ರಸಗೊಬ್ಬರ ಮತ್ತು ಬಿತ್ತನೆ ಬೀಜದ ಕೊರತೆ ಇಲ್ಲ: ರೈತರಿಗೆ ಸಚಿವರ ಅಭಯ

By Suvarna NewsFirst Published Jun 16, 2021, 2:59 PM IST
Highlights
  • ರಾಜ್ಯದಲ್ಲಿ ಮುಂಗಾರು ಹಂಗಾಮು ಪ್ರಾರಂಭ 
  • ಪೂರ್ವ ಸಿದ್ಧತಾ ಸಭೆ ನಡೆಸಿ, ಪರಿಶೀಲನೆ ನಡೆಸಿದ ಸಚಿವರು
  • ಸಭೆ ನಡೆಸಿದ ಎಸ್.ಟಿ.ಸೋಮಶೇಖರ್ ಹಾಗೂ ಕೃಷಿ ಸಚಿವ  ಬಿ.ಸಿ.ಪಾಟೀಲ್ 

ಮೈಸೂರು(ಜೂ.16) : ಮುಂಗಾರು ಹಂಗಾಮು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಕೃಷಿ ಸಚಿವ  ಬಿ.ಸಿ.ಪಾಟೀಲ್ ಬುಧವಾರ ಪೂರ್ವ ಸಿದ್ಧತಾ ಸಭೆ ನಡೆಸಿ, ಪರಿಶೀಲನೆ ನಡೆಸಿದರು.

ಮೈಸೂರಿನಲ್ಲಿಂದು ಮಾತನಾಡಿದ ಸಚಿವ ಬಿ.ಸಿ.ಪಾಟೀಲ್ ಜಿಲ್ಲೆಯಲ್ಲಿ ಬಿತ್ತನೆ ಬೀಜವು ರೈತರಿಗೆ ಸರಿಯಾದ ಸಮಯದಲ್ಲಿ ದೊರೆಯಬೇಕು. ಯಾವ ರೈತರಿಗೂ ಬಿತ್ತನೆ ಬೀಜದ ಕೊರತೆಯಾಗಬಾರದು. ಹಾಗೂ ಬಿತ್ತನೆ ಬೀಜಗಳ ಬಗ್ಗೆ ಹೆಚ್ಚು ಪ್ರಚಾರ ನೀಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ರಾಜ್ಯದಲ್ಲಿ 3.06 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಪೂರ್ಣ

ಜಿಲ್ಲೆಯ ಕೃಷಿ ಕೇಂದ್ರಗಳಲ್ಲಿ ಎಷ್ಟು ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳು ಇದೆ ಎಂಬುದರ ಬಗ್ಗೆ ರೈತರಿಗೆ ಮಾಧ್ಯಮದ ಮುಖಾಂತರ ತಿಳಿಸಿ. ಇದರಿಂದ ರೈತರಿಗೆ ಅನುಕೂಲಕರವಾಗಲಿದೆ. ಇಲ್ಲದಿದ್ದರೆ ಬಿತ್ತನೆ ಬೀಜ ಸಿಗುತ್ತಿಲ್ಲ ಎಂದು ತಪ್ಪು ಸುದ್ದಿ ಹೋಗುತ್ತದೆ. ಹೀಗಾಗಿ ಇದರ ಬಗ್ಗೆ ಹೆಚ್ಚು ಪ್ರಚಾರ ನೀಡಿ ಎಂದು ಹೇಳಿದರು.

ರೈತರಿಗೆ ಬಿತ್ತನೆ ಬೀಜಗಳು ಸೂಕ್ತ ಬೆಲೆಯಲ್ಲಿ ನಿಗದಿತ ಸಮಯಕ್ಕೆ ಸಿಗಬೇಕು. ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರೆ ಅಂತಹವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ. ಕೃತಕವಾಗಿ ಅಭಾವ ಸೃಷ್ಟಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಿ ಹಾಗೂ ಸಾಧ್ಯವಾದರೆ ಅಂತಹ ಅಂಗಡಿಗಳನ್ನು ಜಪ್ತಿ ಮಾಡಿ ಎಂದರು.

ಜೂ.15ಕ್ಕೆ ಇಫ್ಕೋ ನ್ಯಾನೋ ಯೂರಿಯಾ ಮಾರುಕಟ್ಟೆಗೆ : ಕೃಷಿಯಲ್ಲಿ ಹೊಸ ಕ್ರಾಂತಿ

ಮೈಸೂರು ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ. ಬಿತ್ತನೆ ಬೀಜಕ್ಕೆ 39,798 ಕ್ವಿಂಟಾಲ್ ಬೇಡಿಕೆ ಇದ್ದು, 45,275 ಕ್ವಿಂಟಾಲ್ ಲಭ್ಯತೆ ಇದೆ‌. ರಸಗೊಬ್ಬರ 44,209 ಮೆಟ್ರಿಕ್ ಟನ್ ದಾಸ್ತಾನು ಇತ್ತು. ಈಗಾಗಲೇ 26,459 ಮೆಟ್ರಿಕ್ ಟನ್ ಮಾರಾಟ ಮಾಡಲಾಗಿದೆ. ಇನ್ನೂ 17,749 ಮೆಟ್ರಿಕ್ ಟನ್ ದಾಸ್ತಾನು ಉಳಿದಿದೆ ಎಂದು ಸಚಿವರಿಗೆ ಅಧಿಕಾರಿಗಳು ಮಾಹಿತಿ ನೀಡಿದರು. 

ಶಾಸಕರಾದ ಕೆ.ಮಹದೇವ್, ಹರ್ಷವರ್ಧನ್, ಅನೀಲ್ ಚಿಕ್ಕಮಾದು, ವಿಧಾನಪರಿಷತ್ ಸದಸ್ಯ ಧರ್ಮಸೇನ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಪಂಚಾಯಿತಿಯ ಸಿಇಒ ಎ.ಎಂ.ಯೋಗೀಶ್,  ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಸೇರಿದಂತೆ ಇತರರು ಹಾಜರಿದ್ದರು.

click me!