Vande Mataram: ಸರ್ಕಾರಿ ಕಾರ್ಯಕ್ರಮಗಳಿಗೆ ಹೊಸ ಶಿಷ್ಟಾಚಾರ; ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳ ಗಾಯನಕ್ಕೆ ಗ್ರೀನ್ ಸಿಗ್ನಲ್!

Published : Sep 10, 2026, 08:39 PM IST
Vande Matram

ಸಾರಾಂಶ

ಕರ್ನಾಟಕ ಸರ್ಕಾರವು ರಾಜ್ಯದ ಎಲ್ಲಾ ಅಧಿಕೃತ ಸರ್ಕಾರಿ ಮತ್ತು ಸಾರ್ವಜನಿಕ ಸಮಾರಂಭಗಳಲ್ಲಿ 'ವಂದೇ ಮಾತರಂ' ಗೀತೆಯನ್ನು ಹಾಡುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಈ ನಿಯಮದ ಪ್ರಕಾರ, ಕಾರ್ಯಕ್ರಮಗಳಲ್ಲಿ ಏಕರೂಪತೆ ಮತ್ತು ಗೌರವ ಕಾಪಾಡಲು ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು.

ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಸಾರ್ವಜನಿಕ ಸಮಾರಂಭಗಳಲ್ಲಿ ಇನ್ಮುಂದೆ ರಾಷ್ಟ್ರೀಯ ಗೀತೆಯಾದ ‘ವಂದೇ ಮಾತರಂ’ ಅನ್ನು ಹಾಡುವುದನ್ನು ಕಡ್ಡಾಯಗೊಳಿಸಿ ಕರ್ನಾಟಕ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ನಡೆಯುವ ವಿವಿಧ ಅಧಿಕೃತ ಕಾರ್ಯಕ್ರಮಗಳು ಮತ್ತು ಸಮಾರಂಭಗಳ ಸ್ವರೂಪಕ್ಕೆ ಅನುಗುಣವಾಗಿ ಏಕರೂಪತೆ, ಗೌರವ ಮತ್ತು ಸೂಕ್ತ ಶಿಷ್ಟಾಚಾರವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸರ್ಕಾರವು ಈ ಮಹತ್ವದ ತೀರ್ಮಾನವನ್ನು ಕೈಗೊಂಡಿದೆ.

ಹಿನ್ನೆಲೆ ಮತ್ತು ಪ್ರಸ್ತಾವನೆ!

ಭಾರತದ ರಾಷ್ಟ್ರೀಯ ಚಳವಳಿಯ ಸಂದರ್ಭದಲ್ಲಿ, ದೇಶದ ಜನರಲ್ಲಿ ರಾಷ್ಟ್ರೀಯತೆ, ಏಕತೆ ಮತ್ತು ದೇಶಭಕ್ತಿಯ ಭಾವನೆಯನ್ನು ಮೂಡಿಸುವಲ್ಲಿ ‘ವಂದೇ ಮಾತರಂ’ ಗೀತೆಯು ಅತ್ಯಂತ ಮಹತ್ವದ ಪಾತ್ರವನ್ನು ವಹಿಸಿದೆ. ಇತ್ತೀಚೆಗೆ ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯವು ‘ವಂದೇ ಮಾತರಂ’ ಗೀತೆಯ ಅಧಿಕೃತ ಆವೃತ್ತಿ ಹಾಗೂ ವಿವಿಧ ಸರ್ಕಾರಿ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅದರ ಗಾಯನ ಅಥವಾ ವಾದನಕ್ಕೆ ಸಂಬಂಧಿಸಿದಂತೆ ಸಂದರ್ಭಾನುಸಾರ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಕೇಂದ್ರ ಸರ್ಕಾರದ ಈ ಮಾರ್ಗಸೂಚಿಗಳಲ್ಲಿ ರಾಷ್ಟ್ರೀಯ ಗೀತೆಯ ವಾದನ ಮತ್ತು ಸಾಮೂಹಿಕ ಗಾಯನಕ್ಕೆ ಸಂಬಂಧಿಸಿದ ಸಂದರ್ಭಗಳನ್ನು ಪ್ರತ್ಯೇಕವಾಗಿ ನಿರ್ದಿಷ್ಟಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸಹ ಈ ನಿಯಮವನ್ನು ಜಾರಿಗೆ ತರಲು ಮುಂದಾಗಿದೆ.

ಸಚಿವ ಸಂಪುಟದ ತೀರ್ಮಾನ!

