ಜು.1ರವರೆಗೆ ಕನಕಪುರ ಸ್ವಯಂ ಲಾಕ್‌ಡೌನ್!

By Suvarna NewsFirst Published Jun 21, 2020, 10:34 PM IST
Highlights

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವಿಧಾನಸಭಾ ಕ್ಷೇತ್ರವಾದ ರಾಮನಗರ ಜಿಲ್ಲೆಯ ಕನಕಪುರವನ್ನು ಒಂದು ವಾರ ಲಾಕ್‌ಡೌನ್ ಮಾಡಲು ನಿರ್ಧರಿಸಲಾಗಿದೆ.

ರಾಮನಗರ, (ಜೂನ್,21): ಕೊರೋನಾ ಸೋಂಕು ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕನಕಪುರ ವಿಧಾನಸಭಾ ಕ್ಷೇತ್ರದ ನಾಗರಿಕರು ಜುಲೈ 1 ರವರೆಗೆ ಸ್ವಯಂ ಪ್ರೇರಿತ ಲಾಕ್​ಡೌನ್​ ನಿರ್ಣಯ ಕೈಗೊಂಡಿದ್ದಾರೆ.

ಕನಕಪುರ ವಿಧಾನಸಭಾ ಕ್ಷೇತ್ರದ  ಶಾಸಕರೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಭಾನುವಾರ ನಡೆದ ತುರ್ತು ಸಭೆಯಲ್ಲಿ ಈ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ.

ಕಾರಾಗೃಹ ಸಿಬ್ಬಂದಿಗೆ ಅಂಟಿದ ಕೊರೋನಾ: ರಸ್ತೆಗೆ ಹಾಲು ಸುರಿದ ಗ್ರಾಮಸ್ಥರು

ನಗರಸಭೆ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್, ವಿಧಾನ ಪರಿಷತ್ ಸದಸ್ಯ ಎಸ್. ರವಿ, ರಾಮನಗರ ಜಿಲ್ಲಾಧಿಕಾರಿ ಅರ್ಚನಾ, ಎಸ್ಪಿ ಅನೂಪ್ ಶೆಟ್ಟಿ, ಕನಕಪುರ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಜಗನ್ನಾಥ್ ಭಾಗವಹಿಸಿದ್ದರು.

ಕ್ಷೇತ್ರದಲ್ಲಿ ದಿನೇ ದಿನೇ ಕಾಳ್ಗಿಚ್ಚಿನಂತೆ ಹಬ್ಬುತ್ತಿರುವ ಕೊರೋನಾ ನಿಯಂತ್ರಣ ಮಾರ್ಗೋಪಾಯಗಳನ್ನು ಕಂಡುಹಿಡಿಯಲು ಈ ಸಭೆ ಕರೆಯಲಾಗಿತ್ತು. ನಾನಾ ರಾಜಕೀಯ ಪಕ್ಷಗಳ ಮುಖಂಡರು, ಇಲಾಖೆಗಳ ಅಧಿಕಾರಿಗಳು, ಸಾಮಾಜಿಕ ಮತ್ತು ನಾಗರೀಕ ಸಂಘಟನೆಗಳ ಪ್ರತಿನಿಧಿಗಳು, ಉದ್ಯಮಿಗಳು, ವರ್ತಕರು ಮತ್ತಿತರರು ಭಾಗವಹಿಸಿದ್ದ ಈ ಸಭೆಯಲ್ಲಿ ಜುಲೈ 1 ರವರೆಗೆ ಕನಕಪುರ ಸ್ವಯಂ ಪ್ರೇರಿತ ಲಾಕ್ ಡೌನ್  ಬಗ್ಗೆ ಏಕಮತ ನಿರ್ಧಾರಕ್ಕೆ ಬರಲಾಯಿತು.

ರಾಮನಗರದಲ್ಲಿ ಕೊರೋನಾಗೆ ಮೊದಲ ಬಲಿ..! 

ಅಗತ್ಯ ವಸ್ತುಗಳಿಗೆ ಸಮಯ ನಿಗದಿ

ಬೆಳಗ್ಗೆ 7 ರಿಂದ 11 ಗಂಟೆವರೆಗೆ ಮಾತ್ರ ದಿನಸಿ ವಸ್ತುಗಳು, ಹಣ್ಣು, ತರಕಾರಿ, ಸೊಪ್ಪು, ಮಾಂಸ ಮತ್ತಿತರ ದಿನಬಳಕೆ ಆಹಾರ ವಸ್ತುಗಳ ಮಾರಾಟಕ್ಕೆ ವರ್ತಕರು ಸಮ್ಮತಿಸಿದ್ದಾರೆ. ಕ್ಲಿನಿಕ್, ಔಷಧ ಅಂಗಡಿಗಳ ಅವಧಿ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳು, ಡಿಸಿ, ಎಸ್ಪಿ, ಆಸ್ಪತ್ರೆ ಪ್ರತಿನಿಧಿಗಳು ನಿರ್ಣಯ ಮಾಡುತ್ತಾರೆ.

