂದು ಕೋರಿದ್ದ ವಕೀಲ| 

ಬೆಂಗಳೂರು(ಮಾ.04): ನಗರದ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ಆದೇಶಿಸುವಂತೆ ಕೋರಿ ಕ್ರಿಮಿನಲ್‌ ಅರ್ಜಿ ಸಲ್ಲಿಸಿದ್ದ ಉದ್ಯಮಿ ಆಲಂ ಪಾಷಾಗೆ ಒಂದು ಲಕ್ಷ ರು. ದಂಡ ವಿಧಿಸಿ ಹೈಕೋರ್ಟ್‌ ಆದೇಶಿಸಿದೆ.

ಆಲಂ ಪಾಷಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್‌.ಪಿ. ಸಂದೇಶ್‌ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ವಿಚಾರಣೆ ವೇಳೆ ಸರ್ಕಾರ ಮತ್ತು ಪೊಲೀಸರ ಪರ ರಾಜ್ಯ ಸರ್ಕಾರಿ ಅಭಿಯೋಜಕ ವಿ.ಎಂ. ಶೀಲವಂತ ವಾದ ಮಂಡಿಸಿ, ಪ್ರಕರಣ ಕುರಿತು ಪೊಲೀಸರು ನಡೆಸಿರುವ ತನಿಖೆಯಲ್ಲಿ ಲೋಪವಾಗಿರುವ ಕಾರಣ ಸಿಬಿಐ ತನಿಖೆಗೆ ಆದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ. ಆದರೆ, ತನಿಖೆಯಲ್ಲಿ ಯಾವುದೇ ಲೋಪವಾಗಿಲ್ಲ. ಈ ಕುರಿತು ಪ್ರಕರಣದ ದೂರುದಾರರಾಗಲಿ,ಅಥವಾ ಆರೋಪಿಯಾಗಲಿ ಆಕ್ಷೇಪ ಮಾಡಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಡಿಜೆ ಹಳ್ಳಿ ಗಲಭೆ: ಸಂಪತ್‌ ರಾಜ್‌ಗೆ ಕ್ಲೀನ್‌ಚಿಟ್, ಅಖಂಡ ಅಸಮಾಧಾನ; ಕಾಂಗ್ರೆಸ್‌ನಲ್ಲಿ ಏನಾಗ್ತಿದೆ.?

ಅಲ್ಲದೆ, ಅರ್ಜಿದಾರರಿಗೂ ಪ್ರಕರಣಕ್ಕೂ ಯಾವುದೇ ಸಂಬಂಧವೂ ಇಲ್ಲ. ತನಿಖೆ ಸಮರ್ಪಕವಾಗಿ ನಡೆದಿಲ್ಲ ಎಂದು ತಿಳಿಸಿ ಸುಖಾಸುಮ್ಮನೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದರಿಂದ ಕೋರ್ಟ್‌ನ ಅಮೂಲ್ಯ ಸಮಯ ವ್ಯರ್ಥವಾಗಿದ್ದು, ಅರ್ಜಿ ವಜಾಗೊಳಿಸಬೇಕು ಎಂದು ಕೋರಿದರು. ಈ ವಾದ ಪುರಸ್ಕರಿಸಿ ಅರ್ಜಿ ವಜಾ ಮಾಡಿದ ನ್ಯಾಯಪೀಠ, ವಿನಾಕಾರಣ ಅರ್ಜಿ ಸಲ್ಲಿಸಿ ನ್ಯಾಯಾಲಯದ ಸಮಯ ವ್ಯರ್ಥ ಮಾಡಲಾಗಿದೆ ಎಂದು ಅಭಿಪ್ರಾಯಪಟ್ಟು ಅರ್ಜಿದಾರರಿಗೆ ಒಂದು ಲಕ್ಷ ರು. ದಂಡ ವಿಧಿಸಿತು.
 

click me!