Chikkaballapur : ಐದೂ ಕ್ಷೇತ್ರಕ್ಕೂ ಪ್ರಬಲ ಅಭ್ಯರ್ಥಿಗಳು ಕಣಕ್ಕೆ ಇಳಿಸ್ತೀವಿ

By Kannadaprabha NewsFirst Published Dec 31, 2022, 6:36 AM IST
Highlights

ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಮುಂಬರುವ 2023 ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷದಿಂದ ಗೆಲ್ಲುವಂತಹ ಪ್ರಬಲ ಅಭ್ಯರ್ಥಿಗಳನ್ನೆ ಕಣಕ್ಕೆ ಇಳಿಸಲಾಗುವುದೆಂದು ಜಿಲ್ಲಾ ಕಾಂಗ್ರೆಸ್‌ ಉಸ್ತುವಾರಿ ವಿ.ಎಸ್‌.ಉಗ್ರಪ್ಪ ಹೇಳಿದರು.

 ಚಿಕ್ಕಬಳ್ಳಾಪುರ :  ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಮುಂಬರುವ 2023 ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷದಿಂದ ಗೆಲ್ಲುವಂತಹ ಪ್ರಬಲ ಅಭ್ಯರ್ಥಿಗಳನ್ನೆ ಕಣಕ್ಕೆ ಇಳಿಸಲಾಗುವುದೆಂದು ಜಿಲ್ಲಾ ಕಾಂಗ್ರೆಸ್‌ ಉಸ್ತುವಾರಿ ವಿ.ಎಸ್‌.ಉಗ್ರಪ್ಪ ಹೇಳಿದರು.

ನಗರದ ಹೊರ ವಲಯದ ನಂದಿ ಕ್ರಾಸ್‌ ಬಳಿ ಇರುವ ಶ್ರೀ ಕೃಷ್ಣ ಕನ್ವೆಕ್ಷನ್‌ ಹಾಲ್‌ನಲ್ಲಿ ಶುಕ್ರವಾರ ಕ್ಷೇತ್ರವಾರು ಅಭ್ಯರ್ಥಿಗಳ ಆಯ್ಕೆಗೆ ನಡೆದ ಜಿಲ್ಲಾ ಚುನಾವಣಾ ಸಮಿತಿ ಸಭೆಗೂ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಪಕ್ಷದ ನಿಷ್ಠೆ, ಸಾಮಾಜಿಕ ನ್ಯಾಯದಡಿ ಈ ಬಾರಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು. ಗೆದ್ದು ಬಳಿಕ ಅನ್ಯ ಪಕ್ಷಗಳಿಗೆ ಹೋಗುವ ರೀತಿ ಆಗದಂತೆ ಪಕ್ಷ ನಿಷ್ಠೆ ಇರುವರಿಗೆ ಈ ಬಾರಿ ಚುನಾವಣೆಯಲ್ಲಿ ಆಧ್ಯತೆ ನೀಡಲಾಗುತ್ತಿದೆಯೆಂದ ವಿ.ಎಸ್‌..ಉಗ್ರಪ್ಪ, ಪಕ್ಷದ ತತ್ವ, ಸಿದ್ದಾಂತಗಳನ್ನು ಅಳವಡಿಸಿಕೊಂಡಿರುವ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಸ್ಪರ್ದಿಸಲು ಅವಕಾಶ ನೀಡಲಿದ್ದು ಕ್ಷೇತ್ರದ ಹಾಗೂ ಜಿಲ್ಲೆಯ ಜನತೆ ಪಕ್ಷದ ಅಭ್ಯರ್ಥಿಗಳಿಗೆ ಅರ್ಶೀವಾದ ನೀಡಬೇಕೆಂದರು. ರಾಜ್ಯದ 224 ಕ್ಷೇತ್ರಗಳಲ್ಲಿ ಕೂಡ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು. ಯಾವುದೇ ಪಕ್ಷದೊಂದಿಗೆ ಚುನಾವಣಾ ಪೂರ್ವ ಮೈತ್ರಿ ಇಲ್ಲ ಎಂದು ಸ್ಪಷ್ಟಪಡಿಸಿದರ ಅವರು, ರಾಜ್ಯದಲ್ಲಿ ಕನಿಷ್ಠ 150 ಸೀಟು ಗೆಲ್ಲುವ ಗುರಿಯನ್ನು ಪಕ್ಷ ಹೊಂದಿದೆ. ಈ ಬಾರಿ 130 ಸೀಟುಗೂ ಮೇಲೆ ಪಕ್ಷ ಗೆಲ್ಲುವ ವಿಶ್ವಾಸ ಇದೆ ಎಂದರು.

