
ಬೆಂಗಳೂರು: ಈ ಹಿಂದೆ ಸ್ಥಳೀಯರಿಂದ ಸಾಕಷ್ಟು ವಿರೋಧ ವ್ಯಕ್ತವಾಗಿದ್ದ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಆಡಳಿತಾತ್ಮಕ ಅನುಮೋದನೆ ನೀಡುವ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ 7481 ಎಕರೆ ವಿಸ್ತೀರ್ಣದಲ್ಲಿ 18104 ಕೋಟಿ ರು. ವೆಚ್ಚದಲ್ಲಿ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ. ಈ ಯೋಜನೆ ಕುರಿತಂತೆ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತಿದೆ.
ಅದರ ಜತೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆ ವ್ಯಾಪ್ತಿಯಲ್ಲಿನ 13262.70 ಕೋಟಿ ರು. ವೆಚ್ಚದಲ್ಲಿ 72.60 ಕಿ.ಮೀ. ಉದ್ದದ 11 ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಹಾಗೂ ಬೈಯಪ್ಪನಹಳ್ಳಿಯ ಐಒಸಿ ಜಂಕ್ಷನ್ನಲ್ಲಿ ರೋಟರಿ ಮೇಲ್ಸೇತುವೆ ನಿರ್ಮಾಣ ಯೋಜನೆಯ 436.44 ಕೋಟಿ ರು. ಪರಿಷ್ಕೃತ ಅಂದಾಜಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಸಾಧ್ಯತೆಗಳಿವೆ.
ಘನ ತ್ಯಾಜ್ಯ ನಿರ್ವಹಣೆ ಮಾಡದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಎಚ್ಚರಿಕೆ ನೀಡಿದ್ದಾರೆ.
ಕೇಂದ್ರ ಪಾಲಿಕೆ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ನಿರ್ವಹಣೆ ಕುರಿತು ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಕೇಂದ್ರ ನಗರ ಪಾಲಿಕೆಯು ಬೆಂಗಳೂರು ನಗರದ ಹೃದಯ ಭಾಗದಲ್ಲಿದ್ದು, ಪ್ರತಿನಿತ್ಯ ಕಸ ತೆರವು ಕಾರ್ಯವು ಸಮರ್ಪಕವಾಗಿ ನಿರ್ವಹಣೆ ಆಗಬೇಕು. ಈ ಬಗ್ಗೆ ನಿತ್ಯ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತ್ಯಾಜ್ಯ ಬ್ಲ್ಯಾಕ್ ಸ್ಪಾಟ್ ಗಳು ಹೆಚ್ಚಾಗಿ ಇರುವ ಸ್ಥಳಗಳನ್ನು ಗುರುತಿಸಿ, ಪಟ್ಟಿ ಮಾಡಿ ಅವುಗಳನ್ನು ತೆರವುಗೊಳಿಸುವುದು ಹಾಗೂ ಸದರಿ ಬ್ಲ್ಯಾಕ್ ಸ್ಪಾಟ್ಗಳನ್ನು ಶಾಶ್ವತವಾಗಿ ನಿರ್ಮೂಲನೆಗೆ ಕ್ರಮ ವಹಿಸಬೇಕು. ಪ್ರತಿ ಬೀದಿಗಳಿಗೆ ನಿಯೋಜನೆ ಮಾಡಿದ ಸ್ವಚ್ಛತೆ ಸಿಬ್ಬಂದಿ ವಿವರವನ್ನು ಹಾಗೂ ಅವರು ಅಲ್ಲಿ ಸರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಬಗ್ಗೆ ಮೇಲುಸ್ತುವಾರಿ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಈಗಾಗಲೇ ಸಾಕಷ್ಟು ಬಾರಿ ಸಮರ್ಪಕವಾಗಿ ನಿರ್ವಹಣೆ ಮಾಡಲು ಸೂಚನೆ ನೀಡಿದಾಗಲೂ ಹಲವು ಅಧಿಕಾರಿಗಳು, ಸಿಬ್ಬಂದಿ ಸರಿಯಾಗಿ ಕಾರ್ಯಹಿಸುತ್ತಿಲ್ಲ. ಅಂತಹವರನ್ನು ಸ್ಥಳ ಬದಲಾವಣೆ ಹಾಗೂ ಸಮರ್ಪಕ ಕಾರ್ಯ ನಿರ್ವಹಿಸದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸುವುದಾಗಿ ಎಚ್ಚರಿಕೆ ನೀಡಿದರು.
ಆಟೋ ಟಿಪ್ಪರ್ಗಳು ನಿಗದಿತ ವೇಳೆಯಲ್ಲಿ ಮನೆ ಮನೆಯಿಂದ ತ್ಯಾಜ್ಯ ಸಂಗ್ರಹಣೆ ಮಾಡಬೇಕು. ಜನರು ಆಟೋ ಟಿಪ್ಪರ್ ಗಳಿಗೆ ಕಸ ತಂದು ಕೊಡುವಂತೆ ಜನರಿಗೆ ತಿಳಿಸಬೇಕೆಂದು ಸೂಚಿಸಿದರು.
ಇದನ್ನೂ ಓದಿ: ಪ್ರಧಾನಿ ಮೋದಿಗೆ ಸಿಎಂ ನೀಡಿದ 18 ಬೇಡಿಕೆಗಳ ಪಟ್ಟಿಯಲ್ಲೇನಿದೆ? ಸೈಲೆಂಟಾಗಿ ಸಿದ್ದು ಕಿವಿಯಲ್ಲಿ ನಮೋ ಹೇಳಿದ್ದೇನು?
ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಮಾರುತಿ ಮಂದಿರ ಪ್ರದೇಶದಲ್ಲಿ ಅಕ್ರಮವಾಗಿ ಏಕ ಬಳಕೆ ಪ್ಲಾಸ್ಟಿಕ್ ಸಂಗ್ರಹಣೆ ಮತ್ತು ವ್ಯಾಪಾರ ನಡೆಸುತ್ತಿದ್ದವರ ವಿರುದ್ಧ ಘನತ್ಯಾಜ್ಯ ನಿರ್ವಹಣಾ ವಿಭಾಗ ಕ್ರಮ ಕೈಗೊಂಡು ದಂಡ ವಸೂಲಿ ಮಾಡಿದೆ ಎಂದು ಪಶ್ಚಿಮ ನಗರ ಪಾಲಿಕೆ ತಿಳಿಸಿದೆ.ಪರಿಶೀಲನೆಯ ವೇಳೆ ಬಾಲಾಜಿ ಪಾಲಿ ಪ್ಯಾಕ್ (ಪ್ಲಾಸ್ಟಿಕ್ ವ್ಯಾಪಾರಿ) ಅವರು ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಹಾಗೂ ಬ್ಯಾಗ್ಗಳ ಅಕ್ರಮ ಸಂಗ್ರಹಣೆ ಮತ್ತು ವ್ಯಾಪಾರ ನಡೆಸುತ್ತಿರುವುದು ಪತ್ತೆಯಾದ ಹಿನ್ನೆಲೆ ಎರಡು ಲಕ್ಷ ರು. ದಂಡ ವಿಧಿಸಲಾಗಿದೆ. ಸುಮಾರು 100 ಕೆ.ಜಿ. ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದೆ.
ಇದನ್ನೂ ಓದಿ: Vemula Act: ಸಂಪುಟದಲ್ಲಿ ಇಂದು ವೇಮುಲ ವಿಧೇಯಕ ಅನುಷ್ಠಾನ ಚರ್ಚೆ? ಏನಿದು ಕಾಯ್ದೆ, ಇಲ್ಲಿದೆ ವಿವರ