ತುಮಕೂರು: ಕ್ಯಾಬ್ ಮಾಡಿ ಉತ್ತರಕನ್ನಡಕ್ಕೆ ಯುವತಿ ಜತೆ ಹೊರಟ ಯುವಕ ಕಾರೊಳಗೆ ಪೆಟ್ರೋಲ್ ಬಾಂಬ್ ಸ್ಫೋಟಿಸಿಕೊಂಡು ಸಾವು!

Published : Jun 27, 2026, 03:50 PM IST
Tumkur car fire incident

ಸಾರಾಂಶ

ತುಮಕೂರು ಜಿಲ್ಲೆಯ ಶಿರಾ ಬಳಿ, ಚಲಿಸುತ್ತಿದ್ದ ಕಾರಿನಲ್ಲಿ ಯುವಕನೊಬ್ಬ ಯುವತಿಗೆ ಚಾಕುವಿನಿಂದ ಇರಿದು, ಬಳಿಕ ಕಾರಿನೊಳಗೆ ಪೆಟ್ರೋಲ್ ಬಾಂಬ್ ಸಿಡಿಸಿಕೊಂಡು ಸಜೀವ ದಹನವಾಗಿದ್ದಾನೆ. ಈ ಭೀಕರ ಘಟನೆಯಲ್ಲಿ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.

ತುಮಕೂರು: ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಅತ್ಯಂತ ರೋಮಾಂಚನಕಾರಿ ಹಾಗೂ ಭೀಕರ ಘಟನೆಯೊಂದು ಸಂಭವಿಸಿದೆ. ಚಲಿಸುತ್ತಿದ್ದ ಕಾರಿನೊಳಗೆ ಯುವತಿಯೊಂದಿಗೆ ಗಲಾಟೆ ಮಾಡಿಕೊಂಡ ಯುವಕನೊಬ್ಬ, ಆಕೆಗೆ ಚಾಕುವಿನಿಂದ ಇರಿದು, ಬಳಿಕ ಕಾರಿನೊಳಗೆ ಪೆಟ್ರೋಲ್ ಬಾಂಬ್ ಸಿಡಿಸಿಕೊಂಡು ಸಜೀವ ದಹನವಾಗಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಬೆಂಗಳೂರಿನ ನಾಗೇಂದ್ರ (30) ಎಂಬಾತ ಕಾರಿನಲ್ಲೇ ಸುಟ್ಟು ಕರಕಲಾಗಿದ್ದು, ಆತನೊಂದಿಗಿದ್ದ ರಮ್ಯಾ ಉಲ್ಲಾಸ್ (23) ಎಂಬ ಯುವತಿ ತೀವ್ರ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಬೆಂಗಳೂರಿನಿಂದ ಅಂಕೋಲಾಕ್ಕೆ ಹೊರಟಿದ್ದ ಕಾರು

ಮೂಲಗಳ ಪ್ರಕಾರ, ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಒಟಿ ಟೆಕ್ನಿಷಿಯನ್ (OT Technician) ಆಗಿ ಕೆಲಸ ಮಾಡುತ್ತಿದ್ದ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಅಗಸೂರು ಗ್ರಾಮದ ರಮ್ಯಾ ಉಲ್ಲಾಸ್ ಹಾಗೂ ನಾಗೇಂದ್ರ ಬೆಂಗಳೂರಿನಿಂದ ಅಂಕೋಲಾಕ್ಕೆ ತೆರಳಲು ಖಾಸಗಿಯಾಗಿ ಕಾರೊಂದನ್ನು ಬುಕ್ ಮಾಡಿದ್ದರು. ಚಾಲಕನೊಂದಿಗೆ ಇವರಿಬ್ಬರು ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು. ಆದರೆ, ಕಾರು ತುಮಕೂರು ದಾಟುತ್ತಿದ್ದಂತೆ ನಾಗೇಂದ್ರ ಹಾಗೂ ರಮ್ಯಾ ನಡುವೆ ಯಾವುದೋ ವೈಯಕ್ತಿಕ ವಿಚಾರಕ್ಕೆ ಕಾರಿನಲ್ಲೇ ತೀವ್ರ ಜಗಳ ಆರಂಭವಾಗಿದೆ.

ಚಲಿಸುವ ಕಾರಿನಿಂದ ಹಾರಿದ ಯುವತಿ, ಚಾಲಕ ಇಳಿಯುತ್ತಿದ್ದಂತೆ ಕಾರು ಲಾಕ್!

