​Karnataka school: ಮಕ್ಕಳೋ ಅಥವಾ ಕೊಟ್ಟಿಗೆಯ ದನಗಳೋ? ಹಾಸನದ ವಸತಿ ಶಾಲೆಯ ಕರಾಳ ಮುಖ ಬಯಲು

Published : Sep 07, 2026, 05:03 PM IST
karnataka school students cowshed for 5 years video viral

ಸಾರಾಂಶ

ಸರ್ಕಾರಿ ವಸತಿ ಶಾಲೆಯ ವಿದ್ಯಾರ್ಥಿಗಳು ಸುಮಾರು ಐದು ವರ್ಷಗಳ ಕಾಲ ಗೋಶಾಲೆಯೊಂದರಲ್ಲೇ ವಾಸವಿದ್ದು, ಅಲ್ಲಿಯೇ ತರಗತಿಗೂ ಹಾಜರಾಗುತ್ತಿದ್ದ ಆಘಾತಕಾರಿ ಘಟನೆ ಕರ್ನಾಟಕದಲ್ಲಿ ಬೆಳಕಿಗೆ ಬಂದಿದೆ.

ಸರ್ಕಾರಿ ವಸತಿ ಶಾಲೆಯ ವಿದ್ಯಾರ್ಥಿಗಳು ಸುಮಾರು ಐದು ವರ್ಷಗಳ ಕಾಲ ಗೋಶಾಲೆಯೊಂದರಲ್ಲೇ ವಾಸವಿದ್ದು, ಅಲ್ಲಿಯೇ ತರಗತಿಗೂ ಹಾಜರಾಗುತ್ತಿದ್ದ ಆಘಾತಕಾರಿ ಘಟನೆ ಕರ್ನಾಟಕದಲ್ಲಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳ ದುಸ್ಥಿತಿಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಂಡು ಮಕ್ಕಳನ್ನು ಬೇರೆ ವಸತಿ ನಿಲಯಗಳಿಗೆ ಸ್ಥಳಾಂತರಿಸಿದ್ದಾರೆ. ಹಾಸನ ಜಿಲ್ಲೆಯ ಶಾಂತಿಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್‌ ವಸತಿ ಶಾಲೆಯ ವಿದ್ಯಾರ್ಥಿಗಳು ಈ ಸಂಕಷ್ಟವನ್ನು ಎದುರಿಸುತ್ತಿದ್ದರು. ಸಮಾಜ ಕಲ್ಯಾಣ ಇಲಾಖೆಯಡಿ ನಡೆಯುತ್ತಿರುವ ಈ ಶಾಲೆಯಲ್ಲಿ 6ರಿಂದ 10ನೇ ತರಗತಿಯವರೆಗೆ ಒಟ್ಟು 172 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇವರಲ್ಲಿ 92 ಬಾಲಕರು ಹಾಗೂ 80 ಬಾಲಕಿಯರಿದ್ದಾರೆ.

ಗೋಶಾಲೆಯಲ್ಲೇ ತರಗತಿ, ಅಲ್ಲೇ ವಾಸ

ಸುಮಾರು ಐದು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸದೆ ಗೋಶಾಲೆಯ ಕಟ್ಟಡದಲ್ಲೇ ವಾಸಿಸುವಂತೆ ಮಾಡಲಾಗಿತ್ತು ಎಂದು ವರದಿಯಾಗಿದೆ. ವಿದ್ಯಾರ್ಥಿಗಳು ಮಲಗುವ ಸ್ಥಳ ಹಾಗೂ ತರಗತಿ ನಡೆಸುವ ಸ್ಥಳ ಒಂದೇ ಆಗಿತ್ತು. ಮೂಲಸೌಕರ್ಯಗಳ ಕೊರತೆಯ ನಡುವೆಯೇ ಮಕ್ಕಳು ಶಿಕ್ಷಣ ಮುಂದುವರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇಷ್ಟೆಲ್ಲಾ ಸಮಸ್ಯೆಗಳ ನಡುವೆ ಈ ಕಟ್ಟಡಕ್ಕೆ ತಿಂಗಳಿಗೆ ಬರೋಬ್ಬರಿ ₹1.08 ಲಕ್ಷ ಬಾಡಿಗೆ ಪಾವತಿಸಲಾಗುತ್ತಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 172 ವಿದ್ಯಾರ್ಥಿಗಳಿಗೆ ಕೇವಲ ಐದು ಶೌಚಾಲಯಗಳಿದ್ದವು ಎನ್ನಲಾಗಿದೆ.

