
ಚಿಕ್ಕಮಗಳೂರು: ಜಿಲ್ಲೆಯ ಅಜ್ಜಂಪುರ ತಾಲೂಕಿನ ತಿಮ್ಮಾಪುರ ಸಮೀಪದ ಗೆಜ್ಜೆಗೊಂಡನಹಳ್ಳಿ ಹಾಗೂ ಕಡೂರು ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಓಡಾಡಿಕೊಂಡು ಸಾರ್ವಜನಿಕರಲ್ಲಿ ತೀವ್ರ ಭೀತಿ ಹುಟ್ಟಿಸಿದ್ದ ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಆದರೆ, ಈ ಕಾರ್ಯಾಚರಣೆಯ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯ ಹಾಗೂ ಅಜಾಗರೂಕತೆಯನ್ನು ಖಂಡಿಸಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಹುಲಿಕೆರೆ ಗ್ರಾಮದೊಳಗೆ ರಾಜಾರೋಷವಾಗಿ ಓಡಾಡುತ್ತಿದ್ದ ಈ ಸುಮಾರು ಎರಡು ವರ್ಷದ ಚಿರತೆ, ಮನೆಗಳ ಕಾಂಪೌಂಡ್ ಗೋಡೆಗಳ ಮೇಲೆ ಕುಳಿತು ವಿಶ್ರಾಂತಿ ಪಡೆಯುತ್ತಿತ್ತು. ಗ್ರಾಮದ ಸರ್ಕಾರಿ ಶಾಲೆಯ ಸಿಸಿಟಿವಿ ಕ್ಯಾಮೆರಾದಲ್ಲೂ ಚಿರತೆಯ ಸಂಚಾರದ ದೃಶ್ಯಗಳು ಸೆರೆಯಾಗಿದ್ದು, ಇದರಿಂದ ಗ್ರಾಮಸ್ಥರು ಮನೆಗಳಿಂದ ಹೊರಬರಲು ಹೆದರಿ ಆತಂಕದ ವಾತಾವರಣದಲ್ಲಿದ್ದರು. ಚಿರತೆ ಸೆರೆಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ನೂರಾರು ಬಾರಿ ಮನವಿ ಸಲ್ಲಿಸಿದ್ದರೂ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ.
ಚಿರತೆ ಸಂಚಾರದ ಬಗ್ಗೆ ತುರ್ತು ಮಾಹಿತಿ ನೀಡಿದರೂ ಅಜ್ಜಂಪುರ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ತಡವಾಗಿ ಆಗಮಿಸಿದ್ದಾರೆ. ಇದರಿಂದ ಕೆರಳಿದ ಗ್ರಾಮಸ್ಥರು ಅರಣ್ಯ ಸಿಬ್ಬಂದಿಯನ್ನು ತಡೆದು ಘೇರಾವ್ ಹಾಕಿ ತರಾಟೆಗೆ ತೆಗೆದುಕೊಂಡರು. ಅಷ್ಟೇ ಅಲ್ಲದೆ, ಸ್ಥಳಕ್ಕೆ ಬಂದಿದ್ದ ಕೆಲವು ಸಿಬ್ಬಂದಿ ಮದ್ಯಪಾನ ಮಾಡಿಕೊಂಡು ಕರ್ತವ್ಯಕ್ಕೆ ಬಂದಿದ್ದಾರೆ ಎಂದು ಗಂಭೀರ ಆರೋಪ ಮಾಡಿದ ಗ್ರಾಮಸ್ಥರು, ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳಿಗೆ ವೈದ್ಯಕೀಯ ತಪಾಸಣೆ (ಮೆಡಿಕಲ್ ಟೆಸ್ಟ್) ನಡೆಸಬೇಕೆಂದು ಪಟ್ಟು ಹಿಡಿದರು.
ಗ್ರಾಮಸ್ಥರ ತೀವ್ರ ಪ್ರತಿಭಟನೆ ಮತ್ತು ಆಕ್ರೋಶದ ಬಳಿಕ ಎಚ್ಚೆತ್ತ ಅರಣ್ಯ ಇಲಾಖೆ ಸಿಬ್ಬಂದಿ, ತಡರಾತ್ರಿ ಚಿರತೆ ಸಂಚರಿಸುತ್ತಿದ್ದ ಮಾರ್ಗದಲ್ಲಿ ಬೋನ್ ಅಳವಡಿಸಿದರು. ಮುಂಜಾನೆಯ ವೇಳೆಗೆ ಸುಮಾರು ಎರಡು ವರ್ಷದ ಚಿರತೆ ಬೋನಿನೊಳಗೆ ಬಿದ್ದಿದ್ದು, ಅದೃಷ್ಟವಶಾತ್ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.
ಅರಣ್ಯ ಇಲಾಖೆಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಆಗಮಿಸಿ ಬೋನಿನಲ್ಲಿದ್ದ ಚಿರತೆಯನ್ನು ಸುರಕ್ಷಿತವಾಗಿ ರಕ್ಷಿಸಿದ್ದು, ಅದನ್ನು ಸುಕ್ಷೇಮವಾಗಿ ಅರಣ್ಯ ಪ್ರದೇಶಕ್ಕೆ ಬಿಡಲು ಕ್ರಮ ಕೈಗೊಂಡಿದ್ದಾರೆ. ಆದರೆ ಕರ್ತವ್ಯ ಲೋಪ ಎಸಗಿದ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.