ಮಾತಿನ ಚಕಮಕಿ ವಿಕೋಪಕ್ಕೆ ಹೋದಾಗ, ನಾಗೇಂದ್ರ ತಾನು ಮೊದಲೇ ಪ್ಲಾನ್ ಮಾಡಿ ತಂದಿದ್ದ ಚಾಕುವಿನಿಂದ ರಮ್ಯಾ ಅವರ ತಲೆ ಹಾಗೂ ದೇಹದ ಭಾಗಕ್ಕೆ ಮನಸೋಇಚ್ಛೆ ಚುಚ್ಚಿದ್ದಾನೆ. ಈ ವೇಳೆ ಪೆಟ್ರೋಲ್ ಬಾಂಬ್ ಇದೆ ಎಂಬುದು ಯುವತಿಗೆ ತಿಳಿದಿದೆ. ನಾಗೇಂದ್ರನ ಈ ರೌದ್ರಾವತಾರದಿಂದ ಬೆಚ್ಚಿಬಿದ್ದ ರಮ್ಯಾ, ಬೊಬ್ಬೆ ಹೊಡೆದು ಜೀವ ಉಳಿಸಿಕೊಳ್ಳಲು ಚಲಿಸುತ್ತಿದ್ದ ಕಾರಿನಿಂದಲೇ ಹೊರಗೆ ಹಾರಿದ್ದಾರೆ. ಕಾರಿನೊಳಗೆ ನಡೆಯುತ್ತಿದ್ದ ಈ ಭೀಕರ ದೃಶ್ಯ ಹಾಗೂ ಯುವತಿ ಕೆಳಗೆ ಬಿದ್ದಿದ್ದನ್ನು ಕಂಡು ಗಾಬರಿಗೊಂಡ ವಾಹನ ಚಾಲಕ ತಕ್ಷಣವೇ ಕಾರನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿ ಇಳಿದಿದ್ದಾನೆ. ಚಾಲಕ ಕೆಳಗೆ ಇಳಿಯುತ್ತಿದ್ದಂತೆಯೇ ನಾಗೇಂದ್ರ ಒಳಗಿನಿಂದ ಕಾರಿನ ಎಲ್ಲಾ ಡೋರ್‌ಗಳನ್ನು ಸೆಂಟ್ರಲ್ ಲಾಕ್ ಮಾಡಿಕೊಂಡಿದ್ದಾನೆ.

ಮೊದಲೇ ರೂಪಿಸಿದ್ದ ಸ್ಕೆಚ್? ಪೆಟ್ರೋಲ್ ಬಾಂಬ್ ಸಿಡಿಸಿಕೊಂಡ ಶಂಕೆ!

ಡೋರ್ ಲಾಕ್ ಮಾಡಿಕೊಂಡ ಕೆಲವೇ ಕ್ಷಣಗಳಲ್ಲಿ ಕಾರಿನೊಳಗೆ ಭಾರಿ ಪ್ರಮಾಣದ ಸ್ಫೋಟ ಸಂಭವಿಸಿದ್ದು, ಇಡೀ ಕಾರು ಧಗಧಗನೆ ಹೊತ್ತಿ ಉರಿಯಲಾರಂಭಿಸಿದೆ. ನಾಗೇಂದ್ರ ತಾನು ಮೊದಲೇ ಸಿದ್ಧಪಡಿಸಿಕೊಂಡು ತಂದಿದ್ದ ‘ಪೆಟ್ರೋಲ್ ಬಾಂಬ್’ ಅನ್ನು ಕಾರಿನೊಳಗೆ ಸಿಡಿಸಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಬೆಂಕಿ ಇಡೀ ಕಾರನ್ನು ಆವರಿಸಿದ್ದರಿಂದ ನಾಗೇಂದ್ರನಿಗೆ ಹೊರಬರಲು ಸಾಧ್ಯವಾಗದೆ ಕಾರಿನೊಳಗೇ ಸಜೀವ ದಹನವಾಗಿದ್ದಾನೆ. ರಾಷ್ಟ್ರೀಯ ಹೆದ್ದಾರಿಯಲ್ಲೇ ಕಾರು ಹೊತ್ತಿ ಉರಿದು ಭಸ್ಮವಾಗಿದೆ.

ಸ್ಥಳಕ್ಕೆ ಎಸ್ಪಿ ಭೇಟಿ, ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲು

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅಶೋಕ್ ಅವರು ಉನ್ನತ ಅಧಿಕಾರಿಗಳ ತಂಡದೊಂದಿಗೆ ಜೋಗಿಹಳ್ಳಿ ಬಳಿಯ ದುರಂತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತ ಕಾರಿನಿಂದ ಜಿಗಿದು ತೀವ್ರ ರಕ್ತಸ್ರಾವ ಹಾಗೂ ಗಾಯಗಳಾಗಿದ್ದ ರಮ್ಯಾ ಉಲ್ಲಾಸ್ ಅವರನ್ನು ತಕ್ಷಣವೇ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಸದ್ಯ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಭೀಕರ ಘಟನೆ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸುಟ್ಟು ಕರಕಲಾದ ಕಾರನ್ನು ವಶಕ್ಕೆ ಪಡೆದಿದ್ದಾರೆ. ನಾಗೇಂದ್ರ ಮತ್ತು ರಮ್ಯಾ ನಡುವೆ ಇದ್ದ ಸಂಬಂಧವೇನು? ಇಬ್ಬರ ನಡುವೆ ಜಗಳಕ್ಕೆ ಕಾರಣವಾಗಿತ್ತು? ನಾಗೇಂದ್ರ ಮೊದಲೇ ಕೊಲೆ ಹಾಗೂ ಆತ್ಮಹತ್ಯೆಯ ಪ್ಲಾನ್ ಮಾಡಿಕೊಂಡಿದ್ದನೇ? ಎಂಬ ಹಲವು ಆಯಾಮಗಳಲ್ಲಿ ಕಳ್ಳಂಬೆಳ್ಳ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

PREV
Read more Articles on
click me!

Recommended Stories

UPI Payment: ಯುಪಿಐ ವಹಿವಾಟಿನ ಮೇಲಿನ ಶುಲ್ಕ: ಕೇಂದ್ರದ ವಿರುದ್ಧ ಹೋರಾಟಕ್ಕೆ ಕರೆ ನೀಡಿದ ಸಿಎಂ!
101 ಬರಪೀಡಿತ ತಾಲೂಕು ರೈತರಿಗೆ ಸರ್ಕಾರದಿಂದ ಗುಡ್‌ನ್ಯೂಸ್: 5 ವರ್ಷದವರೆಗೆ ರೈತರ ಸಾಲ ವಸೂಲಿಗೆ ಬ್ರೇಕ್‌!