ಅಬಕಾರಿ ಇಲಾಖೆ ಅಧಿಕಾರಿಗಳು ಹಾಗೂ ಅಸೋಸಿಯೇಷನ್ ನವರು ಮದ್ಯದಂಗಡಿಗಳ ಸಮಯ ನಿಗದಿ ಮಾಡುತ್ತಾರೆ.  ಆದರೆ ಎಲ್ಲ ಬಗೆಯ ವರ್ತಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಹಾಗೂ ವ್ಯಾಪಾರ ಸ್ಥಳದಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಇದರ ಬಗ್ಗೆ ಪೊಲೀಸ್ ಇಲಾಖೆ ಸಿಬ್ಬಂದಿ ನಿಗಾ ವಹಿಸಲಿದ್ದಾರೆ. ಜತೆಗೆ, ರೇಷ್ಮೆ ಮಾರುಕಟ್ಟೆ ತೆರೆದಿರುತ್ತಿದೆ. ಅದಕ್ಕೂ ನಿಗದಿತ ಸಮಯ ಇರುತ್ತದೆ.

ಕ್ವಾರಂಟೈನ್ ಕೇಂದ್ರಗಳಲ್ಲಿ ಊಟೋಪಾಚಾರ

ಕೊರೋನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿರುವ ರಾಮನಗರ ಜಿಲ್ಲೆಯ ಆಸ್ಪತ್ರೆಗಳು ಹಾಗೂ ಕ್ವಾರಂಟೈನ್ ಕೇಂದ್ರಗಳಲ್ಲಿ ಅವರ ಊಟೋಪಾಚಾರಗಳಿಗೆ ನಿತ್ಯ ಬರೀ ತಲಾ 60 ರುಪಾಯಿ ಮಾತ್ರ ಸರಕಾರ ನೀಡುತ್ತಿದೆ. ಇದರಿಂದ ಗುಣಮಟ್ಟದ ಆಹಾರ ಸಿಗುತ್ತಿಲ್ಲ ಎಂಬ ದೂರು ಬಂದಿದೆ. ಹೀಗಾಗಿ ಡಿ.ಕೆ.ಎಸ್. ಚಾರಿಟಬಲ್ ಟ್ರಸ್ಟ್ ನಿಂದ ಹೆಚ್ಚುವರಿಯಾಗಿ ತಲಾ 100 ರುಪಾಯಿ ನೀಡಲಾಗುವುದು.

ಇದರಿಂದ ಒಟ್ಟಾರೆ ತಲಾ 160 ರುಪಾಯಿ ಸೋಂಕಿತರು, ಕ್ವಾರಂಟೈನ್ ಕೇಂದ್ರಗಳಲ್ಲಿ ಇರುವವರಿಗೆ ಸಿಕ್ಕಂತಾಗುತ್ತದೆ. ಜತೆಗೆ ಕ್ವಾರಂಟೈನ್ ಕೇಂದ್ರಗಳಲ್ಲಿ ಇರುವವರು ಮನೆಯಿಂದ ಹಾಸಿಗೆ, ಹೊದಿಕೆ, ಬಟ್ಟೆ ಮತ್ತಿತರ ವಸ್ತುಗಳನ್ನು ತರಿಸಿಕೊಳ್ಳಬಹುದು. ಇಲ್ಲದಿದ್ದರೆ ನಾನೇ ಟ್ರಸ್ಠ್ ಮೂಲಕ ಅದನ್ನು ಒದಗಿಸಲು ಸಿದ್ಧನಿದ್ದೇನೆ. ರೇಷ್ಮೆ ಮಾರುಕಟ್ಟೆ ತೆರೆದಿರುತ್ತಿದೆ. ಅದಕ್ಕೂ ನಿಗದಿತ ಸಮಯ ಇರುತ್ತದೆ ಎಂದು ಕನಕಪುರ ಕ್ಷೇತ್ರದ ಶಾಸಕ ಡಿಕೆ ಶಿವಕುಮಾರ್ ಹೇಳಿದರು.

 ಪರೀಕ್ಷೆ ಬಗ್ಗೆ ನಾವ್ಯಾರೂ ತಲೆ ಹಾಕಲ್ಲ ಎಂದ ಡಿಕೆಶಿ

ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಎಸ್ಸೆಸ್ಸೆಲ್ಸಿ, ಕಾಲೇಜು ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಧಾರವೇ ಅಂತಿಮ. ಇದರಲ್ಲಿ ನಾವ್ಯಾರೂ ತಲೆ ಹಾಕುವುದಿಲ್ಲ. ಈ ವಿದ್ಯಾರ್ಥಿಗಳಿಗೆ 1 ಲಕ್ಷ ಮಾಸ್ಕ್​ಗಳನ್ನು ವಿತರಿಸಲಾಗುವುದು. ಈಗಾಗಲೇ ಅದನ್ನು ಸಿದ್ಧಪಡಿಸಿ ಇಟ್ಟುಕೊಳ್ಳಲಾಗಿದೆ. ಈ ಸ್ವಯಂ ಪ್ರೇರಿತ ಲಾಕ್​ಡೌನ್ ಸಂದರ್ಭದಲ್ಲಿ ಅನಗತ್ಯ ಓಡಾಟ ವಾಹನ ಸಂಚಾರಕ್ಕೆ ಕಡಿವಾಣ ಹಾಕಿಕೊಳ್ಳಬೇಕು. ವ್ಯಕ್ತಿಗತ ಅಂತರ ಕಾಯ್ದುಕೊಳ್ಳಬೇಕು. ಯಾರೂ ಯಾರ ಮೇಲೂ ದಬ್ಬಾಳಿಕೆ ಮಾಡಬಾರದು ಎಂದು ಸೂಚನೆ ನೀಡಲಾಯಿತು.

click me!