
ಬೆಂಗಳೂರು: ನೆಲಮಂಗಲ ತಾಲೂಕಿನ ಟಿ. ಬೇಗೂರು ಗ್ರಾಮದಲ್ಲಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ನಡೆದ ಘಟನೆೊಂದು ದೊಡ್ಡ ಗಲಾಟೆಗೆ ಕಾರಣವಾಗಿದ್ದು, ಕ್ಯಾಂಪಸ್ದಲ್ಲೇ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರ ಒಡೆತನದ ಈ ಕಾಲೇಜಿನಲ್ಲಿ ನಡೆದ ಘಟನೆ ಇದೀಗ ಸಾರ್ವಜನಿಕ ವಲಯದಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಮಾಹಿತಿಯ ಪ್ರಕಾರ, ಕಾಲೇಜಿನ ಪ್ರಾಧ್ಯಾಪಕ ಅಬ್ದುಲ್ ಅವರು ತರಗತಿ ಕೊಠಡಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಅಸಭ್ಯವಾಗಿ ವರ್ತಿಸಿ ಪ್ರಪೋಸ್ ಮಾಡಿದರೆಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಚಾಕಲೇಟ್ ನೀಡಿ ತನ್ನ ಪ್ರೀತಿಯನ್ನು ವ್ಯಕ್ತಪಡಿಸಲು ಪ್ರಯತ್ನಿಸಿದರೆಂದು ಹೇಳಲಾಗುತ್ತಿದೆ. ಈ ವರ್ತನೆಗೆ ಆಕ್ರೋಶಗೊಂಡ ವಿದ್ಯಾರ್ಥಿನಿ ತಕ್ಷಣವೇ ಅದನ್ನು ತಿರಸ್ಕರಿಸಿದ್ದು, ಇದರಿಂದ ತರಗತಿಯಲ್ಲೇ ಮಾತಿನ ಚಕಮಕಿ ಆರಂಭವಾಗಿ ಗಲಾಟೆಗೆ ತಿರುಗಿದೆ.
ಘಟನೆಯ ವಿಷಯ ತಿಳಿದ ಕೂಡಲೇ ಇತರ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸ್ತ್ರೀ ಕುಲಕ್ಕೆ ಗೌರವ ಇಲ್ಲವೇ?” ಎಂದು ಪ್ರಶ್ನಿಸುತ್ತಾ, ಆರೋಪಿತ ಪ್ರಾಧ್ಯಾಪಕನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ಕ್ಷಣಾರ್ಧದಲ್ಲಿ ಹದಗೆಟ್ಟು, ಕೆಲ ವಿದ್ಯಾರ್ಥಿಗಳು ಪ್ರಾಧ್ಯಾಪಕ ಅಬ್ದುಲ್ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾರೆ.
ವಿದ್ಯಾರ್ಥಿನಿಯೂ ಸಹ ಆಕ್ರೋಶದಿಂದ ಪ್ರಾಧ್ಯಾಪಕನನ್ನು ಚಪ್ಪಲಿಯಿಂದ ಥಳಿಸಿದರೆಂದು ತಿಳಿದುಬಂದಿದೆ. ಇನ್ನು ಕೆಲ ವಿದ್ಯಾರ್ಥಿಗಳು ಕಾಲಿನಿಂದ ಹೊಡೆದು, ಕಾಲೇಜು ಕ್ಯಾಂಪಸ್ನಲ್ಲೇ ಅಟ್ಟಾಡಿಸಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಪ್ರಾಧ್ಯಾಪಕನನ್ನು ಕಾರಿನ ಬಳಿ ಹಿಂಬಾಲಿಸಿ ಮತ್ತೆ ಹಲ್ಲೆ ನಡೆಸಿದರೆಂದು ಹೇಳಲಾಗುತ್ತಿದೆ.
ಹಲ್ಲೆಯಿಂದ ಗಾಯಗೊಂಡ ಪ್ರಾಧ್ಯಾಪಕ ಅಬ್ದುಲ್, ಪರಿಸ್ಥಿತಿ ತೀವ್ರವಾಗುತ್ತಿದ್ದಂತೆ ಸ್ಥಳದಿಂದ ಓಡಿ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ನಂತರ ಕಾಲೇಜು ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಈ ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಪೊಲೀಸರು ಘಟನೆಯ ಸಂಪೂರ್ಣ ವಿವರಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.
ಗೃಹ ಸಚಿವರ ಒಡೆತನದ ಕಾಲೇಜಿನಲ್ಲೇ ಇಂತಹ ಘಟನೆ ನಡೆದಿರುವುದು ರಾಜ್ಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ವಿದ್ಯಾರ್ಥಿನಿಯರ ಸುರಕ್ಷತೆ, ಶಿಕ್ಷಣ ಸಂಸ್ಥೆಗಳಲ್ಲಿ ನೈತಿಕತೆ ಮತ್ತು ಪ್ರಾಧ್ಯಾಪಕರ ನಡೆ-ನುಡಿಗಳ ಬಗ್ಗೆ ಗಂಭೀರ ಪ್ರಶ್ನೆಗಳು ಉದ್ಭವಿಸಿವೆ.
ಈ ಘಟನೆ ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ ಮಹಿಳೆಯರ ಗೌರವ ಮತ್ತು ಭದ್ರತೆಯನ್ನು ಖಚಿತಪಡಿಸಬೇಕೆಂಬ ಬೇಡಿಕೆ ಮತ್ತೊಮ್ಮೆ ಕೇಳಿಬಂದಿದೆ.