Mysuru : 1110 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

Published : Mar 10, 2023, 05:40 AM IST
Mysuru :   1110 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ಸಾರಾಂಶ

ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಟ್ಟಣದ ವಿವಿಧ ಕೊಳೆಗೇರಿ ಬಡಾವಣೆಗಳಲ್ಲಿ ವಾಸಿಸುತ್ತಿರುವ 1,110 ಮಂದಿ ಫಲಾನುಭವಿಗಳಿಗೆ ಮನೆಯ ಹಕ್ಕುಪತ್ರವನ್ನು ಶಾಸಕ ಎಚ್‌.ಪಿ. ಮಂಜುನಾಥ್‌ ವಿತರಿಸಿದರು.

  ಹುಣಸೂರು :  ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಟ್ಟಣದ ವಿವಿಧ ಕೊಳೆಗೇರಿ ಬಡಾವಣೆಗಳಲ್ಲಿ ವಾಸಿಸುತ್ತಿರುವ 1,110 ಮಂದಿ ಫಲಾನುಭವಿಗಳಿಗೆ ಮನೆಯ ಹಕ್ಕುಪತ್ರವನ್ನು ಶಾಸಕ ಎಚ್‌.ಪಿ. ಮಂಜುನಾಥ್‌ ವಿತರಿಸಿದರು.

ಪಟ್ಟಣದ ಅಂಬೇಡ್ಕರ್‌ ಭವನದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದ ಅವರು, 8 ತಿಂಗಳ ಹಿಂದೆಯೇ ನಗರವ್ಯಾಪ್ತಿಯಲ್ಲಿ 30-40ವರ್ಷಗಳಿಂದ ಸ್ಲಂ ಬಡಾವಣೆಗಳಲ್ಲಿ ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವ ಕುಟುಂಬಗಳನ್ನು ಸಮೀಕ್ಷೆ ಮಾಡಿ ಗುರುತಿಸಲಾಗಿತ್ತು. ಹತ್ತಾರು ವರ್ಷಗಳಿಂದ ಮನೆ ಹೊಂದಿದ್ದರೂ ಮನೆಯ ದಾಖಲೆ ಇಲ್ಲದೇ ಸರ್ಕಾರದ ಯಾವುದೇ ಸವಲತ್ತುಗಳನ್ನು ಪಡೆಯಲು ಈ ಕುಟುಂಬಗಳು ವಿಫಲವಾಗಿದ್ದವು.

ಸರ್ವೆ ನಡೆದ ನಂತರ ಕೊಳೆಗೇರಿ ಅಭಿವೃದ್ಧಿ ಮಂಡಳಿ ಹಕ್ಕುಪತ್ರ ವಿತರಿಸಲು ಮುಂದಾದಾಗ ಹಲವಾರು ತಾಂತ್ರಿಕ ಮತ್ತು ರಾಜಕೀಯ ಒತ್ತಡಗಳು ಬಂದ ಕಾರಣ ಹಕ್ಕುಪತ್ರ ವಿತರಣೆಗೆ ವಿಳಂಬವಾಗಿದೆ. ಇದೀಗ ಹಕ್ಕುಪತ್ರ ವಿತರಣೆಯನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 3 ದಿನಗಳ ಹಿಂದೆ ಮೈಸೂರಿನಲ್ಲಿ ಸಾಂಕೇತಿಕವಾಗಿ ಮಾಡಿದ್ದು, ಮೊದಲ ಹಂತವಾಗಿ 600 ಫಲಾನುಭವಿಗಳಿಗೆ ವಿತರಿಸಲಾಗುತ್ತಿದೆ. ಇನ್ನುಳಿದ ಫಲಾನುಭವಿಗಳಿಗೆ ಅವರ ಬಡಾವಣೆಗಳಿಗೆ ತೆರಳಿ ವಿತರಿಸಲಾಗುವುದು ಎಂದರು.

ಕೊಳಗೇರಿ ಅಭಿವೃದ್ಧಿ ಮಂಡಳಿ ನಿರ್ದೇಶಕ ಬಿಳಿಗಿರಿ, ನಗರಸಭಾ ಸದಸ್ಯರಾದ ಸ್ವಾಮಿಗೌಡ, ಸೌರಭ ಸಿದ್ದರಾಜು, ದೇವನಾಯಕ, ಜಾಕೀರ್‌ ಮಂಡಳಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ಹಕ್ಕುಪತ್ರಕ್ಕೆ  ಒತ್ತಾಯ

