ನೂತನ ದಾಸೋಹ ಭವನ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸಿ​: ಸಚಿವ ಸೋಮಣ್ಣ

By Govindaraj SFirst Published Aug 3, 2022, 12:29 PM IST
Highlights

ಮಲೆ ಮಹದೇಶ್ವರ ಬೆಟ್ಟದಲ್ಲಿ ಸುಸಜ್ಜಿತ ನೂತನ ದಾಸೋಹ ಭವನ ನಿರ್ಮಾಣಕ್ಕಾಗಿ ವಿಸ್ತೃತ ಯೋಜನಾ ವರದಿಯನ್ನು ಸಿದ್ದಪಡಿಸಿ ನಾಲ್ಕರಿಂದ ಐದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸುವಂತೆ ವಸತಿ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ತಿಳಿಸಿದರು. 

ಚಾಮರಾಜನಗರ (ಆ.03): ಮಲೆ ಮಹದೇಶ್ವರ ಬೆಟ್ಟದಲ್ಲಿ ಸುಸಜ್ಜಿತ ನೂತನ ದಾಸೋಹ ಭವನ ನಿರ್ಮಾಣಕ್ಕಾಗಿ ವಿಸ್ತೃತ ಯೋಜನಾ ವರದಿಯನ್ನು ಸಿದ್ದಪಡಿಸಿ ನಾಲ್ಕರಿಂದ ಐದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸುವಂತೆ ವಸತಿ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ತಿಳಿಸಿದರು. 

ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಭಕ್ತಾದಿಗಳ ಸೌಕರ್ಯಕ್ಕಾಗಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಲೆ ಮಹದೇಶ್ವರ ಬೆಟ್ಟದಲ್ಲಿ ಸಾಕಷ್ಟುಬದಲಾವಣೆಗಳಾಗಿವೆ. ಭಕ್ತರ ಸಂಖ್ಯೆಯು ಹೆಚ್ಚುತ್ತಿದೆ. ಭಕ್ತರಿಗೆ ಮೂಲ ಸೌಕರ್ಯವನ್ನು ಸಮರ್ಪಕವಾಗಿ ಒದಗಿಸುವುದು ನಮ್ಮ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಸುಸಜ್ಜಿತ ದಾಸೋಹ ಭವನ ಅಗತ್ಯವಿದ್ದು, ಇದಕ್ಕಾಗಿ ವಿಸ್ತೃತ ಯೋಜನಾ ವರದಿ ಹಾಗೂ ಅಂದಾಜು ಪಟ್ಟಿಯನ್ನು ಸಿದ್ದಪಡಿಸಿ ತುರ್ತಾಗಿ ಸಲ್ಲಿಸಬೇಕು. ನಾಲ್ಕರಿಂದ ಐದು ತಿಂಗಳೊಳಗೆ ನೂತನ ದಾಸೋಹ ಭವನ ಕಾಮಗಾರಿ ಪೂರ್ಣವಾಗಬೇಕೆಂದು ತಿಳಿಸಿದರು. 

ಹಲವು ಪ್ರಕರಣ ಭೇದಿಸಿದ ಅರಣ್ಯ ಇಲಾಖೆ ಮುದ್ದಿನ ರಾಣಾ ಸಾವು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ!

ಕಾಮಗಾರಿ ಚುರುಕುಗೊಳಿಸಿ: ಭಕ್ತಾದಿಗಳ ವಾಸ್ತವ್ಯಕ್ಕಾಗಿ ವಸತಿ ಗೃಹಗಳು ನಿರ್ಮಾಣವಾಗಬೇಕಿದೆ. ಪ್ರಗತಿಯಲ್ಲಿರುವ 512 ಕೊಠಡಿಗಳ ವಸತಿಗೃಹ ಕಾಮಗಾರಿಯನ್ನು ವಿಳಂಬ ಮಾಡದೇ ಬೇಗ ಪೂರ್ಣಗೊಳಿಸಬೇಕು. ಬಹಳ ದಿನಗಳ ಹಿಂದೆ ಆರಂಭವಾಗಿರುವ ಒಳಚರಂಡಿ ಕಾಮಗಾರಿ ಇನ್ನೂ ಪೂರ್ಣವಾಗಿಲ್ಲ. ಗುತ್ತಿಗೆದಾರರು, ಅಧಿಕಾರಿಗಳು ವಿಳಂಬ ಧೋರಣೆ ತೋರದೆ ಕಾಮಗಾರಿ ಚುರುಕುಗೊಳಿಸಬೇಕು. ಡಿಸೆಂಬರ್‌ ಒಳಗೆ ಕಾಮಗಾರಿ ಮುಗಿಸಬೇಕೆಂದು ಸಚಿವರು ನಿರ್ದೇಶನ ನೀಡಿದರು.

ಸೋಲಾರ್‌ ಪವರ್‌ ಪ್ಲಾಂಟ್‌: ತಾಳ ಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗಿನ ಮೆಟ್ಟಿಲುಗಳ ಕಾಮಗಾರಿಯೂ ಸಹ ನಿರೀಕ್ಷಿತ ವೇಗದಲ್ಲಿ ನಿರ್ವಹಿಸಬೇಕು. ದೊಡ್ಡಕೆರೆ ಅಭಿವೃದ್ಧಿ ಕಾಮಗಾರಿ, ಕ್ಯೂ ಲೈನ್‌ ಅಭಿವೃದ್ಧಿ ಕೆಲಸಗಳು ಸಹ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಒಂದು ಮೆಗಾ ವ್ಯಾಟ್‌ ಸೋಲಾರ್‌ ಪವರ್‌ ಪ್ಲಾಂಟ್‌ ನಿರ್ಮಾಣ ಕೆಲಸವು ಬೇಗ ಆರಂಭಿಸುವಂತೆ ಸೂಚಿಸಿದರು.

ದೀಪದ ಒಡ್ಡುವಿನಲ್ಲಿ ನಿರ್ಮಿಸುತ್ತಿರುವ 108 ಅಡಿ ಎತ್ತರದ ಮಹದೇಶ್ವರ ಸ್ವಾಮಿ ಪ್ರತಿಮೆ ಕಾಮಗಾರಿಯಲ್ಲಿ ಕೆಲ ಮಾರ್ಪಾಡುಗಳಿಗೆ ಸೂಚಿಸಿದರು. ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌. ಕಾತ್ಯಾಯಿನಿದೇವಿ ವಿವಿಧ ಅಭಿವೃದ್ಧಿ ಕಾಮಗಾರಿ ನಿರ್ವಹಣೆ ಸಂಬಂಧ ಸಭೆಗೆ ವಿವರ ನೀಡಿದರು.

Male Mahadeshwara Temple; ಕಣ್ತಪ್ಪಿನಿಂದ ಪ್ರಸಾದ ಜತೆ ಕೊಟ್ಟಿದ್ದ 2.93 ಲಕ್ಷ ರೂ ಹಿಂದಿರುಗಿಸಿದ ಭಕ್ತ

ಸಭೆಯಲ್ಲಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್‌, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್‌ ವಿನಯ್‌ಕುಮಾರ್‌, ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪಕಾರ್ಯದರ್ಶಿ ಬಸವರಾಜು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.

click me!