
ಬೀದರ್/ ಗದಗ: ಹಾಸನದಲ್ಲಿ ಹೆಚ್ಚಿನ ಸಂಖ್ಯೆಯ ಹೃದಯಾಘಾತ ಸಮಸ್ಯೆಗಳು ಕಂಡು ಬರುತ್ತಿರುವ ಬೆನ್ನಲ್ಲೇ ರಾಜ್ಯದ ಇತರ ಜಿಲ್ಲೆಗಳಲ್ಲೂ ಹೃದಯಾಘಾತದ ಸಾವಿನ ಸುದ್ದಿಗಳು ಬೆಳಕಿಗೆ ಬರುತ್ತಿದೆ. ಇದೀಗ ಬೀದರ್ ಮತ್ತು ಗದಗದಲ್ಲಿ ಬೋಧಕ ಸಿಬ್ಬಂದಿಗಳು ಮೃತಪಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.
ಜಿಲ್ಲೆಯ ಹುಲಸೂರು ಪಟ್ಟಣದಲ್ಲಿ ಹೃದಯಾಘಾತದಿಂದ ಅತಿಥಿ ಉಪನ್ಯಾಸಕ ಡಾ. ರವಿಕುಮಾರ್ ಅಂತಪ್ಪ ತೆಲ್ಕರ್ (ವಯಸ್ಸು 48) ಮೃತಪಟ್ಟ ದುರ್ಘಟನೆ ನಡೆದಿದೆ.
ಡಾ. ರವಿಕುಮಾರ್ ಹುಲಸೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಾಲೇಜಿಗೆ ತೆರಳುತ್ತಿದ್ದ ವೇಳೆ ಹಠಾತ್ ಎದೆನೋವು ಕಾಣಿಸಿಕೊಂಡು ಅವರು ರಸ್ತೆಯಲ್ಲಿ ಕುಸಿದು ಬಿದ್ದರು. ಕೂಡಲೇ ಸ್ಥಳೀಯರು ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಅವರು ಮೃತಪಟ್ಟಿದ್ದಾರೆ. ಮೃತರು ಮೂಲತಃ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನವರಾಗಿದ್ದಾರೆ.
ಗದಗ ನಗರದ ನಿವಾಸಿ ಹಾಗೂ ಸೊರಟೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದ ಪ್ರಭಾ ಕಲ್ಮಠ (ವಯಸ್ಸು 49) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕಾಲೇಜಿಗೆ ಹೋಗಲು ತಯಾರಿ ಮಾಡಿಕೊಂಡು ಇದ್ದಾಗಲೇ ಎದೆನೋವು ಕಾಣಿಸಿಕೊಂಡು, ಮನೆಯಲ್ಲೇ ಪ್ರಭಾ ಕಲ್ಮಠ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಆಸ್ಪತ್ರೆಯಲ್ಲೇ ಅವರು ಕೊನೆಯುಸಿರೆಳೆದರು ಎಂದು ಮಾಹಿತಿ ಲಭ್ಯವಾಗಿದೆ.