ಕೇಂದ್ರ ಗೃಹ ಸಚಿವಾಲಯದ ಪತ್ರದ ಅನ್ವಯ, ರಾಜ್ಯ ಸಚಿವ ಸಂಪುಟದ ತೀರ್ಮಾನದಂತೆ ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು (ರಾಜಕೀಯ) ದಿನಾಂಕ 08.09.2026 ರಂದು ಆದೇಶ ಸಂಖ್ಯೆ: ಸಿಆಸುಇ/03/HCR/2026 (ಭಾಗ-2) ರ ಅಡಿಯಲ್ಲಿ ಈ ಹೊಸ ನಿಯಮಾವಳಿಯನ್ನು ಪ್ರಕಟಿಸಿದೆ. ಸರ್ಕಾರದ ಆದೇಶದ ಪ್ರಕಾರ, ರಾಜ್ಯದಲ್ಲಿ ನಡೆಯುವ ಎಲ್ಲಾ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಾರ್ವಜನಿಕ ಸಮಾರಂಭಗಳಲ್ಲಿ ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯ ವಾದನ ಅಥವಾ ಗಾಯನಕ್ಕೆ ಸಂಬಂಧಿಸಿದಂತೆ ಕೆಳಗಿನ ಪ್ರಮುಖ ನಿರ್ದೇಶನಗಳನ್ನು ನೀಡಲಾಗಿದೆ:

ಮೊದಲ ಎರಡು ಚರಣಗಳ ಗಾಯನ!

ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಈ ಮೂಲಕ ಆದೇಶಿಸಲಾಗಿದೆ.
ವಿನಾಯಿತಿಗಳು: ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಮಾನ್ಯ ರಾಷ್ಟ್ರಪತಿಗಳು, ಉಪರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು ಹಾಗೂ ರಾಜ್ಯಪಾಲರು ಉಪಸ್ಥಿತರಿರುವ ಅಧಿಕೃತ ಕಾರ್ಯಕ್ರಮಗಳನ್ನು ಹೊರತುಪಡಿಸಿ, ಉಳಿದೆಲ್ಲಾ ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಈ ನಿಯಮ ಅನ್ವಯವಾಗುತ್ತದೆ. ವಿವಿಐಪಿಗಳು ಭಾಗವಹಿಸುವ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರದ ನಿಗದಿತ ಶಿಷ್ಟಾಚಾರಗಳು ಅನ್ವಯವಾಗಲಿವೆ.

ಉದ್ದೇಶ ಮತ್ತು ಶಿಸ್ತು!

ರಾಜ್ಯದ ವಿವಿಧ ಇಲಾಖೆಗಳು ಆಯೋಜಿಸುವ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯನ್ನು ಗೌರವಪೂರ್ವಕವಾಗಿ ಪ್ರಸ್ತುತಪಡಿಸಲು ಒಂದು ನಿರ್ದಿಷ್ಟ ಚೌಕಟ್ಟನ್ನು ಒದಗಿಸುವುದು ಈ ಆದೇಶದ ಮುಖ್ಯ ಉದ್ದೇಶವಾಗಿದೆ. ಕಾರ್ಯಕ್ರಮಗಳ ಆರಂಭ ಅಥವಾ ಅಂತ್ಯದಲ್ಲಿ ಏಕರೂಪದ ಶಿಷ್ಟಾಚಾರವನ್ನು ಪಾಲಿಸುವುದರಿಂದ ಸಾರ್ವಜನಿಕರಲ್ಲಿ ಶಿಸ್ತು ಮತ್ತು ದೇಶಪ್ರೇಮದ ಭಾವನೆ ಮತ್ತಷ್ಟು ಗಟ್ಟಿಯಾಗಲಿದೆ ಎಂದು ಸರ್ಕಾರ ಆಶಿಸಿದೆ. ಕರ್ನಾಟಕ ರಾಜ್ಯಪಾಲರ ಆದೇಶದಂತೆ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಸಂದೀಪ್ ಬಿ.ಕೆ. ಅವರು ಈ ಅಧಿಕೃತ ಆದೇಶಕ್ಕೆ ಸಹಿ ಹಾಕಿದ್ದಾರೆ. ಇಂದಿನಿಂದಲೇ ಜಾರಿಗೆ ಬರುವಂತೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ನಿಗಮ ಮಂಡಳಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳಲ್ಲಿ ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

PREV
Read more Articles on
click me!

Recommended Stories

ಬೆಂಗಳೂರಿಗರಿಗೆ ಗುಡ್ ನ್ಯೂಸ್: ನಮ್ಮ ಮೆಟ್ರೋ, BMTC ಬಸ್‌ಗಳಲ್ಲಿ ಇನ್ಮುಂದೆ ಒಂದೇ ಕಾರ್ಡ್, ಒಂದೇ ಆಪ್‌ನಲ್ಲಿ ಪಯಣ!
KPSCಯಲ್ಲಿ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬ: ಸರ್ಕಾರಕ್ಕೆ ಯುವ ಸಂಘಟನೆಯ ಎಚ್ಚರಿಕೆ