
ರಾಮನಗರ (ಫೆ.10) : ಭಕ್ತರ ನಂಬಿಕೆಯ ಕೇಂದ್ರ, ಐತಿಹಾಸಿಕ ಪ್ರಸಿದ್ಧ ಸಾವನದುರ್ಗದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಹುಂಡಿ ಹಣದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ದೇವರಿಗೆ ಭಕ್ತರು ಅರ್ಪಿಸಿದ ಕಾಣಿಕೆಯ ಮೇಲೆ ಸ್ವತಃ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯೇ ಕಣ್ಣು ಹಾಕಿದ್ದು, ಲಕ್ಷಾಂತರ ರೂಪಾಯಿ ಹಣ ದುರ್ಬಳಕೆಯಾಗಿದೆ ಎಂದು ದೂರಲಾಗಿದೆ.
ಸಾವನದುರ್ಗ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ (EO) ಜಗದೀಶ್ ಅವರ ವಿರುದ್ಧ ಈ ಗಂಭೀರ ಆರೋಪ ಕೇಳಿಬಂದಿದೆ. ಸುಮಾರು 10 ಲಕ್ಷ ರೂಪಾಯಿಗೂ ಅಧಿಕ ನಗದು, ವಿದೇಶಿ ಕರೆನ್ಸಿ ಹಾಗೂ ಭಕ್ತರು ಅರ್ಪಿಸಿದ್ದ ಚಿನ್ನಾಭರಣಗಳು ಕಾಣೆಯಾಗಿವೆ ಎಂಬ ಅನುಮಾನ ವ್ಯಕ್ತವಾಗಿದೆ. ಸಾವನದುರ್ಗ ಗ್ರಾಮ ಪಂಚಾಯತ್ ಸದಸ್ಯ ನರಸಿಂಹಯ್ಯ ಅವರು ಈ ಕುರಿತು ಅಧಿಕೃತವಾಗಿ ದೂರು ದಾಖಲಿಸಿದ್ದು, ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದಿರುವ ಅಧಿಕಾರಿಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಸಾಮಾನ್ಯವಾಗಿ ಈ ದೇವಾಲಯದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಆಡಳಿತ ಮಂಡಳಿಯಿಂದ ಹುಂಡಿ ಎಣಿಕೆ ಕಾರ್ಯ ನಡೆಯುತ್ತದೆ. ಈ ಹಿಂದೆ ಪ್ರತಿ ಎಣಿಕೆಯ ವೇಳೆ ಸುಮಾರು 25 ರಿಂದ 30 ಲಕ್ಷ ರೂಪಾಯಿ ಸಂಗ್ರಹವಾಗುತ್ತಿತ್ತು. ಆದರೆ, ಇತ್ತೀಚಿನ ಎಣಿಕೆಯ ವೇಳೆ ಕೇವಲ 12 ಲಕ್ಷ ರೂಪಾಯಿ ಮಾತ್ರ ಸಂಗ್ರಹವಾಗಿದೆ ಎಂದು ತೋರಿಸಲಾಗಿದೆ. ಇಷ್ಟು ದೊಡ್ಡ ಪ್ರಮಾಣದ ವ್ಯತ್ಯಾಸ ಕಂಡುಬಂದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಹುಂಡಿ ಎಣಿಕೆ ಮಾಡುವಾಗ ಪಾಲಿಸಬೇಕಾದ ಯಾವುದೇ ನಿಯಮಗಳನ್ನು ಇಲ್ಲಿ ಅನುಸರಿಸಲಾಗಿಲ್ಲ ಎಂಬುದು ದೂರುದಾರರ ಆರೋಪ. 'ಹುಂಡಿ ಎಣಿಕೆಯ ಬಗ್ಗೆ ತಹಶೀಲ್ದಾರರಿಗೆ ಯಾವುದೇ ಮುನ್ಸೂಚನೆ ನೀಡಿಲ್ಲ. ಅಷ್ಟೇ ಅಲ್ಲದೆ, ಹಣ ಎಣಿಕೆ ಮಾಡುವ ಸಂದರ್ಭದ ಸಿಸಿಟಿವಿ ದೃಶ್ಯಾವಳಿಗಳನ್ನು ಉದ್ದೇಶಪೂರ್ವಕವಾಗಿ ಡಿಲೀಟ್ ಮಾಡಲಾಗಿದೆ. ಇದು ಭ್ರಷ್ಟಾಚಾರ ನಡೆದಿರುವುದಕ್ಕೆ ನೇರ ಸಾಕ್ಷಿಯಾಗಿದೆ' ಎಂದು ನರಸಿಂಹಯ್ಯ ಕಿಡಿಕಾರಿದ್ದಾರೆ.
ಅವ್ಯವಹಾರದ ವಾಸನೆ ಬಡಿಯುತ್ತಿದ್ದಂತೆಯೇ ಅಧಿಕಾರಿ ಜಗದೀಶ್ ಅವರನ್ನು ಅಲ್ಲಿಂದ ವರ್ಗಾವಣೆ ಮಾಡಲಾಗಿದೆ. ಆದರೆ, ಭಕ್ತರ ಹಣವನ್ನು ಲೂಟಿ ಮಾಡಿದ ಅಧಿಕಾರಿಯನ್ನು ಕೇವಲ ವರ್ಗಾವಣೆ ಮಾಡಿದರೆ ಸಾಲದು, ಅವರನ್ನು ತಕ್ಷಣವೇ ಬಂಧಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಭಕ್ತರು ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸರ್ಕಾರ ಮತ್ತು ಮುಜರಾಯಿ ಇಲಾಖೆ ಈ ಕೂಡಲೇ ಮಧ್ಯಪ್ರವೇಶಿಸಿ ದೇವಸ್ಥಾನದ ಹಣವನ್ನು ಮರಳಿ ಪಡೆಯಬೇಕು ಎಂಬ ಒತ್ತಾಯ ಕೇಳಿಬಂದಿದೆ.