'ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಮದ ಅಭಿವೃದ್ಧಿಗೆ ಆದ್ಯತೆ'

By Web DeskFirst Published Sep 28, 2019, 11:31 AM IST
Highlights

ಜಿಲ್ಲೆಯ ಪ್ರವಾಸೋದ್ಯಮದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದ ಸಂಸದ ಬಿ. ವೈ. ರಾಘವೇಂದ್ರ| ರಾಜ್ಯ ಸರ್ಕಾರ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ| ಇನ್‌ಫೊಸಿಸ್‌ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ ಸೇರಿದಂತೆ ಪ್ರವಾಸೋದ್ಯಮದ ಬಗ್ಗೆ ಮಾಹಿತಿ ಇರುವ ತಜ್ಞರ ನೇತೃತ್ವದಲ್ಲಿ ಪ್ರಾಧಿಕಾರ ರಚನೆ| ನಾಡಿನ ಅನೇಕ ಪ್ರಸಿದ್ಧ ಸ್ಥಳ, ಪ್ರವಾಸಿ ತಾಣ, ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಬಿಂಬಿಸುವ ತಾಣಗಳನ್ನು ಅಭಿವೃದ್ಧಿಗೊಳಿಸಲು ಯೋಜನೆ ಸಿದ್ಧ| 

ಶಿವಮೊಗ್ಗ:(ಸೆ.28) ಜಿಲ್ಲೆಯ ಪ್ರವಾಸೋದ್ಯಮದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದರು.

ನಗರದ ಕಮಲಾ ನೆಹರೂ ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ಶುಕ್ರವಾರ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ರಾಷ್ಟ್ರೀಯ ಶಿಕ್ಷಣ ಸಮಿತಿ ಕಮಲಾ ನೆಹರೂ ಕಾಲೇಜು ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸರ್ಕಾರ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಇದಕ್ಕಾಗಿಯೇ ಇನ್‌ಫೊಸಿಸ್‌ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ ಸೇರಿದಂತೆ ಪ್ರವಾಸೋದ್ಯಮದ ಬಗ್ಗೆ ಮಾಹಿತಿ ಇರುವ ತಜ್ಞರ ನೇತೃತ್ವದಲ್ಲಿ ಪ್ರಾಧಿಕಾರ ರಚನೆ ಮಾಡಲಾಗಿದೆ. ನಾಡಿನ ಅನೇಕ ಪ್ರಸಿದ್ಧ ಸ್ಥಳ, ಪ್ರವಾಸಿ ತಾಣ, ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಬಿಂಬಿಸುವ ತಾಣಗಳನ್ನು ಅಭಿವೃದ್ಧಿಗೊಳಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ  

ವಿದೇಶದಲ್ಲಿ ಪ್ರವಾಸೋದ್ಯಮಕ್ಕೆ ಮೊದಲ ಆದ್ಯತೆ ನೀಡುತ್ತಾರೆ. ಅದೇ ರೀತಿ ಭಾರತದಲ್ಲೂ ಪ್ರವಾಸಿ ತಾಣಗಳನ್ನು ಗುರುತಿಸಿ ಅವುಗಳನ್ನು ಅಭಿವೃದ್ಧಿ ಪಡಿಸುವುದರ ಜತೆಗೆ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಹೇಳಿದ್ದಾರೆ. 

ಪ್ರಸ್ತುತ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಸೇರಿ ಪ್ರವಾಸೋದ್ಯಮದ ಹಬ್‌ ನಿರ್ಮಾಣಕ್ಕೆ 60 ಕೋಟಿ ರು. ಪ್ರಸ್ತಾವನೆ ಕೇಂದ್ರಕ್ಕೆ ಸಲ್ಲಿಸಲಾಗಿದೆ. ಪ್ರಸಿದ್ಧ ಜೋಗ ಜಲಪಾತ ಸುತ್ತಮುತ್ತಲೂ ಅಭಿವೃದ್ಧಿಗೆ ಅನೇಕ ಅವಕಾಶಗಳಿದ್ದು ಅಲ್ಲಿ ಎಕ್ಸಿಲೇಟರ್‌, ರೋಪ್‌ವೇ, ಮ್ಯೂಸಿಕ್‌ ಫೌಂಟೆನ್‌ ಮೂಲಕ ಹೊಸ ರೂಪ ನೀಡಲಾಗುವುದು ಎಂದರು.

ಶೀಘ್ರ​ದಲ್ಲಿ ವಿಮಾನ ನಿಲ್ದಾಣ ಕಾಮ​ಗಾ​ರಿ ಪ್ರಾರಂಭ

ವಿಮಾನ ನಿಲ್ದಾಣ ಕಾಮಗಾರಿ ಶಿಘ್ರದಲ್ಲೇ ಪ್ರಾರಂಭವಾಗಲಿದೆ. ಉಡಾನ್‌ ಯೋಜನೆಯಡಿ ಜನಸಾಮಾನ್ಯರಿಗೂ ವಿಮಾನಯಾನ ಸೌಲಭ್ಯ ಸಿಗಲಿದೆ. ಕೋಟೆ ಗಂಗೂರು ಬಳಿ ರೈಲ್ವೇ ಟರ್ಮಿನಲ್‌ ಸ್ಥಾಪನೆ, ಶಿವಮೊಗ್ಗ- ರಾಣೇಬೆನ್ನೂರು ರೈಲು ಮಾರ್ಗ, 5 ಸಾವಿರ ಕೋಟಿ ರು. ವೆಚ್ಚದಲ್ಲಿ ಶಿವಮೊಗ್ಗ- ತುಮಕೂರು ಚತುಷ್ಪದ ರಸ್ತೆ, 450 ಕೋಟಿ ರು. ವೆಚ್ಚದಲ್ಲಿ ಸಿಂಗದೂರು ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ತುಮರಿ ಸೇತುವೆಗೆ ಈಗಾಗಲೇ ಟೆಂಡರ್‌ ಪ್ರಕ್ರಿಯೆ ಪ್ರಾರಂಭವಾಗಿದೆ. ಹೀಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರವಾಸೋದ್ಯಮಕ್ಕೆ ಮುಂದಿನ ದಿನಗಳಲ್ಲಿ ಅತಿ ಹೆಚ್ಚಿನ ಬಂಡವಾಳ ಹೂಡಲಿದ್ದು ಜಿಲ್ಲೆಯ ಪ್ರವಾಸೋದ್ಯಮಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿ​ದ​ರು.
 

click me!