ಅಂಕೋಲಾ ಬಳಿ ಗೋವಾಕ್ಕೆ ತೆರಳುತ್ತಿದ್ದ ಸೀಬರ್ಡ್ ಬಸ್ ಪಲ್ಟಿ, ಆಂಧ್ರ ಮೂಲದ ಪ್ರಯಾಣಿಕ ಸಾವು

Published : May 30, 2026, 12:33 PM IST
seabird bus accident

ಸಾರಾಂಶ

ಬಳ್ಳಾರಿಯಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್ ಅಂಕೋಲಾ ತಾಲೂಕಿನ ಕಂಚಿನಬಾಗಿಲು ಬಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಪಲ್ಟಿಯಾಗಿದೆ. ಈ ಭೀಕರ ಅಪಘಾತದಲ್ಲಿ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರವಾರ/ಅಂಕೋಲಾ (ಮೇ.30): ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಬಾಗಿಲು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ಹೆದ್ದಾರಿಯಲ್ಲೇ ಪಲ್ಟಿಯಾಗಿದ್ದು, ಪರಿಣಾಮವಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿ, 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಳ್ಳಾರಿಯಿಂದ ಪ್ರವಾಸಿಗರನ್ನು ಹೊತ್ತು ಗೋವಾಕ್ಕೆ ತೆರಳುತ್ತಿದ್ದ ‘ಸೀಬರ್ಡ್’ (Sea Bird) ಸಂಸ್ಥೆಗೆ ಸೇರಿದ ಬಸ್, ರಾಷ್ಟ್ರೀಯ ಹೆದ್ದಾರಿ 52 ರ ಅಂಕೋಲಾ - ಯಲ್ಲಾಪುರ ರಸ್ತೆಯ ಕಂಚಿನಬಾಗಿಲು ತಲುಪುತ್ತಿದ್ದಂತೆ ಈ ದುರಂತ ಸಂಭವಿಸಿದೆ. ಅತಿವೇಗ ಹಾಗೂ ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ನೇರ ಕಾರಣ ಎನ್ನಲಾಗುತ್ತಿದ್ದು, ಬಸ್ಸು ಹೆದ್ದಾರಿಗೆ ಸಂಪೂರ್ಣವಾಗಿ ಅಡ್ಡಲಾಗಿ ಪಲ್ಟಿಯಾಗಿದೆ. ದುರಂತದ ಸಮಯದಲ್ಲಿ ಬಸ್‌ನಲ್ಲಿ ಒಟ್ಟು 36 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.

ಬಸ್ ಪಲ್ಟಿಯಾದ ಭೀಕರತೆಗೆ ಆಂಧ್ರಪ್ರದೇಶ ಮೂಲದ ಶರಣಯ್ಯ (42) ಎಂಬ ಪ್ರಯಾಣಿಕರು ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬಸ್‌ನಲ್ಲಿದ್ದ ಉಳಿದ 36 ಪ್ರಯಾಣಿಕರ ಪೈಕಿ 20 ಜನರಿಗೆ ತೀವ್ರ ಸ್ವರೂಪದ ಗಂಭೀರ ಗಾಯಗಳಾಗಿದ್ದು, ಇನ್ನುಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಪೊಲೀಸರು ಧಾವಿಸಿ ಗಾಯಾಳುಗಳನ್ನು ರಕ್ಷಿಸಿದ್ದಾರೆ. ತಕ್ಷಣವೇ ಎಲ್ಲ ಗಾಯಾಳುಗಳನ್ನು ಅಂಕೋಲಾ ತಾಲೂಕು ಆಸ್ಪತ್ರೆ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರದ ಜಿಲ್ಲಾ ವಿಜ್ಞಾನ ಸಂಸ್ಥೆ (KRIMS - ಕ್ರಿಮ್ಸ್) ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕಲ್ಪಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಸ್ತಬ್ಧಗೊಂಡ ಸಂಚಾರ!

ಭಾರೀ ಗಾತ್ರದ ಸೀಬರ್ಡ್ ಬಸ್ ರಾಷ್ಟ್ರೀಯ ಹೆದ್ದಾರಿ 52 ರ ಮಧ್ಯದಲ್ಲೇ ಅಡ್ಡವಾಗಿ ಬಿದ್ದಿದ್ದರಿಂದ ಅಂಕೋಲಾ-ಯಲ್ಲಾಪುರ ರಸ್ತೆಯ ಸಂಪೂರ್ಣ ವಾಹನ ಸಂಚಾರ ಗಂಟೆಗಟ್ಟಲೆ ಸ್ಥಗಿತಗೊಂಡಿತ್ತು. ಹೆದ್ದಾರಿಯ ಎರಡೂ ಬದಿಗಳಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಭೀಕರ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಅಂಕೋಲಾ ಪೊಲೀಸರು ಕ್ರೇನ್ ಬಳಸಿ ಬಸ್ಸನ್ನು ರಸ್ತೆಯಿಂದ ಪಕ್ಕಕ್ಕೆ ಸರಿಸಿ, ಟ್ರಾಫಿಕ್ ಸುಗಮಗೊಳಿಸಲು ಹರಸಾಹಸ ಪಟ್ಟರು. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

 

PREV
Read more Articles on
click me!

Recommended Stories

Priyank kharge: ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಹರಿಕಾರ ಪ್ರಿಯಾಂಕ್‌ಗೆ ಡಿಸಿಎಂ ಸ್ಥಾನಕ್ಕೆ ಶಾಸಕರ ಒತ್ತಾಯ
ಬೆಂಗಳೂರು ಪ್ರಯಾಣಿಕರ ಗಮನಕ್ಕೆ ಮೇ 31ರಂದು ನಮ್ಮ ಮೆಟ್ರೋ ನೇರಳೆ ಮಾರ್ಗ ಕೆಲ ಗಂಟೆಗಳ ಸೇವೆ ಸ್ಥಗಿತ