
ಶಿವಮೊಗ್ಗ / ನವದೆಹಲಿ (ಆ.22): ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 'ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ-2026' (National Teachers Award-2026) ಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಅದ್ವಿತೀಯ ಸೇವೆ ಸಲ್ಲಿಸಿದ ದೇಶದ ಒಟ್ಟು 48 ಅತ್ಯುತ್ತಮ ಶಿಕ್ಷಕರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದ್ದು, ಇದರಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರೂ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಗ್ರಾಮೀಣ ಭಾಗದ ಶಾಲೆಯಲ್ಲಿ ಮೂಲಸೌಕರ್ಯ ವೃದ್ಧಿ ಹಾಗೂ ಮಕ್ಕಳಲ್ಲಿ ಅಕ್ಷರ ದೀವಿಗೆ ಬೆಳಗುವ ಮೂಲಕ ಮಾದರಿ ಶೈಕ್ಷಣಿಕ ಸೇವೆ ನೀಡಿದ ರತ್ನಕುಮಾರಿ ಅವರ ಈ ಸಾಧನೆ ಇಡೀ ರಾಜ್ಯ ಹಾಗೂ ಶಿಕ್ಷಕ ಸಮುದಾಯವೇ ಹೆಮ್ಮೆ ಪಡುವಂತೆ ಮಾಡಿದೆ.
ಸೆಪ್ಟೆಂಬರ್ 5ರ 'ಶಿಕ್ಷಕರ ದಿನಾಚರಣೆ'ಯಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜಿಸಲಾಗುವ ಅದ್ಧೂರಿ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ 'ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ'ಯನ್ನು ರತ್ನಕುಮಾರಿ ಅವರಿಗೆ ಪ್ರದಾನ ಮಾಡಿ ಗೌರವಿಸಲಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊಸನಗರದ ಈ ಗ್ರಾಮೀಣ ಶಿಕ್ಷಕಿಯ ಸಾಧನೆಗೆ ಹರ್ಷ ವ್ಯಕ್ತಪಡಿಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ವಿಶೇಷ ಅಭಿನಂದನೆ ಸಲ್ಲಿಸಿದ್ದಾರೆ. "ನಮ್ಮ ಇಲಾಖೆ, ರಾಜ್ಯ ಹಾಗೂ ಶಿವಮೊಗ್ಗ ಜಿಲ್ಲೆ ಹೆಮ್ಮೆ ಪಡುವಂತೆ ಮಾಡಿದ ಶ್ರೀಮತಿ ರತ್ನಕುಮಾರಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ನೀವು ಸಲ್ಲಿಸುತ್ತಿರುವ ಸೇವೆ ಇಡೀ ರಾಜ್ಯದ ಶಿಕ್ಷಕ ಸಮುದಾಯಕ್ಕೆ ಮಾದರಿಯಾಗಿದೆ. ನಿಮ್ಮ ಈ ಪವಿತ್ರವಾದ ಶೈಕ್ಷಣಿಕ ಕಾಯಕ ಹೀಗೆಯೇ ಮುಂದುವರಿಯಲಿ," ಎಂದು ಸಚಿವರು ಶುಭ ಹಾರೈಸಿದ್ದಾರೆ.