ಬಡ ಕೊರೋನಾ ಸೋಂಕಿತರ ಚಿಕಿತ್ಸಾ ವೆಚ್ಚ ಭರಿಸುವೆ ಎಂದ ಸಚಿವ

By Kannadaprabha NewsFirst Published Apr 29, 2021, 12:04 PM IST
Highlights

ಬಿಪಿಎಲ್‌ ಕಾರ್ಡುದಾರರಿಗೆ ಸಚಿವ ಬಿ.ಸಿ. ಪಾಟೀಲ್‌ ಭರವಸೆ| ಹಾವೇರಿ ಜಿಲ್ಲೆಯ ಹಿರೇಕೆರೂರು ವಿಧಾನಸಭಾ ಕ್ಷೇತ್ರ| ಹಾವೇರಿ ಜಿಲ್ಲೆಯ ಯಾವುದೇ ಖಾಸಗಿ ಆಸ್ಪತ್ರೆಯಲ್ಲಿ ಪಡೆದರೂ ಅದರ ವೆಚ್ಚವನ್ನು ಭರಿಸುತ್ತೇನೆ| ಕೊರೋನಾ ಬಗ್ಗೆ ಭಯಪಡುವ ಅವಶ್ಯಕತೆ ಇಲ್ಲ. ಧೈರ್ಯವಾಗಿ ಇರಿ. ನಿಮ್ಮೊಂದಿಗೆ ನಾವಿದ್ದೇವೆ ಎಂದ ಕೌರವ| 

ಹಿರೇಕೆರೂರು(ಏ.29): ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಬಿಪಿಎಲ್‌ ಕಾರ್ಡು ಹೊಂದಿದ ಬಡಜನರ ಕೊರೋನಾ ಚಿಕಿತ್ಸೆಯ ವೆಚ್ಚವನ್ನು ಭರಿಸುತ್ತೇನೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಭರವಸೆ ನೀಡಿದ್ದಾರೆ.

ಪಟ್ಟಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲೂಕಿನ ಬಿಪಿಎಲ್‌ ಕಾರ್ಡ್‌ ಹೊಂದಿದ ಬಡಜನರು ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆಯನ್ನು ಸರ್ಕಾರಿ ಆಸ್ಪತ್ರೆ ಹೊರತುಪಡಿಸಿ ಹಾವೇರಿ ಜಿಲ್ಲೆಯ ಯಾವುದೇ ಖಾಸಗಿ ಆಸ್ಪತ್ರೆಯಲ್ಲಿ ಪಡೆದರೂ ಅದರ ವೆಚ್ಚವನ್ನು ಭರಿಸುತ್ತೇನೆ. ಆಸ್ಪತ್ರೆಯ ಬಿಲ್‌ ಮತ್ತು ತಮ್ಮ ಗುರುತಿನ ಚೀಟಿಯೊಂದಿಗೆ ಆಪ್ತ ಸಹಾಯಕರಾದ ನಾಗರಾಜ ಬಣಕಾರ (ಮೊ. 9739310272) ಮತ್ತು ಮನೋಜ ಹಾರ್ನಳ್ಳಿ (ಮೊ. 9164704080) ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ತಾಲೂಕಿನಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮಂಗಳವಾರ ಜಿಲ್ಲೆಯಲ್ಲಿಯೇ ಹೆಚ್ಚು ಕೊರೋನಾ ಪ್ರಕರಣ ಹಿರೇಕೆರೂರು ತಾಲೂಕಿನಲ್ಲಿ ದಾಖಲಾಗಿವೆ. ಕೊರೋನಾ ಬಗ್ಗೆ ಭಯಪಡುವ ಅವಶ್ಯಕತೆ ಇಲ್ಲ. ಧೈರ್ಯವಾಗಿ ಇರಿ. ನಿಮ್ಮೊಂದಿಗೆ ನಾವಿದ್ದೇವೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್‌ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಮತ್ತು ಅನಾವಶ್ಯಕವಾಗಿ ಓಡಾಡುವುದನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.

ನಮ್ಮಂಥ ಬಡವರು ಬದುಕಲು ಇದು ಕಾಲವಲ್ಲ: ಬೀದಿ ಬದಿ ವ್ಯಾಪಾರಿಗಳ ಅಳಲು..!

ಪಟ್ಟಣಗಳಿಂದ ಹಳ್ಳಿಗಳಿಗೆ ಜನರು ವಲಸೆ ಬರುತ್ತಿದ್ದು, ಹೀಗಾಗಿ ಗ್ರಾಮೀಣ ಭಾಗದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹಳ್ಳಿಗಳಿಗೆ ಬೆಂಗಳೂರು ಮತ್ತು ಬೇರೆ ಬೇರೆ ಪಟ್ಟಣಗಳಿಂದ ಬಂದ ಜನರು ಸ್ವಯಂಪ್ರೇರಿತವಾಗಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡರೆ ಉತ್ತಮ. ತಾಲೂಕಿನ ಪಿಡಿಒಗಳು ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಹೊರಗಡೆಯಿಂದ ಬರುವಂಥವರನ್ನು ಗುರುತಿಸಿ ಅವರಿಗೆ ಕಡ್ಡಾಯ ಕೋವಿಡ್‌ ಪರೀಕ್ಷೆ ಮಾಡಿಸಬೇಕು. ಒಂದು ವೇಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾದರೆ ಅದಕ್ಕೆ ಅಲ್ಲಿಯ ಪಿಡಿಒ ಹೊಣೆಗಾರರು. ಆದ್ದರಿಂದ ಗ್ರಾಮೀಣ ಭಾಗದಲ್ಲಿ ಕೊರೋನಾ ನಿಯಂತ್ರಣಕ್ಕೆ ಪಿಡಿಒಗಳ ಪಾತ್ರ ಮುಖ್ಯ ಎಂದು ಹೇಳಿದ್ದಾರೆ.

ಜನತಾ ಕರ್ಫ್ಯೂ ಇದ್ದರೂ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಕ್ರಮಗಳನ್ನು ಕೈಗೊಂಡಿದ್ದು, ಕೃಷಿ ಚಟುವಟಿಕೆಗಳಿಗಾಗಿ ಓಡಾಡುವ ಸಾರ್ವಜನಿಕರಿಗೆ ಗ್ರೀನ್‌ ಪಾಸ್‌ ವ್ಯವಸ್ಥೆ ಮಾಡಲಾಗಿದೆ. ಸಂಬಂಧಪಟ್ಟ ಇಲಾಖೆಯಿಂದ ಪಾಸ್‌ ಪಡೆದು ದುರುಪಯೋಗ ಪಡಿಸಿಕೊಳ್ಳದೆ ಅವಶ್ಯಕತೆ ಇದ್ದರೆ ಮಾತ್ರ ಹೊರಗಡೆ ಬನ್ನಿ ಎಂದು ಕೋರಿದರು.

click me!