ವಿಡಿಯೋ ವೈರಲ್‌ ಆಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು

ವಿದ್ಯಾರ್ಥಿಗಳು ವಾಸಿಸುತ್ತಿದ್ದ ಸ್ಥಳದ ದುಸ್ಥಿತಿಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದಂತೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಯಿತು. ವಿಷಯ ಸರ್ಕಾರ ಹಾಗೂ ಅಧಿಕಾರಿಗಳ ಗಮನಕ್ಕೂ ಬಂದಿದೆ. ಬಳಿಕ ವಿದ್ಯಾರ್ಥಿಗಳನ್ನು ಎರಡು ಪ್ರತ್ಯೇಕ ವಸತಿ ನಿಲಯಗಳಿಗೆ ಸ್ಥಳಾಂತರಿಸುವ ಕ್ರಮ ಕೈಗೊಳ್ಳಲಾಗಿದೆ. ಮಕ್ಕಳಿಗೆ ಸುರಕ್ಷಿತ ಹಾಗೂ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ತೆಗೆದುಕೊಂಡಿದ್ದಾರೆ.

ಸಚಿವರಿಂದ ವರದಿ ಕೇಳಿದ ಸರ್ಕಾರ

ಘಟನೆಗೆ ಸಂಬಂಧಿಸಿದಂತೆ ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂತಹ ವ್ಯವಸ್ಥೆ ಸ್ವೀಕಾರಾರ್ಹವಲ್ಲ ಎಂದು ಹೇಳಿರುವ ಅವರು, ಈ ಕುರಿತು ವರದಿ ಕೇಳಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಕೂಡ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳನ್ನು ತಕ್ಷಣ ಸ್ಥಳಾಂತರಿಸುವಂತೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ವಿದ್ಯಾರ್ಥಿಗಳ ದುಸ್ಥಿತಿಗೆ ಯಾರು ಹೊಣೆ?

ಸಮಾಜದ ದುರ್ಬಲ ವರ್ಗದ ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ವಸತಿ ಕಲ್ಪಿಸುವ ಉದ್ದೇಶದಿಂದ ನಡೆಯುತ್ತಿರುವ ಸರ್ಕಾರಿ ವಸತಿ ಶಾಲೆಯಲ್ಲೇ ಇಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ವಿದ್ಯಾರ್ಥಿಗಳ ಸುರಕ್ಷತೆ, ಸ್ವಚ್ಛತೆ ಮತ್ತು ಮೂಲಸೌಕರ್ಯಗಳ ಬಗ್ಗೆ ಅಧಿಕಾರಿಗಳು ಇಷ್ಟು ವರ್ಷಗಳ ಕಾಲ ಗಮನ ಹರಿಸದಿರುವುದು ಹೇಗೆ ಎಂಬ ಪ್ರಶ್ನೆ ಇದೀಗ ಎದುರಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋಗಳು ವೈರಲ್‌ ಆದ ಬಳಿಕವೇ ಕ್ರಮ ಕೈಗೊಳ್ಳಲಾಗಿದೆಯೇ ಎಂಬ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಮಕ್ಕಳನ್ನು ಇದೀಗ ಬೇರೆ ವಸತಿ ನಿಲಯಗಳಿಗೆ ಸ್ಥಳಾಂತರಿಸಲಾಗಿದ್ದರೂ, ಐದು ವರ್ಷಗಳ ಕಾಲ ವಿದ್ಯಾರ್ಥಿಗಳು ಇಂತಹ ಪರಿಸ್ಥಿತಿಯಲ್ಲಿ ವಾಸಿಸುವಂತಾದದ್ದು ಹೇಗೆ? ಇದಕ್ಕೆ ಹೊಣೆ ಯಾರು? ಎಂಬ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ.

PREV
Read more Articles on
click me!

Recommended Stories

ರೇಣುಕಾಸ್ವಾಮಿ ಪ್ರಕರಣ: ಜೈಲಲ್ಲಿರುವ A1 ಆರೋಪಿ ಪವಿತ್ರಾ ಗೌಡ ಹೊಸ ಬೇಡಿಕೆಗೆ ಅಸ್ತು ಎಂದ ಕೋರ್ಟ್
Guidelines: ಹುಬ್ಬಳ್ಳಿ- ಧಾರವಾಡದಲ್ಲಿ ಗಣೇಶ ಉತ್ಸವಕ್ಕೆ ಹೊಸ ಗೈಡ್‌ಲೈನ್ಸ್; ಆಯುಧ ಹಿಡಿದರೆ 10 ಲಕ್ಷ ಬಾಂಡ್! 80 ಡೆಸಿಬಲ್ ದಾಟಿದರೆ ಡಿಜೆ ಬಂದ್!