ಕೊಡಗು  : ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಅಳುವಾರದ ಚಿಕ್ಕ ಅಳುವಾರಮ್ಮ ದೇವಾಲಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ‘ಗ್ರಾಮ ವಾಸ್ತವ್ಯ’ ಕಾರ್ಯಕ್ರಮದಲ್ಲಿ ತೊರೆನೂರು ಗ್ರಾ.ಪಂ.ವ್ಯಾಪ್ತಿಯ ಹಲವು ಸಮಸ್ಯೆಗಳ ಬಗ್ಗೆ ಸ್ಥಳೀಯರು ಬೆಳಕು ಚೆಲ್ಲಿದರು. ಈಗಾಗಲೇ ಊರುಡುವೆ ಪೈಸಾರಿ ಜಾಗದಲ್ಲಿ ವಾಸಿಸುತ್ತಿರುವವರಿಗೆ ಹಕ್ಕುಪತ್ರ ವಿತರಿಸುವುದು, ಆಶ್ರಯ ಮನೆ ಯೋಜನೆಯಡಿ ಮನೆ ನಿರ್ಮಾಣಕ್ಕೆ ನಿವೇಶನ ಇಲ್ಲದವರಿಗೆ ನಿವೇಶನ ಒದಗಿಸುವುದು, ಗ್ರಾಮದಿಂದ ಗ್ರಾಮಕ್ಕೆ ರಸ್ತೆ ಸಂಪರ್ಕಕ್ಕೆ ಹಂತ ಹಂತವಾಗಿ ಪರಿಹರಿಸುವುದು, ಕಾಡಾನೆ ಹಾವಳಿ ನಿಯಂತ್ರಣ ಸಂಬಂದ ಟ್ರಂಚ್ ನಿರ್ಮಾಣ ಹೀಗೆ ಹಲವು ಸಮಸ್ಯೆಗಳನ್ನು ಸ್ಥಳೀಯರು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರು

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಈಗಾಗಲೇ ಪೈಸಾರಿ ಜಾಗದಲ್ಲಿ ಹಲವು ದಶಕಗಳಿಂದ ವಾಸುತ್ತಿರುವವರಿಗೆ 94ಸಿ ರಡಿ ಹಕ್ಕುಪತ್ರ ವಿತರಿಸಲಾಗುವುದು, ತೊರೆನೂರು ಗ್ರಾ.ಪಂ.ವ್ಯಾಪ್ತಿಯ 204 ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಕಲ್ಪಿಸುವುದು, ಗ್ರಾಮ ಗ್ರಾಮಗಳ ಸಂಪರ್ಕ ಸಂಬಂಧ ರಸ್ತೆ ನಿರ್ಮಾಣಕ್ಕೆ ಹಂತ ಹಂತವಾಗಿ ಕೈಗೆತ್ತಿಕೊಳ್ಳುವುದು ಹೀಗೆ ಹಲವು ಸಾರ್ವಜನಿಕ ಕಾರ್ಯಗಳಿಗೆ ಜಿಲ್ಲಾಡಳಿತ ಸ್ಪಂದಿಸಲಿದೆ ಎಂದರು. 
ಸಭೆಯ ಆರಂಭದಲ್ಲಿ ಮಾತನಾಡಿದ ಸ್ಥಳೀಯರಾದ ವೆಂಕಟೇಶ್ ಅವರು ಚಿಕ್ಕಅಳುವಾರ ಗ್ರಾಮದಲ್ಲಿ ಕುಡಿಯುವ ನೀರು, ಬೀದಿ ದೀಪ, ರಸ್ತೆ ನಿರ್ಮಾಣ ಮತ್ತಿತರ ಕಾರ್ಯಗಳು ಆಗಬೇಕಿದ್ದು, ಸ್ಥಳ ಪರಿಶೀಲಿಸಿ ರಸ್ತೆ ನಿರ್ಮಾಣಕ್ಕೆ ಸಹಕರಿಸುವಂತೆ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ತೊರೆನೂರು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ವೀಣಾ ಅವರು ರಸ್ತೆ ನಿರ್ಮಾಣ ಸಂಬಂಧ ಕ್ರಿಯಾ ಯೋಜನೆಯಲ್ಲಿ ಸೇರಿಸಿಕೊಳ್ಳಲಾಗಿದೆ. ಆದರೆ ಭೂ ಮಾಲೀಕರು ರಸ್ತೆ ನಿರ್ಮಾಣಕ್ಕೆ ಅವಕಾಶ ಮಾಡುತ್ತಿಲ್ಲ ಎಂದು ಸಭೆಯ ಗಮನಕ್ಕೆ ತಂದರು.

PREV
Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC