
ಬೆಂಗಳೂರು (ಸೆ.18): ರಾಜ್ಯ ಸರ್ಕಾರವು ನಡೆಸಲು ಉದ್ದೇಶಿಸಿರುವ ಜಾತಿಗಣತಿ ಯೋಜನೆಗೆ ದೊಡ್ಡ ಹಿನ್ನಡೆ ಎದುರಾಗಿದೆ. ಈ ಗಣತಿ ಪ್ರಕ್ರಿಯೆಯನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸೇರಿದಂತೆ ಎರಡು ಪ್ರತ್ಯೇಕ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಅರ್ಜಿಗಳಿಂದಾಗಿ ಸರ್ಕಾರದ ಮುಂದಿನ ನಡೆಯ ಮೇಲೆ ಹೈಕೋರ್ಟ್ನ ತೀರ್ಪು ನಿರ್ಣಾಯಕವಾಗುವ ಸಾಧ್ಯತೆಯಿದೆ.
ವಕೀಲ ಕೆ.ಎನ್. ಸುಬ್ಬಾರೆಡ್ಡಿ ಸೇರಿದಂತೆ ನಾಲ್ವರು ಸಲ್ಲಿಸಿರುವ ಅರ್ಜಿಯಲ್ಲಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಜಾತಿಗಣತಿ ನಡೆಸುವ ಅಧಿಕಾರ ಇಲ್ಲ ಎಂದು ವಾದಿಸಿದ್ದಾರೆ. ಅಲ್ಲದೆ, ಸರ್ಕಾರವು 1,500 ಜಾತಿಗಳು ಮತ್ತು ಉಪಜಾತಿಗಳನ್ನು ಸರಿಯಾಗಿ ವರ್ಗೀಕರಿಸದೆ ಒಂದಕ್ಕೊಂದು ಮಿಶ್ರಣ ಮಾಡಿದೆ. ಇದು ಕಾನೂನು ಬಾಹಿರ ಮತ್ತು ಅಧಿಕಾರ ವ್ಯಾಪ್ತಿ ಮೀರಿದ ಕ್ರಮ ಎಂದು ಆರೋಪಿಸಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ, ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಹಿಂದುಳಿದ ವರ್ಗಗಳ ಇಲಾಖೆಯ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವಾಲಯ ಹಾಗೂ ಭಾರತ ಜನಗಣತಿ ಆಯೋಗವನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಈ ಗಣತಿ ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ.
ವಿವಿಧ ಹಿಂದುಳಿದ ಸಮುದಾಯಗಳ ಮುಖಂಡರು ಸಲ್ಲಿಸಿರುವ ಎರಡನೇ ಅರ್ಜಿಯಲ್ಲಿ, ಸರ್ಕಾರ ಜಾತಿ ಸಮೀಕ್ಷೆ ನಡೆಸಲು ಬಿಎನ್ಎಸ್ 340 ಮತ್ತು 341ರ ಪ್ರಕಾರ ಯಾವುದೇ ಅಧಿಕಾರ ಹೊಂದಿಲ್ಲ ಎಂದು ವಾದಿಸಲಾಗಿದೆ. ಈ ಅರ್ಜಿ ಸಲ್ಲಿಸಿದವರಲ್ಲಿ ಮಾಜಿ ಶಾಸಕ ನೆ.ಲ. ನರೇಂದ್ರ ಬಾಬು, ಮಾಜಿ ಕಾರ್ಪೊರೇಟರ್ ಸೋಮಶೇಖರ್, ಕರುಣಾಕರ್ ಖಾಸಲೆ ಸೇರಿದಂತೆ ಅನೇಕ ಪ್ರಮುಖರು ಸೇರಿದ್ದಾರೆ.
