Latest Videos

ರೈತರಿಗೆ ಬೀಜ, ರಸಗೊಬ್ಬರದ ಕೊರತೆಯಾಗದಂತೆ ಕ್ರಮವಹಿಸಿ: ಸಿಎಂ ಸಿದ್ಧರಾಮಯ್ಯ

By Kannadaprabha NewsFirst Published May 24, 2024, 4:31 PM IST
Highlights

ರಾಜ್ಯದಲ್ಲಿನ ಬರ ಪರಿಸ್ಥಿತಿ, ಪೂರ್ವ-ಮುಂಗಾರು ಮತ್ತು ಮುಂಗಾರು ಋತುಮಾನ ಪರಿಸ್ಥಿತಿ ಮತ್ತು ಮಳೆಯಿಂದ ಉಂಟಾದ ಹಾನಿ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೇಸ್ವಾನ್ ಮೂಲಕ ನಡೆದ ವಿಡಿಯೋ ಸಂವಾದ ಸಭೆ.

ತುಮಕೂರು (ಮೇ.24): ರಾಜ್ಯದಲ್ಲಿನ ಬರ ಪರಿಸ್ಥಿತಿ, ಪೂರ್ವ-ಮುಂಗಾರು ಮತ್ತು ಮುಂಗಾರು ಋತುಮಾನ ಪರಿಸ್ಥಿತಿ ಮತ್ತು ಮಳೆಯಿಂದ ಉಂಟಾದ ಹಾನಿ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೇಸ್ವಾನ್ ಮೂಲಕ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭಾಗವಹಿಸಿ ಜಿಲ್ಲೆಯ ಬರ ಪರಿಸ್ಥಿತಿ, ಮುಂಗಾರು ಋತುಮಾನ ಪರಿಸ್ಥಿತಿ ಹಾಗೂ ಮಳೆಯಿಂದ ಉಂಟಾದ ಹಾನಿ ಬಗ್ಗೆ ಮಾಹಿತಿ ನೀಡಿದರು. ರಾಜ್ಯದಲ್ಲಿಯೇ ಅತೀ ಹೆಚ್ಚು 20 ಮೇವಿನ ಬ್ಯಾಂಕ್‌ಗಳನ್ನು ಜಿಲ್ಲೆಯಲ್ಲಿ ಸ್ಥಾಪಿಸಲಾಗಿದ್ದು, ಬರ ಸಮರ್ಪಕ ನಿರ್ವಹಣೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರಲ್ಲದೇ, ಜಿಲ್ಲೆಯಲ್ಲಿ ಮೇ ತಿಂಗಳಲ್ಲಿ 94 ಮಿಮೀ ವಾಡಿಕೆ ಮಳೆಯಾಗಬೇಕಿದ್ದು, 150.9 ಮಿಮೀ ಮಳೆಯಾಗಿದೆ ಎಂದರು.

ಜಿಲ್ಲೆಯಲ್ಲಿ ಸಾಕಷ್ಟು ಬೀಜ, ರಸಗೊಬ್ಬರ, ಕೀಟನಾಶಕ ಸಂಗ್ರಹ ಇದ್ದು, ಉತ್ತಮ ಮಳೆಯಾಗಿರುವ ಕಾರಣ ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆಗಾಗಿ 50 ರೈತ ಸಂಪರ್ಕ ಕೇಂದ್ರಗಳಿದ್ದು, ಪ್ರಸ್ತುತ ವರ್ಷ ಹೆಚ್ಚುವರಿಯಾಗಿ 11 ಬೀಜ ವಿತರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸರಬರಾಜು ಸಂಸ್ಥೆಗಳಲ್ಲಿ 52,000 ಕ್ವಿಂಟಲ್ ಬಿತ್ತನೆ ಬೀಜಗಳ ಸಂಗ್ರಹವಿದ್ದು, ಇಲ್ಲಿಯವರೆಗೂ 284 ಕ್ವಿಂಟಲ್ ಬಿತ್ತನೆ ಬೀಜ ವಿತರಿಸಲಾಗಿದೆ, ಆಧಾರ್ ಸೀಡಿಂಗ್ ಮತ್ತಿತರ ಸಮಸ್ಯೆ ಕಾರಣ ಕೆಲವು ರೈತರಿಗೆ ಪರಿಹಾರ ವಿತರಣೆ ಬಾಕಿ ಇತ್ತು. ಇದರಲ್ಲಿ ಬಹುತೇಕ ಸಮಸ್ಯೆಗಳನ್ನು ಬಗೆಹರಿಸಿ ಎಲ್ಲಾ ಅರ್ಹ ರೈತರಿಗೆ ಪರಿಹಾರ ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ಮುಖ್ಯಮಂತ್ರಿಯವರ ಗಮನಕ್ಕೆ ತಂದರು.

ಪಂಚಮಸಾಲಿ ಮೀಸಲಾತಿಗೆ ಸಿಎಂ ನಿರ್ಲಕ್ಷ್ಯ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಮುಂಗಾರು ಪೂರ್ವ ಮಳೆ ಎಲ್ಲೆಡೆ ಉತ್ತಮವಾಗಿದೆ. ಹೀಗಾಗಿ ಬಿತ್ತನೆ ಕಾರ್ಯ ಚುರುಕಾಗಬೇಕು. ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತಿಯಿಂದ ಸಡಿಲಿಕೆ ನೀಡಿರುವುದರಿಂದ ಅಭಿವೃದ್ಧಿ ಕೆಲಸದ ಕಡೆ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕು. ಬಿತ್ತನೆ ಬೀಜಕ್ಕೆ ಜನ ಹೆಚ್ಚು ಸಮಯ ಕ್ಯೂ ನಿಲ್ಲುವುದು ತಪ್ಪಿಸಿ, ರೈತರಿಂದ ದೂರು ಬಾರದಂತೆ ಬೇಡಿಕೆಯನುಗುಣವಾಗಿ ಬೀಜ, ರಸಗೊಬ್ಬರ, ಕೀಟನಾಶಕ ಸರಿಯಾಗಿ ಪೂರೈಸಿ, ಎಲ್ಲಿಯೂ ಕೊರತೆಯಾಗದಂತೆ ನೋಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು. ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಮಳೆಯ ನೀರು ಶುದ್ಧ ಕುಡಿಯುವ ನೀರಿನೊಂದಿಗೆ ಮಿಶ್ರಣಗೊಳ್ಳುವ ಸಾಧ್ಯತೆಯಿದ್ದು, ಕುಡಿಯುವ ನೀರಿನ ಮೂಲಗಳು ಕಲುಷಿತಗೊಂಡಲ್ಲಿ ಆ ನೀರನ್ನು ಸೇವಿಸುವ ಜನರು ರೋಗಗಳಿಗೆ ತುತ್ತಾಗುವ ಸಾಧ್ಯತೆ ಇರುತ್ತದೆ. 

ಆದ್ದರಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ವ್ಯಾಪ್ತಿಯಲ್ಲಿರುವ ೧೧,೧೫೦ ಜಲಮೂಲಗಳು ಸೇರಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಎಲ್ಲಾ ಜಲಮೂಲಗಳ ಶುದ್ಧತೆಯನ್ನು ಪರೀಕ್ಷಿಸಿ, ಸಾರ್ವಜನಿಕರಿಗೆ ಸಮರ್ಪಕ ಕುಡಿಯುವ ನೀರನ್ನು ಪೂರೈಸುವಂತೆ ಸೂಚಿಸಿದರು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಅಪರ ಜಿಲ್ಲಾಧಿಕಾರಿ ಶಿವಾನಂದ್ ಬಿ. ಕರಾಳೆ, ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಉಪ ವಿಭಾಗಾಧಿಕಾರಿಗಳಾದ ಸಪ್ತಶ್ರೀ, ಗೌರವ ಕುಮಾರ್ ಶೆಟ್ಟಿ, ಗೋಟೂರು ಶಿವಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್ ಎನ್., ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಶಾರದಮ್ಮ, ಸೇರಿ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

ಮನೆಗೆ ಹೋದ್ರೆ ಪೊಲೀಸ್ ಕರೀತಾರೆ, ಪ್ರಶ್ನೆ ಮಾಡಿದ್ರೆ ಹೊಡೀತಾರೆ: ಸಿಪಿವೈ ವಿರುದ್ದ ಅಸಮಾಧಾನ ಹೊರಹಾಕಿದ ಪುತ್ರಿ ನಿಶಾ!

ಬರ ಸಮರ್ಪಕ ನಿರ್ವಹಣೆಗೆ ಕಂದಾಯ ಸಚಿವರ ಮೆಚ್ಚುಗೆ: ಕಂದಾಯ ಸಚಿವ ಕೃಷ್ಣಭೈರೇಗೌಡ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿ, ರಾಜ್ಯದಲ್ಲಿ 2312 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಈ ಬಾರಿ ಕಂಡು ಬಂದಿದ್ದು, ಅದರಲ್ಲಿ 1700 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ, 500 ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ, ಉಳಿದ ಗ್ರಾಮಗಳಲ್ಲಿ ಹಳೆಯ ಕೊಳವೆ ಬಾವಿ ನವೀಕರಣ ಹಾಗೂ ಹೊಸ ಕೊಳವೆ ಬಾವಿ ಕೊರಸುವ ಮೂಲಕ ಸಮರ್ಪಕವಾಗಿ ಪರಿಹರಿಸಲಾಗಿದೆ. ರಾಜ್ಯಾದ್ಯಂತ ಅಗತ್ಯವಿರುವ ಕಡೆ ಮೇವಿನ ಬ್ಯಾಂಕ್‌ಗಳನ್ನು ಸ್ಥಾಪಿಸಿ ರೈತರ ಕಷ್ಟಕ್ಕೆ ಸ್ಪಂದಿಸಲಾಗಿದೆ. ತುಮಕೂರು ಜಿಲ್ಲೆ ಸೇರಿ ರಾಜ್ಯಾದ್ಯಂತ ಈ ಬಾರಿ ಪ್ರಾರಂಭದಲ್ಲೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡ ಹಿನ್ನೆಲೆಯಲ್ಲಿ ಬರ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

click me!