ರಾಜ್ಯದ ಚಾರಣ ಪಥಗಳ ಆನ್‌ಲೈನ್ ಬುಕ್ಕಿಂಗ್‌ ಶೀಘ್ರ: ಸಚಿವ ಈಶ್ವರ ಖಂಡ್ರೆ

By Kannadaprabha NewsFirst Published Jul 3, 2024, 7:12 PM IST
Highlights

ರಾಜ್ಯದ ವಿವಿಧ ಚಾರಣ ಪಥಗಳಿಗೆ ಆನ್‌ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಶೀಘ್ರ ಜಾರಿಯಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ. 

ಮಂಗಳೂರು (ಜು.03): ರಾಜ್ಯದ ವಿವಿಧ ಚಾರಣ ಪಥಗಳಿಗೆ ಆನ್‌ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಶೀಘ್ರ ಜಾರಿಯಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ. ನಗರದ ಪಡೀಲ್‌ನಲ್ಲಿರುವ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲ ಚಾರಣ ಪಥಗಳ ಆನ್‌ಲೈನ್‌ ಬುಕ್ಕಿಂಗ್‌ಗಾಗಿ ಒಂದೇ ವೆಬ್‌ಸೈಟ್‌ನಲ್ಲಿ ಅವಕಾಶ, ಅದರ ಸಾಫ್ಟ್‌ವೇರ್‌ ಜು.15ರೊಳಗೆ ತಯಾರಾಗಲಿದೆ. ನಂತರ ಅತಿ ಶೀಘ್ರ ಬುಕ್ಕಿಂಗ್‌ ಪುನಾರಂಭ ಮಾಡಲಾಗುವುದು. ಒಂದೇ ವೆಬ್ ಸೈಟ್‌ ಆಗಿರುವುದರಿಂದ ಒಂದು ಚಾರಣ ಪಥದಲ್ಲಿ ಟಿಕೆಟ್ ಸಿಗದಿದ್ದರೆ ಮತ್ತೊಂದಕ್ಕೆ ಟಿಕೆಟ್ ಕಾಯ್ದಿರಿಸುವ ಅವಕಾಶವೂ ಇರಲಿದೆ ಎಂದು ವಿವರಿಸಿದರು.

ಚಾರಣಿಗರಿಗೆ ಮಿತಿ: ಕಳೆದ ಜನವರಿಯಲ್ಲಿ ಕೆಲವು ಚಾರಣ ಪ್ರದೇಶಗಳಿಗೆ ಸಾವಿರಾರು ಚಾರಣಿಗರು ಒಂದೇ ದಿನ ಲಗ್ಗೆ ಇಟ್ಟು ಗೊಂದಲ ಉಂಟಾಗಿ ದೂರು ಬಂದ ಹಿನ್ನೆಲೆಯಲ್ಲಿ ಚಾರಣವನ್ನೇ ಸ್ಥಗಿತಗೊಳಿಸಲಾಗಿತ್ತು. ಇದೀಗ, ಪ್ರತಿ ಚಾರಣ ಪಥದಲ್ಲೂ ಅದರ ವಿಸ್ತಾರ, ಇತರ ಮೂಲಭೂತ ಸೌಲಭ್ಯಗಳನ್ನು ಗಮನದಲ್ಲಿಟ್ಟುಕೊಂಡು, ಪರಿಸರದ ಕಾಳಜಿಯೊಂದಿಗೆ ಚಾರಣಿಗರ ಸಂಖ್ಯೆಗೆ ಮಿತಿ ವಿಧಿಸಲಾಗುವುದು ಎಂದು ಖಂಡ್ರೆ ತಿಳಿಸಿದರು. ಈಗಾಗಲೇ ರಾಜ್ಯದ ಕೆಲವು ಚಾರಣ ಪಥಗಳನ್ನು ಪರಿಸರ ಪ್ರವಾಸೋದ್ಯಮ ವಿಭಾಗ ನಿರ್ವಹಿಸುತ್ತಿದ್ದು, ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿದೆ. 

