
ಮಂಡ್ಯ : ಮಂಡ್ಯದಲ್ಲಿ ನಡೆದ ಕಾರ್ಯಕ್ರಮದ ವೇಳೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಲವು ರಾಜಕೀಯ ಹಾಗೂ ಸಮಕಾಲೀನ ವಿಚಾರಗಳ ಕುರಿತು ತೀಕ್ಷ್ಣ ಹೇಳಿಕೆಗಳನ್ನು ನೀಡಿದ್ದಾರೆ. ಕೇಂದ್ರ ಸರ್ಕಾರದ ಮಹಿಳಾ ಮೀಸಲಾತಿ ಬಿಲ್ನಿಂದ ಹಿಡಿದು ರಾಜ್ಯ ರಾಜಕೀಯದ ಬೆಳವಣಿಗೆಗಳವರೆಗೆ ಹಲವು ವಿಷಯಗಳನ್ನು ಅವರು ಪ್ರಸ್ತಾಪಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸಾಗಿರುವುದನ್ನು ಆರ್. ಅಶೋಕ್ ಸ್ವಾಗತಿಸಿದರು. ಬಹಳ ವರ್ಷಗಳಿಂದ ಹಲವರು ಪ್ರಯತ್ನಿಸಿದರೂ ಸಾಧ್ಯವಾಗದ ಕೆಲಸವನ್ನು ಮೋದಿ ಅವರು ಸಾಧಿಸಿದ್ದಾರೆ. ಇದು ಒಂದು ಐತಿಹಾಸಿಕ ಹೆಜ್ಜೆಯಾಗಿದ್ದು, ದೇಶದ ಮಹಿಳೆಯರಿಗೆ ಸಮಾನತೆ ಒದಗಿಸುವ ಮಹತ್ವದ ಕ್ರಮ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ ಅವರು, ಮಹಿಳೆಯರು ಕೂಡ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅಶೋಕ್, ಕಾಂಗ್ರೆಸ್ ಧರ್ಮ ಆಧಾರಿತ ರಾಜಕೀಯ ಮಾಡುತ್ತಿದೆ. ಮಹಿಳಾ ಮೀಸಲಾತಿ ವಿಚಾರದಲ್ಲೂ ಅನಗತ್ಯ ವಿವಾದ ಸೃಷ್ಟಿಸುತ್ತಿದೆ. ಇದು ಇತಿಹಾಸ ನಿರ್ಮಾಣದ ಕ್ಷಣವಾಗಿದ್ದು, ಅದನ್ನು ರಾಜಕೀಯವಾಗಿ ತಿರುಗಿಸುವುದು ಸರಿಯಲ್ಲ ಎಂದು ಹೇಳಿದರು.
ತಮಿಳುನಾಡಿನಲ್ಲಿ ಕ್ಷೇತ್ರ ಮರುವಿಂಗಡಣೆ ವಿಚಾರವಾಗಿ ನಡೆಯುತ್ತಿರುವ ಪ್ರತಿಭಟನೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಿಲ್ನಲ್ಲಿ ಜನಸಂಖ್ಯೆ ಆಧಾರದ ಯಾವುದೇ ಅಂಶವಿಲ್ಲ. ಹಿಂದೆಯೇ ಕಾಂಗ್ರೆಸ್ ಈ ರೀತಿಯ ಕ್ರಮಗಳನ್ನು ಕೈಗೊಂಡಿತ್ತು. ಈಗ ತಮಿಳುನಾಡಿನ ಕ್ಷೇತ್ರಗಳು ಹೆಚ್ಚಾಗುತ್ತಿರುವುದರಲ್ಲಿ ಏನು ಸಮಸ್ಯೆ? ಎಂದು ಪ್ರಶ್ನಿಸಿದರು. ತಮಿಳುನಾಡು ಸಿಎಂ ಸ್ಟಾಲಿನ್ಗೆ ಬುದ್ಧಿ ಕಡಿಮೆ ಇದೆ. ಇದೇ ರೀತಿ ಕಾಂಗ್ರೆಸ್ ನಾಯಕರು ಕೂಡ ಅನ್ಯಾಯ ಆಗುತ್ತಿದೆ ಎಂದು ಹೇಳುತ್ತಿದ್ದಾರೆ. ಹಿಂದೆ ಲೋಕಸಭೆ ಕ್ಷೇತ್ರ ಎಷ್ಟಿರಬೇಕೆಂದು ಕಾಂಗ್ರೆಸ್ ನಾಯಕರೇ ತೀರ್ಮಾನ ಮಾಡಿದ್ದರು. ಜನಸಂಖ್ಯೆ ಆಧಾರಿತವಾಗಿಯೇ ಕ್ಷೇತ್ರ ಮರುವಿಂಗಡಣೆ ಮಾಡಲಾಗುತ್ತಿತ್ತು. ರಾಜ್ಯದಲ್ಲಿ 28 ಲೋಕಸಭೆ ಕ್ಷೇತ್ರಗಳು 42 ಆಗುತ್ತಿವೆ. ಇಲ್ಲಿ ಕ್ಷೇತ್ರಗಳು ಕಡಿಮೆಯಾಗುವುದಿಲ್ಲ. ಕೇರಳದಲ್ಲಿ 20 ಕ್ಷೇತ್ರಗಳಿಂದ 30 ಕ್ಕೆ, ತಮಿಳುನಾಡಿನಲ್ಲಿ 39 ರಿಂದ 59 ಕ್ಕೆ ಏರಿಕೆಯಾಗಲಿದೆ. ಆದರೂ ವಿರೋಧ ಮಾಡುತ್ತಿದ್ದಾರೆ. ಇದನ್ನು ಜಾರಿ ಮಾಡಿದರೆ ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗಿ ಎಲ್ಲರೂ ಟೆಂಟ್ ಕಟ್ಟಿಕೊಂಡು ಹೋಗಬೇಕಾಗುತ್ತದೆ ಎಂಬ ಭಯ ವಿರೋಧ ಪಕ್ಷಗಳ ನಾಯಕರಲ್ಲಿದೆ. ದಕ್ಷಿಣ ಭಾರತದ ರಾಜ್ಯಗಳಿಗೆ ಯಾವುದೇ ಅನ್ಯಾಯ ಆಗುತ್ತಿಲ್ಲ. ಯಾವುದೇ ರಾಜ್ಯಗಳಲ್ಲಿ ಸ್ಥಾನಗಳು ಕಡಿಮೆಯಾಗುತ್ತಿಲ್ಲ. ವಿರೋಧ ಪಕ್ಷಗಳ ನಾಯಕರಿಗೆ ಅಭಿವೃದ್ಧಿ ಬೇಕಿಲ್ಲ. ಕಾಂಗ್ರೆಸ್ನ ವಂಶಾಡಳಿತಕ್ಕೆ ಪೂರಕವಾಗಿ ಎಲ್ಲರೂ ಮಾತಾಡುತ್ತಿದ್ದಾರೆ ಎಂದರು.
ಯೋಗೇಶ್ ಗೌಡ ಹತ್ಯೆ ಪ್ರಕರಣದ ತೀರ್ಪಿನ ಕುರಿತು ಮಾತನಾಡಿದ ಅವರು, ಈ ಪ್ರಕರಣವು ರಾಜಕೀಯ ಕೊಲೆಗಳಿಗೆ ಒಂದು ಪಾಠವಾಗಿದೆ. ಯಾರಾದರೂ ರಾಜಕಾರಣಿಯ ಮಾತು ಕೇಳಿ ಅಪರಾಧದಲ್ಲಿ ಭಾಗಿಯಾದರೆ ಅದರ ಪರಿಣಾಮ ಏನಾಗುತ್ತದೆ ಎಂಬುದಕ್ಕೆ ಇದು ಉದಾಹರಣೆ. ಕಾಂಗ್ರೆಸ್ ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿತ್ತು, ಆದರೆ ಸಿಬಿಐ ತನಿಖೆಯಿಂದ ಸತ್ಯ ಬಹಿರಂಗವಾಗಿದೆ ಎಂದು ಹೇಳಿದರು.
ಹೆಚ್.ಡಿ. ದೇವೇಗೌಡರನ್ನು ಮತ್ತೆ ರಾಜ್ಯಸಭೆಗೆ ಆಯ್ಕೆ ಮಾಡುವ ವಿಚಾರ ಕುರಿತು ಮಾತನಾಡಿದ ಅವರು, ಇದು ರಾಷ್ಟ್ರೀಯ ಮಟ್ಟದ ನಾಯಕರು ತೀರ್ಮಾನಿಸುವ ವಿಷಯ ಎಂದು ತಿಳಿಸಿದರು.
ಹಿಂದಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ನೀಡುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹೈಕೋರ್ಟ್ ಆದೇಶವನ್ನು ಪಾಲಿಸಬೇಕು. ವಿದ್ಯಾರ್ಥಿಗಳ ವಿಚಾರದಲ್ಲಿ ತಕ್ಷಣದ ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ. ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಬೇಕಿತ್ತು ಎಂದು ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ಕನ್ನಡ ಆಡಳಿತ ಭಾಷೆಯಾಗಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಯಾವುದೇ ನಿರ್ಧಾರ ಕೈಗೊಳ್ಳಬೇಕು. 365 ದಿನ ಓದಿದ ಮಕ್ಕಳಿಗೆ ಅನ್ಯಾಯವಾಗಬಾರದು ಎಂದು ಹೇಳಿದರು. ಉರ್ದು ಶಾಲೆಗಳಲ್ಲಿ ಕನ್ನಡದ ಸ್ಥಿತಿ ಕುರಿತೂ ಪ್ರಶ್ನೆ ಎತ್ತಿದ ಅವರು, ಈ ವಿಷಯದಲ್ಲಿ ಸಮಗ್ರ ಚರ್ಚೆ ಅಗತ್ಯವಿದೆ ಎಂದರು. ರಾಜ್ಯದ ಮಕ್ಕಳು ಹಿಂದಿ ಓದುವ ಮೊದಲೇ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕಿತ್ತು. ಪರೀಕ್ಷೆಯ ಸಮಯದಲ್ಲಿ ತುಘಲಕ್ ದರ್ಬಾರ್ ಮಾಡುವ ಅಗತ್ಯವಿರಲಿಲ್ಲ. ನಾನು ಕೂಡ ಕನ್ನಡದ ಹೋರಾಟಗಾರನಾಗಿದ್ದು, ಗೋಕಾಕ್ ಚಳವಳಿಯಲ್ಲಿ ಭಾಗವಹಿಸಿ ಪೊಲೀಸರ ಲಾಠಿ ಏಟಿನಿಂದ ಕಾಲಿಗೆ ಗಾಯವಾಗಿ ಆಸ್ಪತ್ರೆ ಸೇರಿದ್ದೆ. ಹೊಸೂರಿನಲ್ಲಿ ಹೆಚ್ಚಿನವರು ಕನ್ನಡ ಮಾತಾಡುತ್ತಾರೆ. ಕಾಸರಗೋಡಿನಲ್ಲೂ ಕನ್ನಡಿಗರು ಹೆಚ್ಚಿದ್ದಾರೆ. ಅಲ್ಲಿ ಕನ್ನಡ ಇಲ್ಲವೆಂದರೆ ಸಮಸ್ಯೆಯಾಗುತ್ತದೆ. ಉರ್ದು ಶಾಲೆಗಳಲ್ಲಿ ಮೊದಲಿಗೆ ಉರ್ದು, ಎರಡನೇ ಭಾಷೆಯಾಗಿ ಇಂಗ್ಲಿಷ್ ಓದುತ್ತಾರೆ. ಕೊನೆಯ ಭಾಷೆಯಾಗಿ ಕನ್ನಡ ಓದುತ್ತಾರೆ. ತ್ರಿಭಾಷಾ ಸೂತ್ರ ಇಲ್ಲವೆಂದರೆ ಅಲ್ಲಿ ಕನ್ನಡವೂ ಇರುವುದಿಲ್ಲ. ವಿದ್ಯಾರ್ಥಿಗಳ ವಿಚಾರ ಬಂದಾಗ ಸದನ ಸಮಿತಿ ರಚಿಸಿ ಚರ್ಚೆ ಮಾಡಬೇಕಿತ್ತು ಎಂದರು
