
ಜು.10ರಿಂದ 3 ದಿನ ಆರ್ಎಸ್ಎಸ್ ಬೈಠಕ್ನಲ್ಲಿ ಭಾಗಿ
ಬೆಳಗಾವಿ (ಜು.7): ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಸರಸಂಘಚಾಲಕ ಮೋಹನ್ ಭಾಗವತ್(Mohan Bhagwat) ಅವರು ಸೋಮವಾರ ಬೆಳಗಾವಿಗೆ ಆಗಮಿಸಿದ್ದು, ಮುಂದಿನ ಒಂಬತ್ತು ದಿನಗಳ ಕಾಲ ಅವರು ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಹೈದರಾಬಾದ್ನಿಂದ ವಿಮಾನದ ಮೂಲಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾಗವತ್ ಅವರನ್ನು ಆರ್ಎಸ್ಎಸ್ನ ಹಿರಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಆತ್ಮೀಯವಾಗಿ ಸ್ವಾಗತಿಸಿದರು.
ಜು.10ರಿಂದ 12ರವರೆಗೆ ಬೆಳಗಾವಿಯಲ್ಲಿ ನಡೆಯಲಿರುವ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆಯಲ್ಲಿ ಭಾಗವಹಿಸುವ ಉದ್ದೇಶದಿಂದ ಅವರು ನಗರಕ್ಕೆ ಆಗಮಿಸಿದ್ದಾರೆ. ಆರ್ಎಸ್ಎಸ್ನ ಶತಮಾನೋತ್ಸವ ಹಿನ್ನೆಲೆಯಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ದೇಶದ 11 ಕ್ಷೇತ್ರಗಳು ಮತ್ತು 46 ಪ್ರಾಂತಗಳ ಪ್ರಚಾರಕರು, ಸಹ ಪ್ರಾಂತ ಪ್ರಚಾರಕರು, ಕ್ಷೇತ್ರ ಪ್ರಚಾರಕರು, ಸಹ ಕ್ಷೇತ್ರ ಪ್ರಚಾರಕರು ಹಾಗೂ ಸಂಘಪ್ರೇರಿತ ವಿವಿಧ ಸಂಘಟನೆಗಳ ಪ್ರಮುಖರು ಸೇರಿದಂತೆ ನೂರಾರು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುವ ಸ್ಥಳಗಳು ಹಾಗೂ ಅವರ ವಾಸ್ತವ್ಯದ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆ ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದೆ.
ಸಭೆಯ ವಿವಿಧ ಅಧಿವೇಶನಗಳು ಅನಗೋಳದ ಸಂತ ಮೀರಾ ಶಾಲೆ, ಉದ್ಯಮಬಾಗ್ ಕೈಗಾರಿಕಾ ಪ್ರದೇಶದಲ್ಲಿರುವ ಫೌಂಡ್ರಿ ಕ್ಲಸ್ಟರ್ ಅತಿಥಿಗೃಹ ಹಾಗೂ ಗೂಡ್ಸ್ಶೆಡ್ ರಸ್ತೆಯ ಜಗನ್ನಾಥರಾವ್ ಜೋಶಿ ಸ್ಮಾರಕ ಭವನದಲ್ಲಿ ನಡೆಯಲಿವೆ. ಭಾಗವತ್ ಅವರ ಒಂಬತ್ತು ದಿನಗಳ ವಾಸ್ತವ್ಯದ ಅವಧಿಯಲ್ಲಿ ವಿವಿಧ ಹಂತದ ಸಂಘಟನಾ ಸಭೆಗಳು, ಪ್ರಮುಖರೊಂದಿಗೆ ಸಮಾಲೋಚನೆ, ಆಂತರಿಕ ಸಭೆಗಳು ಹಾಗೂ ಮಾರ್ಗದರ್ಶನ ಕಾರ್ಯಕ್ರಮಗಳು ನಡೆಯಲಿವೆ.