ಈ ಎಲ್ಲ ಅಂಶಗಳನ್ನು ಉಲ್ಲೇಖಿಸಿ, ಸರ್ಕಾರ ಜಾತಿ ಗಣತಿ ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸುವಂತೆ ತಡೆಯಾಜ್ಞೆ ನೀಡಬೇಕೆಂದು ಅರ್ಜಿದಾರರು ಕೋರ್ಟ್ಗೆ ಮನವಿ ಮಾಡಿದ್ದಾರೆ. ಸದ್ಯ ಎರಡೂ ಅರ್ಜಿಗಳು ವಿಚಾರಣೆಗೆ ನಿಗದಿಯಾಗಬೇಕಿದ್ದು, ಮುಂದಿನ ದಿನಗಳಲ್ಲಿ ಹೈಕೋರ್ಟ್ನ ತೀರ್ಪು ಜಾತಿ ಗಣತಿಯ ಭವಿಷ್ಯ ನಿರ್ಧರಿಸಲಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಜಾತಿಗಣತಿ ಯೋಜನೆ ಇದೀಗ ಗೊಂದಲದ ಗೂಡಾಗಿದೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಗಣತಿಯ ಬಗ್ಗೆ ಬೇಸರ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ಸಚಿವರ ತುರ್ತು ಸಭೆಯನ್ನು ಕರೆಯಲಾಗಿದೆ. ಇಂದು ಸಂಜೆ ವಿಧಾನಸೌಧದಲ್ಲಿ ಸಚಿವ ಎಚ್.ಕೆ. ಪಾಟೀಲ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಜಾತಿಗಣತಿಯ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಯಲಿದೆ.
ಸರ್ಕಾರದಲ್ಲಿ ಒಡಕು:
ಜಾತಿಗಣತಿ ಕುರಿತು ಸಚಿವ ಸಂಪುಟದಲ್ಲಿ ಭಿನ್ನಾಭಿಪ್ರಾಯಗಳು ತೀವ್ರಗೊಂಡಿವೆ. ಕೇವಲ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಸಂತೋಷ್ ಲಾಡ್ ಮತ್ತು ಕೆ.ಹೆಚ್. ಮುನಿಯಪ್ಪ ಮಾತ್ರ ಸಮೀಕ್ಷೆ ಮುಂದುವರಿಸುವ ಬಗ್ಗೆ ಒಲವು ಹೊಂದಿದ್ದಾರೆ ಎನ್ನಲಾಗಿದೆ. ಉಳಿದ ಬಹುತೇಕ ಸಚಿವರು, ಈ ಗೊಂದಲದ ಗಣತಿಯನ್ನು ಮುಂದುವರಿಸಿದರೆ ಸರ್ಕಾರಕ್ಕೆ ತೊಂದರೆಯಾಗಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಾತಿಗಣತಿಯ ಕುರಿತು ಮಾಧ್ಯಮಗಳು ಮತ್ತು ಪ್ರತಿಪಕ್ಷಗಳು ನಿರಂತರವಾಗಿ ಟೀಕೆ ಮಾಡುತ್ತಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರಗೊಂಡಿದ್ದಾರೆ. 'ನನ್ನ ಮೇಲೆ ಜಾತಿವಾದಿ ಎಂಬ ಪಟ್ಟ ಕಟ್ಟುತ್ತಿದ್ದಾರೆ. ಇದು ಬಡವರ ಪರ ಸಮೀಕ್ಷೆ ಎಂಬ ಸಂದೇಶ ಹೋಗುತ್ತಿಲ್ಲ, ಕೇವಲ ಜಾತಿ ಸಮೀಕ್ಷೆ ಎಂದು ಬಿಂಬಿತವಾಗುತ್ತಿದೆ' ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಎಲ್ಲಾ ಗೊಂದಲಗಳ ಹಿನ್ನೆಲೆಯಲ್ಲಿ, ಸಚಿವ ಎಚ್.ಕೆ. ಪಾಟೀಲ್ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಮಹದೇವಪ್ಪ, ಕೆ.ಹೆಚ್. ಮುನಿಯಪ್ಪ, ಭೈರತಿ ಸುರೇಶ್, ಎಂ.ಬಿ. ಪಾಟೀಲ್, ಈಶ್ವರ್ ಖಂಡ್ರೆ ಸೇರಿದಂತೆ ಪ್ರಮುಖ ಸಚಿವರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಜಾತಿಗಣತಿಯನ್ನು ಮುಂದೂಡುವ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ. ಸಭೆಯಲ್ಲಿ ಚರ್ಚಿಸಿದ ಬಳಿಕ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಲಿದ್ದಾರೆ. ಸದ್ಯಕ್ಕೆ, ಜಾತಿಗಣತಿ ಪ್ರಕ್ರಿಯೆ ಗೊಂದಲದ ಸುಳಿಯಲ್ಲಿ ಸಿಲುಕಿದ್ದು, ಮುಂದಿನ ಹಂತದ ನಿರ್ಧಾರಗಳು ಈ ಸಭೆಯ ನಂತರ ಹೊರಬೀಳುವ ಸಾಧ್ಯತೆ ಇದೆ. ಇದು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ.