ಕ್ಷೇತ್ರ ಅಭಿವೃದ್ಧಿಯಲ್ಲಿ ತಾರತಮ್ಯ ಮಾಡಿಲ್ಲ: ಸಂಸದ ಬಿ.ವೈ.ರಾಘ​ವೇಂದ್ರ

By Kannadaprabha NewsFirst Published Jan 31, 2023, 2:40 AM IST
Highlights

ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರೀತಿ ತಾರತಮ್ಯ ಮಾಡಿಲ್ಲ. ವಿಐಎಸ್‌ಎಲ್‌ ಮತ್ತು ಎಂಪಿಎಂ ಕಾರ್ಖಾನೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಈಗಲೂ ಬದ್ಧವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು

ಭದ್ರಾವತಿ (ಜ.31): ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರೀತಿ ತಾರತಮ್ಯ ಮಾಡಿಲ್ಲ. ವಿಐಎಸ್‌ಎಲ್‌ ಮತ್ತು ಎಂಪಿಎಂ ಕಾರ್ಖಾನೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಈಗಲೂ ಬದ್ಧವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ನಗರದ ಹೊಸಸೇತುವೆ ರಸ್ತೆಯ ಸಿದ್ಧಾರೂಢ ನಗರದ ಬಸವೇಶ್ವರ ಸಭಾಭವನದಲ್ಲಿ ಸೋಮವಾರ ನಡೆದ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಅಂದಿನ ಸರ್ಕಾರಗಳು ನಗರದ ವಿಐಎಸ್‌ಎಲ್‌ ಮತ್ತು ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಸೂಕ್ತ ಸಂದರ್ಭದಲ್ಲಿ ಪೂರಕವಾಗಿ ಸ್ಪಂದಿಸಲಿಲ್ಲ. ಈ ಹಿನ್ನೆಲೆಯಲ್ಲಿ ಸಮಸ್ಯೆ ಎದುರಾಗಿದೆ ಎಂದರು.

ಇಲ್ಲಿನ ಕಾರ್ಮಿಕರ ಹಿತಕ್ಕಾಗಿ ಯಡಿಯೂರಪ್ಪ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಶಾಹಿ ಗಾರ್ಮೆಂಟ್ಸ್‌ ಆರಂಭಗೊಳ್ಳಲು ಕಾರಣರಾಗಿದ್ದಾರೆ. ಇದರಿಂದಾಗಿ ಕ್ಷೇತ್ರದ ಸುಮಾರು 2 ಸಾವಿರ ಮಂದಿಗೆ ಉದ್ಯೋಗ ಲಭಿಸಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ಕಡೆಗಣಿಸಿಲ್ಲ ಎಂದು ಸ್ಪಷ್ಟಪಡಿಸಿದರು. ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಮಾತನಾಡಿ, ನಮ್ಮದು ರಾಷ್ಟ್ರೀಯವಾದ ಹಿಂದುತ್ವ. ಹಿಂದುತ್ವ ಎಂಬುದು ಯಾವುದೇ ಜಾತಿಗೆ ಸೀಮಿತವಾಗಿಲ್ಲ. ಈ ದೇಶದಲ್ಲಿರುವ ಎಲ್ಲ ಹಿಂದುಗಳು ಕೂಡ ಒಂದೇ ಎಂಬ ಭಾವನೆ ಹೊಂದಿದೆ ಎಂದರು.

ರಮೇಶ್‌ ಜಾರಕಿಹೊಳಿಗೆ ಸುಳ್ಳು ಹೇಳುವ ಚಟವಿದೆ: ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ

ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್‌ ಸಭೆ ಅಧ್ಯಕ್ಷತೆ ವಹಿಸಿದ್ದರು. ಶಾಸ​ಕ​ರಾದ ಹರತಾಳು ಹಾಲಪ್ಪ, ಕುಮಾರ್‌ ಬಂಗಾರಪ್ಪ, ವಿಧಾನ ಪರಿಷತ್ತು ಸದಸ್ಯರಾದ ಎಸ್‌. ರುದ್ರೇಗೌಡ, ಭಾರತಿ ಶೆಟ್ಟಿ, ಡಿ.ಎಸ್‌. ಅರುಣ್‌, ಆಯನೂರು ಮಂಜುನಾಥ್‌, ಮಾಜಿ ಸದಸ್ಯ ಎಂ.ಬಿ. ಭಾನುಪ್ರಕಾಶ್‌, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ. ಶ್ರೀನಾಥ್‌, ಶಿವರಾಜ್‌, ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್‌ ಇನ್ನಿತರರು ಉಪಸ್ಥಿತರಿದ್ದರು.

ಸಭೆ ನಡೆಸಿ ಪರಿ​ಹಾ​ರಕ್ಕೆ ಪ್ರಯತ್ನ: ವಿಐಎಸ್‌ಎಲ್‌ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಕಳೆದ 12 ದಿನಗಳಿಂದ ನಿರಂತರವಾಗಿ ಕಾರ್ಖಾನೆ ಮುಂಭಾಗ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರು ಸೋಮವಾರ ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೃಹತ್‌ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಸಂಸದರು, ಪ್ರತಿಭಟನಾಕಾರರಿಗೆ ಪ್ರಸ್ತುತ ಸ್ಥಿತಿಗತಿಗಳ ಕುರಿತು ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದರು. ಆದರೆ, ಸಾಧ್ಯವಾಗದ ಹಿನ್ನೆಲೆ ಮುಂದಿನ 2 ದಿನಗಳಲ್ಲಿ ಸಭೆ ನಡೆಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.  ಈ ಸಂದರ್ಭ ಕೆಲ​ ಕಾರ್ಮಿ​ಕರು ಕಾಲಿಗೆ ಬೀಳಲು ಮುಂದಾ​ದರು, ಮತ್ತೆ ಕೆಲ​ವರು ಕಣ್ಣೀರ ಕೋಡಿ ಹರಿಸಿ ಅಳಲು ತೋಡಿ​ಕೊಂಡ​ರು. ಇನ್ನು ಕೆಲವರು ಸಂಸ​ದರ ವಿರುದ್ಧ ಘೋಷಣೆ ಕೂಗು​ತ್ತಿ​ದ್ದರು. 

ಸಭೆ ನಂತರ ಮುಂದಿನ ತೀರ್ಮಾನ: ಶಾಸಕ ಬಿ.ಕೆ. ಸಂಗಮೇಶ್ವರ್‌ ಮಾತನಾಡಿ, ಸಂಸದರು 2 ದಿನಗಳೊಳಗೆ ಕಾರ್ಖಾನೆ ಆಡಳಿತ ಮಂಡಳಿ, ಕಾರ್ಮಿಕ ಸಂಘಟನೆಗಳ ಪ್ರಮುಖರು ಹಾಗೂ ಜನಪ್ರತಿನಿ​ಧಿಗಳ ಸಭೆ ನಡೆಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಭೆ ನಂತರ ನಮ್ಮ ಮುಂದಿನ ಹೋರಾಟಕ್ಕೆ ತೀರ್ಮಾನಿಸಲಾಗುವುದು. ಕಾರ್ಮಿಕರು ಯಾವುದೇ ಆತಂಕಕ್ಕೆ ಒಳಗಾಗದಿರುವಂತೆ ಮನವಿ ಮಾಡಿದರು.

ಕಾರ್ಕಳದಲ್ಲಿ ಅಪರೂಪದ ಪೊಲೀಸ್ ಪಂಜಿನ ಕವಾಯತು: ಮೈಸೂರು ದಸರಾ ನೆನಪಿಸಿದ ಆಯೋಜನೆ

ಡಿಸಿ ಕಚೇರಿವರೆಗೂ ಪಾದಯಾತ್ರೆ: ಈ ನಡುವೆ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಶಾರದ ಅಪ್ಪಾಜಿಗೌಡ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ವಿಐಎಸ್‌ಎಲ್‌ ಕಾರ್ಖಾನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆಗೆ ಮುಂದಾಗಿದ್ದಾರೆ. ಅವರ ಸೂಚನೆ ನಂತರ ಕಾರ್ಖಾನೆ ಉಳಿವಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿವರೆಗೂ ಪಾದಯಾತ್ರೆ ನಡೆಸಲಾಗುವುದು. ಕಾರ್ಮಿಕರ ಎಲ್ಲ ರೀತಿಯ ಹೋರಾಟಕ್ಕೂ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

click me!