ಚುನಾವಣಾ ಸಮಿತಿ ಸಭೆ: ಮುಂಬರುವ 2023 ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರವಾರು ಅಭ್ಯರ್ಥಿಗಳ ಆಯ್ಕೆ ಸಂಬಂದ ಶುಕ್ರವಾರ ನಗರದ ಹೊರ ವಲಯದ ನಂದಿ ಕ್ರಾಸ್‌ ಬಳಿ ಇರುವ ಕೃಷ್ಣ ಕನ್ವೆಕ್ಷನ್‌ ಹಾಲ್‌ನಲ್ಲಿ ಜಿಲ್ಲಾ ಚುನಾವಣಾ ಸಮಿತಿ ವೀಕ್ಷಕರ ಸಭೆ ನಡೆಯಿತು.

ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಮಾಜಿ ಸಂಸದ ಕೆ.ಎಚ್‌.ಮುನಿಯಪ್ಪ, ಜಿಲ್ಲಾ ಉಸ್ತುವಾರಿಗಳಾದ ವಿ.ಎಸ್‌.ಉಗ್ರಪ್ಪ, ಮಾಜಿ ಸಚಿವ ಗೌರಿಬಿದನೂರಿನ ಶಿವಶಂಕರರೆಡ್ಡಿ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೇಶವರೆಡ್ಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಉದಯಶಂಕರ್‌ ಮತ್ತಿತರರು ಪಾಲ್ಗೊಂಡಿದ್ದರು.

ಒಳಗೆ ಸಭೆ ಹೊರಗೆ ಬೆಂಬಲಿಗರ ಪ್ರದರ್ಶನ

ಚಿಕ್ಕಬಳ್ಳಾಪುರ ಜಿಲ್ಲೆಯ ಐದು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಶುಕ್ರವಾರ ಚುನಾವಣಾ ವೀಕ್ಷಕರು ಸಭೆ ನಡೆಸಿದರೆ ಹೊರಗೆ ಟಿಕೆಟ್‌ ಆಕಾಂಕ್ಷಿಗಳ ಹಾಗೂ ಬೆಂಬಲಿಗರು ತಮ್ಮ ಶಕ್ತಿ ಪ್ರದರ್ಶನ ತೋರಿಸಿದರು. ವಿಶೇಷವಾಗಿ ಚಿಕ್ಕಬಳ್ಳಾಪುರ, ಶಿಡ್ಲಘಟ್ಟದಿಂದ ಆಗಮಿಸಿದ್ದ ಟಿಕೆಟ್‌ ಆಕಾಂಕ್ಷಿಗಳು ತಮ್ಮ ನಾಯಕನಿಗೆ ಟಿಕೆಟ್‌ ನೀಡಬೇಕೆಂದು ಘೋಷಣೆಗಳನ್ನು ಕೂಗಿದರು. ಚಿಕ್ಕಬಳ್ಳಾಪುರದಲ್ಲಿ 5 ಮಂದಿ, ಶಿಡ್ಲಘಟ್ಟದಲ್ಲಿ 4 ಮಂದಿ ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ.

ಕೈ ಬಿಟ್ಟವರಿಗೆ ಮರಳಿ ಆಹ್ವಾನ

 ಬೆಳಗಾವಿ :  ರಾಜ್ಯ ಹಾಗೂ ಸ್ಥಳೀಯ ಮಟ್ಟದಲ್ಲಿ ಅನೇಕರು ಕಾಂಗ್ರೆಸ… ಸೇರಲು ಉತ್ಸುಕರಾಗಿದ್ದಾರೆ. ಬೇರೆ ಪಕ್ಷದಿಂದ ಬರಲು ಇಚ್ಛಿಸುವವರಿಗೆ ಮುಕ್ತ ಆಹ್ವಾನ ನೀಡುತ್ತೇನೆ. ಯಾರೆಲ್ಲಾ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ… ಗಾಂಧಿ ಅವರ ಮುಖಂಡತ್ವದಲ್ಲಿ ನಂಬಿಕೆ ಇಟ್ಟು, ಪಕ್ಷದ ಸಿದ್ಧಾಂತ ಒಪ್ಪಿ ಬೇಷರತ್ತಾಗಿ ಸೇರಬಯಸುವರೋ ಅವರು ಅರ್ಜಿ ಹಾಕಬಹುದು. ಸ್ಥಳೀಯ ಮಟ್ಟದಲ್ಲಿ ಸೇರಲು ಅವಕಾಶ ಮಾಡಿಕೊಡಲಾಗುವುದು. ರಾಜ್ಯದಲ್ಲಿ ಬಲಿಷ್ಠ ಕಾಂಗ್ರೆಸ್‌ ಸರ್ಕಾರ ಬರಲಿದ್ದು, ಅದರ ಭಾಗವಾಗಿರಬೇಕು ಎಂದು ಬಯಸುವವರು ಪಕ್ಷ ಸೇರಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು.

ಕಾಂಗ್ರೆಸ್‌ ಭವನದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ನಾವು ಯಾರನ್ನೂ ಬೇಡ ಎಂದು ತಿರಸ್ಕರಿಸುವುದಿಲ್ಲ. ನಮ್ಮಿಂದ ದೂರ ಹೋಗಿರುವ ಅನೇಕರು ಮತ್ತೆ ಪಕ್ಷ ಸೇರುವ ಇಚ್ಛೆ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಅರ್ಜಿ ಹಾಕುವಂತೆ ತಿಳಿಸಿದ್ದೇನೆ ಎಂದರು.

ಪಕ್ಷ ಸೇರುವವರಲ್ಲಿ ಈ ಹಿಂದೆ ಪಕ್ಷ  ಬಿಟ್ಟು ಹೋಗಿದ್ದ 15 ಶಾಸಕರು (MLA)  ಇದ್ದಾರಾ ಎಂಬ ಪ್ರಶ್ನೆಗೆ, ಈಗ ಆ ವಿಚಾರವನ್ನು ಬಹಿರಂಗಪಡಿಸುವುದಿಲ್ಲ. ಯಾರು ಬೇಕಾದರೂ ಅರ್ಜಿ ಹಾಕಬಹುದು.(BJP)  ಸರ್ಕಾರದ ಭ್ರಷ್ಟಾಚಾರ ನೋಡಿ ಇಲ್ಲಿಂದ ಹೋದವರು ಸೇರಿದಂತೆ ಎಲ್ಲರೂ ಬೇಸತ್ತಿದ್ದಾರೆ. ಕೆಲವರು ತಮ್ಮ ಬೇಸರ ವ್ಯಕ್ತಪಡಿಸಿದ್ದರೆ, ಮತ್ತೆ ಕೆಲವರು ವ್ಯಕ್ತಪಡಿಸಿಲ್ಲ. ಈಗ ಈ ವಿಚಾರವಾಗಿ ಹೆಚ್ಚು ಚರ್ಚೆ ಮಾಡುವುದಿಲ್ಲ’ ಎಂದರು.

click me!