
ಅಂಕೋಲಾ: ಹಂಪಿಯಿಂದ ಗೋವಾ ಕಡೆ ಹೋಗುತ್ತಿದ್ದ ಸೀ ಬರ್ಡ್ ಬಸ್ ಹಾಗೂ ಹುಬ್ಬಳ್ಳಿ ಕಡೆಯಿಂದ ಮಂಗಳೂರು ಕಡೆ ಚಲಿಸುತ್ತಿದ್ದ ಗಣೇಶ ಬಸ್ ಹಾಗೂ ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆ ಚಲಿಸುತ್ತಿದ್ದ ಲಾರಿ ನಡುವೆ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 8 ಮಂದಿಗೆ ಗಂಭೀರ ಗಾಯಗಳಾಗಿದ್ದು, 24 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಘಟನೆಯು ಅಂಕೋಲಾ ತಾಲೂಕಿನ ಸುಂಕಸಾಳ ಮೂಲೆಮನೆ ಎಂಬಲ್ಲಿ ನಡೆದಿದೆ.
ಈ ಘಟನೆಯಿಂದ ಎರಡು ಬಸ್ಗಳು ಹಾಗೂ ಲಾರಿಯ ಮುಂಬಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಅಪಘಾತದಲ್ಲಿ ಗಾಯಗೊಂಡಿರುವವರ ಪೈಕಿ 12 ಮಂದಿ ವಿದೇಶಿಯರು ಇದ್ದಾರೆ. ಗಂಭೀರವಾಗಿ ಗಾಯಗೊಂಡ ಎಂಟು ಮಂದಿಯನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ 24 ಗಾಯಾಳುಗಳು ಅಂಕೋಲಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಈ ಸರಣಿ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಕಿಲೋಮೀಟರ್ಗಟ್ಟಲೇ ಟ್ರಾಫಿಕ್ ಜಾಮ್ ಆಗಿದೆ. ಅರಬೈಲ್ ಘಟ್ಟದಲ್ಲಿಯೂ ಸುಮಾರು ಐದು ತಾಸುಗಳ ಕಾಲ ವಾಹನಗಳು ಸಾಲುಗಟ್ಟಿನಿಂತಿವೆ. ಇದಾದ ಬಳಿಕ ಘಟನಾ ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಾಹನ ತೆರವು ಕಾರ್ಯಚರಣೆ ಮಾಡಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು. ಇದೀಗ ಈ ಘಟನೆಯ ಸಂಬಂಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.