
ಬೆಂಗಳೂರು ದಕ್ಷಿಣ: ಕನಕಪುರದಿಂದ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ರಾಜ್ಯ ರಸ್ತೆ ಸಾರಿಗೆ ಬಸ್ ಸಂಚಾರ ಪುನರಾರಂಭವಾಗಿದೆ. 2003ರಲ್ಲಿ ಕಾರಣಾಂತರದಿಂದ ಸ್ಥಗಿತಗೊಂಡಿದ್ದ ಬಸ್ ಸಂಚಾರದ ಸಂಪರ್ಕಕ್ಕಾಗಿ ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಲಹೆಗಾರ ಕುಮಾರಸ್ವಾಮಿ ಸಾರ್ವಜನಿಕರ ಹಿತಾಸಕ್ತಿಯಿಂದ ನಿಗಮಕ್ಕೆ ಬರೆದಿದ್ದ ಪತ್ರಕ್ಕೆ ಸ್ಪಂದಿಸಿ ಅಧಿಕಾರಿಗಳು ಈ ಮಾರ್ಗದಲ್ಲಿ ಬಸ್ಗಳ ಸಂಚಾರ ಆರಂಭಿಸಿರುವುದು ಸಾರ್ವಜನಿಕರಲ್ಲಿ ಹರ್ಷ ತಂದಿದೆ.
ಕನಕಪುರ-ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರ್ವಜನಿಕರ ಸಂಚಾರದ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಜಯ ಕರ್ನಾಟಕ ಜನಪರ ವೇದಿಕೆ ರಾಜ್ಯ ಸಲಹೆಗಾರ ಕುಮಾರಸ್ವಾಮಿ ಅವರು ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ನಾಲ್ಕು ಬಸ್ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದೆ.
ಬೆಳಿಗ್ಗೆ 6.30, 7.30, 8.00, 9.00 ಗಂಟೆ ಹಾಗೂ ಸಂಜೆ 5.30, 6.30, 8.30 ಗಂಟೆಗೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಎಲ್ಲಾ ವರ್ಗದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಮತ್ತು ಬೆಂಗಳೂರಿನಿಂದ ಕನಕಪುರದತ್ತ ರಾತ್ರಿ ಸಮಯದಲ್ಲಿ ಬಸ್ ವ್ಯವಸ್ಥೆ ಕಲ್ಪಿಸಿರುವುದು ಸಾರ್ವಜನಿಕರಿಗೆ ಮತ್ತಷ್ಟು ಸಹಾಯಕವಾಗಲಿದೆ.
ಕನಕಪುರದಿಂದ ಬೆಂಗಳೂರು ಕಡೆಗೆ ಪ್ರತಿದಿನ ನೂರಾರು ಜನ ಉದ್ಯೋಗ, ಶಿಕ್ಷಣ, ವ್ಯಾಪಾರ ಸೇರಿದಂತೆ ವಿವಿಧ ಉದ್ದೇಶಗಳಿಗೆ ಪ್ರಯಾಣಿಸಲಿದ್ದು ಸೂಕ್ತ ಬಸ್ ವ್ಯವಸ್ಥೆ ಇಲ್ಲದೆ ಸಮಸ್ಯೆಯಾಗಿತ್ತು. ಸಾರಿಗೆ ನಿಗಮದ ಅಧಿಕಾರಿಗಳು ನನ್ನ ಮನವಿಗೆ ಸ್ಪಂದಿಸಿ ಬಸ್ ಸಂಚಾರ ಆರಂಭಿಸಿರುವುದು ಸಂತೋಷವಾಗಿದೆ. ಇಲಾಖೆ ಡಿಸಿ ಪುರುಷೋತ್ತಮರು ಜನರ ಬೇಡಿಕೆಗೆ ಸ್ಪಂದಿಸಿ ಕೈಗೊಂಡಿರುವ ಈ ಕ್ರಮಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಲಹೆಗಾರ ಕುಮಾರಸ್ವಾಮಿ ಹೇಳಿದ್ದಾರೆ.