
ಶಿವಮೊಗ್ಗ (ಮಾ.29): ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷೆ, ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ಅವರ ಆರೋಗ್ಯ ಶೀಘ್ರ ಚೇತರಿಕೆ ಕಾಣಲಿ ಎಂದು ಪ್ರಾರ್ಥಿಸಿ ಶಿವಮೊಗ್ಗ ನಗರ ಯುವ ಕಾಂಗ್ರೆಸ್ ವತಿಯಿಂದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶನಿವಾರ ವಿಶೇಷ ಪೂಜೆ ಸಲ್ಲಿಸಲಾಯಿತು.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ನಿಧನದ ನಂತರ ಸೋನಿಯಾ ಗಾಂಧಿ ಅವರು ದೇಶದಲ್ಲಿ ಕಾಂಗ್ರೆಸ್ ನೇತೃತ್ವವಹಿಸಿ ಪಕ್ಷ ಸಂಘಟನೆ ಮಾಡಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಮನಮೋಹನ್ ಸಿಂಗ್ ಅವರು 10 ವರ್ಷ ಪ್ರಧಾನಿಯಾಗಿ ಯಶಸ್ವಿಯಾಗಿ ಸರ್ಕಾರ ನಡೆಸಿದರು. ಅಂತಹ ನಾಯಕಿ ಸೋನಿಯಾ ಅವರು ಬೇಗನೆ ಗುಣಮುಖರಾಗಬೇಕು ಎಂದು ಕಾಂಗ್ರೆಸ್ ಮುಖಂಡರು ದೇವರಲ್ಲಿ ಪ್ರಾರ್ಥಿಸಿದರು.
ಅನಾರೋಗ್ಯದಿಂದ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡು ಬಂದಿದೆ. ಹೀಗಾಗಿ ಅವರು 1-2 ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎಂದು ವೈದ್ಯರು ಹೇಳಿದ್ದಾರೆ,
ಆಸ್ಪತ್ರೆಯ ಮುಖ್ಯಸ್ಥ ಅಜಯ್ ಸ್ವರೂಪ್ ಮಾತನಾಡಿ, ‘ಸೋನಿಯಾ ಅವರು ನಡೆದಾಡುತ್ತಿದ್ದಾರೆ. ತಿಂಡಿ ಸೇವಿಸುತ್ತಿದ್ದಾರೆ. ನಿಧಾನಕ್ಕೆ ಅವರು ಗುಣಮುಖರಾಗುತ್ತಿದ್ದು 1-2 ದಿನಗಳಲ್ಲಿ ಆಸ್ಪತ್ರೆಯಿಂದ ಮನೆಗೆ ಮರಳಬಹುದು’ ಎಂದಿದ್ದಾರೆ.
ಜ್ವರ, ಮೂತ್ರನಾಳದ ಸೋಂಕಿನ ಕಾರಣ ಸೋನಿಯಾ ಗಾಂಧಿ ಮಾ.24ರಂದು ಆಸ್ಪತ್ರೆಗೆ ದಾಖಲಾಗಿದ್ದರು.