
ಬೆಂಗಳೂರು ನಗರದಲ್ಲಿ ಸಂಚಾರ ವ್ಯವಸ್ಥೆಗೆ ಮಹತ್ವವಾದ ಹೆಜ್ಜೆಯಾಗಿ ಗುರುತಿಸಿಕೊಂಡಿರುವ ಪೀಣ್ಯ ಎಲಿವೇಟೆಡ್ ಫ್ಲೈಓವರ್ (ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ) ಮೇಲೆ ನಾಲ್ಕು ದಿನಗಳ ಕಾಲ ಸಂಪೂರ್ಣ ವಾಹನ ಸಂಚಾರವನ್ನು ನಿರ್ಬಂಧಿಸಲಾಗುತ್ತಿದೆ. ತುಮಕೂರು ರಸ್ತೆಯ ಈ ಪ್ರಮುಖ ಮೇಲ್ಸೇತುವೆಯಲ್ಲಿ ದುರಸ್ತಿ ಕಾಮಗಾರಿಗಳ ಅಂತಿಮ ಹಂತದ ‘ಲೋಡ್ ಟೆಸ್ಟ್’ (ಭಾರ ಪರೀಕ್ಷೆ) ಮತ್ತು ಸುರಕ್ಷತಾ ಪರಿಶೀಲನೆ ನಡೆಸುತ್ತಿರುವ ಹಿನ್ನೆಲೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಹಾಗೂ ಬೆಂಗಳೂರು ಟ್ರಾಫಿಕ್ ಪೊಲೀಸರು ಈ ನಿರ್ಧಾರ ಕೈಗೊಂಡಿದ್ದಾರೆ.
ಮೇ 5ರ ಬೆಳಗ್ಗೆ 5 ಗಂಟೆಯಿಂದ ಮೇ 8ರ ಬೆಳಗ್ಗೆ 11 ಗಂಟೆಯವರೆಗೆ ಮೇಲ್ಸೇತುವೆಯಲ್ಲಿ ಯಾವುದೇ ವಾಹನಗಳಿಗೆ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಈ ಅವಧಿಯಲ್ಲಿ ಫ್ಲೈಓವರ್ ಸಂಪೂರ್ಣ ಬಂದ್ ಆಗಲಿದ್ದು, ಪ್ರಯಾಣಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಪೀಣ್ಯ ಎಲಿವೇಟೆಡ್ ಫ್ಲೈಓವರ್ನ ಕೆನ್ನಮೆಟಲ್ ವಿಡಿಯಾ ಅಪ್ ರ್ಯಾಂಪ್ನಿಂದ ಎಸ್ಆರ್ಎಸ್ ಡೌನ್ ರ್ಯಾಂಪ್ವರೆಗೆ ಎರಡೂ ದಿಕ್ಕುಗಳಲ್ಲಿ ಸಂಚಾರ ನಿರ್ಬಂಧ ಜಾರಿಯಲ್ಲಿರುತ್ತದೆ. ಇದರಿಂದಾಗಿ ತುಮಕೂರು ರಸ್ತೆಯ ಈ ಭಾಗದಲ್ಲಿ ಸಂಚರಿಸುವ ವಾಹನ ಸವಾರರು ಮುಂಚಿತವಾಗಿ ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳುವುದು ಅಗತ್ಯವಾಗಿದೆ.
ನೆಲಮಂಗಲದಿಂದ ಬೆಂಗಳೂರು ಕಡೆಗೆ ಬರುವ ವಾಹನಗಳು ಕೆನ್ನಮೆಟಲ್ ವಿಡಿಯಾ ಸಮೀಪದಿಂದ ಮೇಲ್ಸೇತುವೆಯ ಕೆಳಭಾಗದಲ್ಲಿರುವ ರಾಷ್ಟ್ರೀಯ ಹೆದ್ದಾರಿ-4 ಹಾಗೂ ಅದಕ್ಕೆ ಹೊಂದಿಕೊಂಡಿರುವ ಸರ್ವಿಸ್ ರಸ್ತೆಯನ್ನು ಬಳಸಬೇಕು. ಈ ಮಾರ್ಗವು ಎಂಟನೇ ಮೈಲಿ, ಟಿ.ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಎಸ್ಆರ್ಎಸ್ ಜಂಕ್ಷನ್ ಹಾಗೂ ಗೊರಗುಂಟೆಪಾಳ್ಯ ಮೂಲಕ ಮುಂದುವರಿಯುತ್ತದೆ.
ಅದೇ ರೀತಿ, ಸಿಎಂಟಿಐ ಭಾಗದಿಂದ ನೆಲಮಂಗಲದ ಕಡೆಗೆ ಸಾಗುವ ವಾಹನಗಳು ಮೇಲ್ಸೇತುವೆಯ ಕೆಳಭಾಗದ ರಾಷ್ಟ್ರೀಯ ಹೆದ್ದಾರಿ-4 ಹಾಗೂ ಸರ್ವಿಸ್ ರಸ್ತೆಯ ಮೂಲಕ ಎಸ್ಆರ್ಎಸ್ ಜಂಕ್ಷನ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ, ಎಂಟನೇ ಮೈಲಿ ಮತ್ತು ಪಾರ್ಲೆಜಿ ಟೋಲ್ ಮಾರ್ಗವನ್ನು ಬಳಸಬೇಕಾಗಿದೆ.
ಸಂಚಾರ ದಟ್ಟಣೆ ತಪ್ಪಿಸಲು ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಹೀಗಾಗಿ, ವಾಹನ ಸವಾರರು ನೀಡಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವ ಮೂಲಕ ಸಹಕಾರ ನೀಡುವಂತೆ ಮನವಿ ಮಾಡಲಾಗಿದೆ.