ಜಾಗತಿಕ ತಾಪಮಾನ ಏರಿಕೆ, ಹವಾಮಾನ ಬದಲಾವಣೆ ಜಗತ್ತಿಗೇ ಸವಾಲು: ಸಚಿವ ಈಶ್ವರ ಖಂಡ್ರೆ

ಆದರೆ ಅರಣ್ಯ ಇಲಾಖೆ ಮಂಗಳೂರು ವಲಯದ 8 ಪ್ರಮುಖ ಪ್ರದೇಶಗಳು ಸೇರಿ ರಾಜ್ಯದೆಲ್ಲೆಡೆಯ ಬಹಳಷ್ಟು ಚಾರಣ ಪಥಗಳಿಗೆ ಇನ್ನೂ ಚಾರಣಕ್ಕೆ ಅವಕಾಶ ನೀಡಿಲ್ಲ. ಈ ಎಲ್ಲ ಚಾರಣ ಪಥಗಳಿಗೂ ಏಕಕಾಲದಲ್ಲಿ ಟಿಕೆಟ್ ಬುಕ್ಕಿಂಗ್‌ ಆರಂಭವಾಗಲಿದೆ ಎಂದರು. ಕೆಲವು ಪ್ರವಾಸಿ ಸಂಸ್ಥೆಗಳು (ಟೂರ್ ಆಪರೇಟರ್‌ಗಳು) ಚಾರಣ ಪಥಗಳ ಬಗ್ಗೆ ಯುವ ಜನರಲ್ಲಿ ಅತಿಯಾದ ಆಸಕ್ತಿ ಕೆರಳಿಸುತ್ತಿದ್ದು, ಇದರ ಪರಿಣಾಮ ಚಾರಣ ಪಥಗಳಲ್ಲಿ ವಾರಾಂತ್ಯದಲ್ಲಿ ದಟ್ಟಣೆ ಹೆಚ್ಚುತ್ತಿದೆ. ಪ್ಲಾಸ್ಟಿಕ್ ತ್ಯಾಜ್ಯದ ರಾಶಿಯೂ ಸಮಸ್ಯೆಯಾಗಿ ಪರಿಣಮಿಸಿದೆ. ಪ್ರಕೃತಿ, ವನ್ಯಜೀವಿಗಳನ್ನು ಉಳಿಸಲು ಕೆಲವು ಕಠಿಣ ಕ್ರಮ ಕೈಗೊಳ್ಳುವ ಅಗತ್ಯತೆ ಇದೆ ಎಂದು ಸಚಿವರು ಹೇಳಿದರು. ಗೇರು ನಿಗಮ ಅಧ್ಯಕ್ಷೆ ಮಮತಾ ಗಟ್ಟಿ ಇದ್ದರು.

ಅರಣ್ಯ ಜಮೀನು ಒತ್ತುವರಿ ಮುಕ್ತ: ಅರಣ್ಯ ಇಲಾಖೆಯ ಮಂಗಳೂರು ವೃತ್ತ (ನಾಲ್ಕು ಜಿಲ್ಲೆಗಳ ವ್ಯಾಪ್ತಿ)ವನ್ನು ‘ಅರಣ್ಯ ಜಮೀನು ಒತ್ತುವರಿ ಮುಕ್ತ’ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಣ್ಯ ಒತ್ತುವರಿಯ ಪ್ರತಿ ಪ್ರಕರಣಗಳನ್ನು ಪತ್ತೆ ಹಚ್ಚಿ ನೋಟಿಸ್‌ ಕಳುಹಿಸಲು, ಕೋರ್ಟ್‌ನಲ್ಲಿರುವ ಪ್ರಕರಣಗಳ ಶೀಘ್ರ ವಿಲೇವಾರಿಗೆ ಕ್ರಮ ವಹಿಸುವಂತೆ ಈ ಹಿಂದೆಯೇ ಸೂಚಿಸಿದ್ದೆ. ಅದರಂತೆ ಕಾರ್ಯ ಪ್ರಗತಿ ಆಗುತ್ತಿದೆ ಎಂದು ಹೇಳಿದರು.

ನನ್ನ ಮಗ ಜೈಲಿನಿಂದ ಹೊರ ಬರುತ್ತಾನೆ: ದರ್ಶನ್ ಸ್ಥಿತಿ ಕಂಡು ಕಣ್ಣೀರಿಟ್ಟ ಮಾಲತಿ ಸುಧೀರ್

150 ಹೆಕ್ಟೇರಲ್ಲಿ ಕಾಂಡ್ಲಾವನ: ಮಂಗಳೂರು ವೃತ್ತದಲ್ಲಿ 150 ಹೆಕ್ಟೇರ್ ಪ್ರದೇಶದಲ್ಲಿ ಕಾಂಡ್ಲಾವನಗಳನ್ನು ನೆಡಲು ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮುಂದಿನ ದಿನಗಳಲ್ಲಿ 10 ಲಕ್ಷ ಕಾಂಡ್ಲಾ ಗಿಡಗಳನ್ನು ನೆಡಲಾಗುವುದು ಎಂದರು. ಸಿಆರ್‌ಝಡ್‌ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪತ್ತೆಹಚ್ಚಿ, ಕೋರ್ಟ್‌ನಲ್ಲಿ ಬಾಕಿ ಉಳಿದ ಪ್ರಕರಣಗಳ ಶೀಘ್ರ ವಿಲೇವಾರಿ ಮಾಡಿಸಲು ಸೂಚಿಸಿದ್ದು, ನಿಯಮ ಉಲ್ಲಂಘನೆ ಮಾಡಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಖಂಡ್ರೆ ತಿಳಿಸಿದರು.

click me!