
ಮಂಡ್ಯ: ಮಂಡ್ಯ ಹೊರವಲಯದ ಎಸ್.ಐ.ಕೋಡಿಹಳ್ಳಿ ಗೇಟ್ನಿಂದ ಹಲ್ಲೇಗೆರೆ ಗ್ರಾಮದವರೆಗೆ 7.5 ಕಿ.ಮೀ. ರಸ್ತೆಯನ್ನು 11.4 ಕೋಟಿ ರು. ವೆಚ್ಚದಲ್ಲಿ ನಿರ್ಮಾಣ ಮಾಡುವುದಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ಹಲ್ಲೇಗೆರೆಯಲ್ಲಿ ಅನಿವಾಸಿ ಭಾರತೀಯ, ಅಮೆರಿಕಾ ವೈದ್ಯ ಡಾ.ಲಕ್ಷ್ಮೀನರಸಿಂಹಮೂರ್ತಿ ಅವರು ಭೂತಾಯಿ ಟ್ರಸ್ಟ್ ಹೆಸರಿನಲ್ಲಿ ನಿರ್ಮಿಸುತ್ತಿರುವ ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರದ ಶಂಕುಸ್ಥಾಪನಾ ಸಮಾರಂಭಕ್ಕೆ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮಾ ಮತ್ತು ಪತ್ನಿ ಮಿಚೆಲ್ ಆಗಮಿಸಲಿರುವ ಹಿನ್ನೆಲೆಯಲ್ಲಿ ಅತ್ಯುತ್ತಮ ಗುಣಮಟ್ಟದಲ್ಲಿ ರಸ್ತೆ ನಿರ್ಮಿಸುವುದಕ್ಕೆ ಸಿದ್ಧತೆ ನಡೆದಿದೆ.
ಈ ಶಂಕುಸ್ಥಾಪನಾ ಸಮಾರಂಭದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಈಗಾಗಲೇ ಹೆಲಿಪ್ಯಾಡ್, ರಸ್ತೆ, ಚರಂಡಿ, ವಿದ್ಯುತ್ ದೀಪ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳ ಬಗ್ಗೆ ಸಮಾಲೋಚನೆ ನಡೆಸಿ ಎಲ್ಲೆಲ್ಲಿ ಏನೇನು ಸೌಲಭ್ಯ ಕಲ್ಪಿಸಬೇಕೆಂಬ ಬಗ್ಗೆ ಪರಿಶೀಲನೆ ನಡೆಸಲಾಗಿದೆ.
ಸರ್ಕಾರದಿಂದ ಅಗತ್ಯ ಸವಲತ್ತುಗಳನ್ನು ಒದಗಿಸಿಕೊಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿತ್ತು. ಅದಕ್ಕೆ ಮುಖ್ಯಮಂತ್ರಿಯೂ ಒಪ್ಪಿಗೆ ಸೂಚಿಸಿದ್ದರು. ಅದರಂತೆ 7.5 ಕಿ.ಮೀ. ರಸ್ತೆ ಅಭಿವೃದ್ಧಿಗೆ 11.5 ಕೋಟಿ ರು. ಬಿಡುಗಡೆಗೆ ಸಂಪುಟ ಅಸ್ತು ನೀಡಿದೆ. ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಸೇರಿದಂತೆ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.