ಲವ್‌ ಜಿಹಾದ್‌ ವಿರುದ್ಧ ಕಾಯ್ದೆ: ಬಿಎಸ್‌ವೈ ವಿರುದ್ಧ ಸಿದ್ದ​ರಾ​ಮಯ್ಯ ಕಿಡಿ

By Kannadaprabha NewsFirst Published Nov 7, 2020, 3:02 PM IST
Highlights

ಮುಖ್ಯಮಂತ್ರಿಗಳು ಮತ್ತು ಕೆಲವು ಸಚಿವರು ಉತ್ತರಪ್ರದೇಶದ ಮುಖ್ಯಮಂತ್ರಿಯವರಿಂದ ಪ್ರೇರಿತವಾಗಿರುವುದು ದುರದೃಷ್ಟಕರ| ಪ್ರಗತಿಪರ ಚಿಂತಕರ ಪರಂಪರೆಯ ಕರ್ನಾಟಕಕ್ಕೆ ಗೂಂಡಾರಾಜ್ಯ ಎಂಬ ಕುಖ್ಯಾತಿಯ ಉತ್ತರಪ್ರದೇಶ ಮಾದರಿ ಅಲ್ಲ. ಅಲ್ಲಿನ ಮುಖ್ಯಮಂತ್ರಿ ಪ್ರೇರಣೆಯೂ ಆಗಬಾರದು ಎಂದ ಸಿದ್ದರಾಮಯ್ಯ| 

ಬೆಂಗಳೂರು(ನ.07):  ‘ಲವ್‌ ಜಿಹಾದ್‌’ ತಡೆಗೆ ಕಾನೂನು ರೂಪಿಸುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಘೋಷಣೆ ತಮ್ಮ ಆಡಳಿತದ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಹತಾಶ ಪ್ರಯತ್ನವಲ್ಲದೇ ಇನ್ನೇನೂ ಅಲ್ಲ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ‘ಲವ್‌ ಜಿಹಾದ್‌’ ಎಂದರೆ ಏನು ಎನ್ನುವುದೇ ಸ್ಪಷ್ಟತೆ ಇಲ್ಲ. ಯಾವ ಕಾನೂನು ಕೂಡ ಲವ್‌ ಜಿಹಾದ್‌ ಅನ್ನು ವ್ಯಾಖ್ಯಾನಿಸಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯವೇ ಸ್ಪಷ್ಟಪಡಿಸಿರುವಾಗ ಮುಖ್ಯಮಂತ್ರಿಗಳು ಯಾವ ಆಧಾರದಲ್ಲಿ ಕಾನೂನು ರೂಪಿಸಲು ಹೊರಟಿದ್ದಾರೆ? ಇದರಲ್ಲಿ ಕೋಮುದ್ವೇಷವನ್ನು ಹುಟ್ಟು ಹಾಕಿ ರಾಜಕೀಯದ ಬೇಳೆ ಬೇಯಿಸಿಕೊಳ್ಳುವ ದುರುದ್ದೇಶ ಬಿಟ್ಟು ಯಾವುದೇ ಸದುದ್ದೇಶ ಇಲ್ಲ ಎಂದಿದ್ದಾರೆ.

ಕರ್ನಾಟಕದಲ್ಲಿ ಲವ್‌ ಜಿಹಾದ್‌ ನಿಷೇಧ ಕಾಯ್ದೆಗೆ ಹೆಚ್ಚಿದ ಒತ್ತಡ!

ಅಲಹಾಬಾದ್‌ ಹೈಕೋರ್ಟ್‌ ತೀರ್ಪನ್ನು ತಮ್ಮ ರಾಜಕೀಯ ಅನುಕೂಲತೆಗೆ ತಕ್ಕಂತೆ ತಪ್ಪಾಗಿ ವಿಶ್ಲೇಷಿಸುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಮತಾಂತರ ಎನ್ನುವುದು ಅಂತರಧರ್ಮೀಯ ಮದುವೆಗೆ ಅಸ್ತ್ರವಾಗಬಾರದು ಎಂದು ತೀರ್ಪು ಹೇಳಿದೆಯೇ ಹೊರತು ಅಂತರಧರ್ಮೀಯ ಮದುವೆಯೇ ಅಕ್ರಮ ಎಂದು ಹೇಳಿಲ್ಲ.

ಮುಖ್ಯಮಂತ್ರಿಗಳು ಮತ್ತು ಕೆಲವು ಸಚಿವರು ಉತ್ತರಪ್ರದೇಶದ ಮುಖ್ಯಮಂತ್ರಿಯವರಿಂದ ಪ್ರೇರಿತವಾಗಿರುವುದು ದುರದೃಷ್ಟಕರ. ಪ್ರಗತಿಪರ ಚಿಂತಕರ ಪರಂಪರೆಯ ಕರ್ನಾಟಕಕ್ಕೆ ಗೂಂಡಾರಾಜ್ಯ ಎಂಬ ಕುಖ್ಯಾತಿಯ ಉತ್ತರಪ್ರದೇಶ ಮಾದರಿ ಅಲ್ಲ. ಅಲ್ಲಿನ ಮುಖ್ಯಮಂತ್ರಿ ಪ್ರೇರಣೆಯೂ ಆಗಬಾರದು ಎಂದಿದ್ದಾರೆ.
 

click me!