ರಾಜ್ಯ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ ಅಶೋಕ್, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಗೊಂದಲದಲ್ಲಿದೆ. ಮುಖ್ಯಮಂತ್ರಿಯ ಸ್ಥಾನಕ್ಕಾಗಿ ಒಳಪೈಪೋಟಿ ನಡೆಯುತ್ತಿದೆ. ಶಾಸಕರು ದೆಹಲಿಗೆ ತೆರಳುತ್ತಿರುವುದು ಇದಕ್ಕೆ ಸಾಕ್ಷಿ ಎಂದರು. ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಲಾಗುತ್ತಿದೆ. ಕಾಂಗ್ರೆಸ್ ಒಡೆದ ಮನೆಯಾಗಿದೆ ಎಂದರು. ದಾವಣಗೆರೆಯಲ್ಲಿ ಮುಸ್ಲಿಮರಿಗೆ ಅನ್ಯಾಯವಾಗಿರುವುದಕ್ಕೆ ಮುಸ್ಲಿಮ್ ಮುಖಂಡರು ಕಾಂಗ್ರೆಸ್ ವಿರುದ್ಧ ಮಾತಾಡುತ್ತಿದ್ದಾರೆ. ಸಚಿವ ಜಮೀರ್ ಅಹ್ಮದ್ ಅವರನ್ನೂ ಟಾರ್ಗೆಟ್ ಮಾಡಲಾಗುತ್ತಿದೆ. ಇಡೀ ಪಕ್ಷ ಹಾಗೂ ಸರ್ಕಾರ ಸಂಪೂರ್ಣ ಗೊಂದಲದಲ್ಲಿದೆ. ಇಂದೇ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಬರಲಿದೆ. ಬಾಗಲಕೋಟೆ ಹಾಗೂ ದಾವಣಗೆರೆಯಲ್ಲಿ ಬಿಜೆಪಿ ಗೆಲ್ಲಲಿದೆ. ನರೇಂದ್ರ ಮೋದಿ ಪ್ರಧಾನಿಯಾಗಿದ್ದಕ್ಕೆ ನಮಗೇನೂ ಸಮಸ್ಯೆಯಾಗಿಲ್ಲ, ಬಿಜೆಪಿ ಬೆಂಬಲಿಸುತ್ತೇವೆ ಎಂದು ಮುಸ್ಲಿಮರು ಹೇಳಿದ್ದಾರೆ. ಅವರ ಈ ನಡೆಯನ್ನು ಸ್ವಾಗತಿಸುತ್ತೇನೆ ಎಂದರು.
ಮುಂದಿನ ಚುನಾವಣೆಯ ಕುರಿತು ಮಾತನಾಡಿದ ಅವರು, 2028ರಲ್ಲ, ಇಂದೇ ಚುನಾವಣೆ ನಡೆದರೂ ನಮ್ಮ ಎನ್ಡಿಎ ಮೈತ್ರಿ ಶೇ.100 ಗೆಲುವು ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಒಟ್ಟಾರೆ ಮಂಡ್ಯದಲ್ಲಿ ಆರ್. ಅಶೋಕ್ ನೀಡಿದ ಹೇಳಿಕೆಗಳು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿವೆ.