
ರಾಮನಗರ (ಜ.18): ಜಿಲ್ಲೆಯ ನಾಗರಿಕರಿಗೆ ಸಕಾಲದಲ್ಲಿ ಅಗತ್ಯ ಚಿಕಿತ್ಸೆ ದೊರೆಯಲು ಅನುಕೂಲವಾಗುವಂತಹ ಆನ್ಲೈನ್ ವೈದ್ಯಕೀಯ ಸಲಹೆ (ಟೆಲಿಮೆಡಿಸನ್) ಮಾದರಿಯಲ್ಲಿ ಜಿಲ್ಲೆಯಲ್ಲಿ ಆನ್ಲೈನ್ ವೈದ್ಯಕೀಯ ಸೌಲಭ್ಯ ಜಾರಿಗೊಳಿಸಲು ಚಿಂತಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಸದ ಡಾ. ಸಿ.ಎನ್. ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಪಂ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗಕ್ಕೂ ಆನ್ಲೈನ್ ವೈದ್ಯಕೀಯ ಸೌಲಭ್ಯ ಕಲ್ಪಿಸುವ ಉದ್ದೇಶದಿಂದಾಗಿ ಈ ಯೋಜನೆ ಆರಂಭಿಸಲಾಗುತ್ತಿದೆ. ಅದಕ್ಕೆ ರಾಮನಗರ ಜಿಲ್ಲಾಸ್ಪತ್ರೆಯನ್ನು ನೋಡಲ್ ಆಸ್ಪತ್ರೆ ಮಾಡಲಾಗುವುದು, ಅಲ್ಲಿ ರೊಟೇಷನ್ ಮಾದರಿಯಲ್ಲಿ ತಜ್ಞ ವೈದ್ಯರನ್ನು ವೈದ್ಯಕೀಯ ಸಲಹೆ ನೀಡಲು ನಿಯೋಜಿಸಲಾಗುವುದು. ಜಿಲ್ಲಾಸ್ಪತ್ರೆಯನ್ನೇ ಮುಖ್ಯ ಕೇಂದ್ರವನ್ನಾಗಿಸಿ, ಜಿಲ್ಲೆಯ ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಸೌಲಭ್ಯ ಒದಗಿಸಿಕೊಡಬೇಕು. ಇದಕ್ಕೆ ಅಗತ್ಯವಿರುವ ಟ್ಯಾಬ್ ಖರೀದಿಸಿ ಎರಡು ಅಥವಾ ಮೂರು ತಿಂಗಳ ಅವಧಿಯಲ್ಲಿ ಯೋಜನೆ ಜಾರಿಗೊಳ್ಳಬೇಕು ಎಂದು ಸೂಚಿಸಿದರು.
ಹೃದಯ ಸಂಬಂಧಿ ಕಾಯಿಲೆಯಿಂದ ಪ್ರತಿವರ್ಷ 30 ಲಕ್ಷ ಜನ ಸಾವು: ಸಂಸದ ಡಾ.ಸಿ.ಎನ್. ಮಂಜುನಾಥ್
ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಮಾತನಾಡಿ, ಇನ್ನೆರಡು ವಾರದಲ್ಲಿಯೇ ಜಿಲ್ಲಾ ಮಟ್ಟದಲ್ಲಿ ಈ ಯೋಜನೆಯ ಜಾರಿಗೆ ಶ್ರಮಿಸಲಾಗುತ್ತದೆ. ಸಿಬ್ಬಂದಿ ನಿಯೋಜನೆ ಸೇರಿದಂತೆ ಎಲ್ಲಾ ಸೌಕರ್ಯಗಳನ್ನು ಒದಗಿಸಿಕೊಡಲಾಗುತ್ತದೆ ಎಂದು ಹೇಳಿದರು. ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ ಮಾತನಾಡಿ, ಕೆಲವು ಪಿಎಚ್ಸಿ ಕೇಂದ್ರಗಳಲ್ಲಿ ಟ್ಯಾಬ್ ಸೌಲಭ್ಯವಿದ್ದು ಯೋಜನೆ ಜಾರಿಗೆ ಸಹಾಯವಾಗಲಿದೆ. ಟ್ಯಾಬ್ ಇಲ್ಲದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಪಂ ಅನುದಾನದಿಂದಲೇ ಖರೀದಿಸಲಾಗುತ್ತದೆ ಎಂದು ತಿಳಿಸಿದರು.
ಆಗ ಸಂಸದರು, ಜಿಲ್ಲಾಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಸಂಜೆ 4.30 ನಂತರ ರೋಗಿಗಳ ಸೇವೆಗೆ ವೈದ್ಯರು ಲಭ್ಯರಿರಬೇಕು, ತಜ್ಞ ವೈದ್ಯರು ಕೂಡ ಕೆಲವು ವಾರ್ಡುಗಳಲ್ಲಿ ಅನಿರೀಕ್ಷಿತವಾಗಿ ಭೇಟಿ ನೀಡಬೇಕು. ರಾಮನಗರ, ಮಾಗಡಿ ಹಾಗೂ ಕನಕಪುರದಲ್ಲಿ ಹಾರ್ಟ್ ಅಟ್ಯಾಕ್ ಆದಾಗ ಗೋಲ್ಡನ್ ಅವರ್ನಲ್ಲಿ ನೀಡಲಾಗುವ 18 ಸಾವಿರ ರು.ಗಳ ಇಂಜಕ್ಷನ್ ಬಗ್ಗೆ ಖಾತರಿ ಪಡಿಸಿಕೊಂಡರು. ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿರುವ ಸಿಟಿ ಸ್ಕ್ಯಾನ್ ಯಂತ್ರವನ್ನು 30 ಲಕ್ಷ ರು. ವ್ಯಯಿಸಿ ದುರಸ್ತಿ ಪಡಿಸಲಾಗಿದೆ. ಮುಂದೆ ಈ ಯಂತ್ರಕ್ಕೆ ಐದು ವರ್ಷ ಅದೇ ಸಂಸ್ಥೆಯವರ ನಿರ್ವಹಣೆ ಮಾಡಬೇಕು ಎಂದು ಸೂಚಿಸಿದರು.
ಸ್ತನ ಕ್ಯಾನ್ಸರ್ ಪತ್ತೆಮಾಡುವ ಮ್ಯಾಮೋಗ್ರಫಿ ಯಂತ್ರ ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿದೆ. ಅದು ಕೂಡಲೇ ಕಾರ್ಯಾರಂಭಿಸಬೇಕು, ಎರಡು ಕೋಟಿ ವೆಚ್ಚದಲ್ಲಿ ಯಂತ್ರವನ್ನು ಖರೀದಿಸಿದ್ದು, ಜಿಲ್ಲೆಯ ನಾಗರಿಕರಿಗೆ ಈ ಮಾಹಿತಿ ನೀಡಬೇಕು ಹಾಗೂ ರೋಗಿಗಳಿಗೆ ಅನುಕೂಲವಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ಮಂಜುನಾಥ್ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಶಿಬಿರಗಳನ್ನು ಏರ್ಪಡಿಸಬೇಕು. ಅಲ್ಟ್ರಾಸೌಂಡ್ ಯಂತ್ರ ಕೂಡಲೇ ಕಾರ್ಯನಿರ್ವಹಿಸಬೇಕು. ಜಿಲ್ಲಾಸ್ಪತ್ರೆಯಲ್ಲಿ ಸಾರ್ವಜನಿಕ ಸಂಪರ್ಕ ವ್ಯವಸ್ಥೆಯನ್ನು ಬಲಪಡಿಸಬೇಕು, ಸಾರ್ವಜನಿಕ ಸಂಪರ್ಕಾಧಿಕಾರಿಗಳಲ್ಲಿ ಜಿಲ್ಲಾ ಆಸ್ಪತ್ರೆಯ ಪ್ರತಿ ತಜ್ಞ ವೈದ್ಯರ ಹೆಸರು, ಮೊಬೈಲ್ ನಂಬರ್ ಇರಬೇಕು ಹಾಗೂ ಆಸ್ಪತ್ರೆಗೆ ಭೇಟಿ ನೀಡುವವರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ತಾಕೀತು ಮಾಡಿದರು.
ಕೆಲವರು ತಮ್ಮ ಮಾನ ಉಳಿಸಿಕೊಳ್ಳಲು ವಾಮಮಾರ್ಗ ಹಿಡಿದಿದ್ದಾರೆ: ಸಿ.ಟಿ.ರವಿ
ಸಿಎಸ್ಆರ್ ನಿಧಿಯಡಿ ಹತ್ತು ದಿನದೊಳಗೆ ಜಿಲ್ಲೆಗೆ ಎರಡು ಆಂಬುಲೆನ್ಸ್ ಗಳು ಪೂರೈಕೆಯಾಗಲಿವೆ. ಇವುಗಳಲ್ಲಿ ಒಂದನ್ನು ಗುಡ್ಡಗಾಡು ಪ್ರದೇಶವಾದ ಸಾತನೂರು-ಕೋಡಿಹಳ್ಳಿ ಭಾಗಕ್ಕೆ ಹಾಗೂ ಇನ್ನೊಂದು ರಾಮನಗರ ವ್ಯಾಪ್ತಿಗೆ ಉಪಯೋಗಿಸುವಂತೆ ಅವರು ನಿರ್ದೇಶನ ನೀಡಿದರು. ಟಿಬಿ ಕಾಯಿಲೆ ಬಗ್ಗೆ ಜಿಲ್ಲೆಯಲ್ಲಿ ಅರಿವು ಮೂಡಿಸಬೇಕು, ರಸ್ತೆ ಅಪಘಾತದಲ್ಲಿ ಪ್ರತಿ ವರ್ಷ 4.5 ಲಕ್ಷ ಜನರು ಬಲಿಯಾಗುತ್ತಿದ್ದಾರೆ, ಜಿಲ್ಲೆಯಲ್ಲಿ ರಸ್ತೆ ಸುರಕ್ಷಾ ಸಪ್ತಾಹ ಅಭಿಯಾನ ಹಮ್ಮಿಕೊಂಡು ವಾಹನಗಳಲ್ಲಿ ರಿಪ್ಲೆಕ್ಟರ್ ಹಾಕಿಕೊಳ್ಳುವ ಬಗ್ಗೆ ಮಾಹಿತಿ ನೀಡಬೇಕು ಜಿಲ್ಲಾ ಸಾರಿಗೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.